ರಾಜ್ಯದ ಎಲ್ಲ ಬಹುಮಹಡಿ ಮತ್ತು ಎತ್ತರದ ಕಟ್ಟಡಗಳಿಗೆ 1% ಸೆಸ್ ವಿಧಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಅಗ್ನಿಶಾಮಕ ದಳ ಕಾಯ್ದೆ ಅನ್ವಯ ಆಗುವ ವಾಣಿಜ್ಯ ಕಟ್ಟಡಗಳು, ಕೈಗಾರಿಕಾ ಸಂಕೀರ್ಣಗಳು, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ ಕಟ್ಟಡಗಳು, ಅಪಾರ್ಟ್ಮೆಂಟ್ ಗಳು ಸೇರಿ ಎತ್ತರದ ಬಹುಮಹಡಿ ಕಟ್ಟಡಗಳಿಗೆ 1% ಸೆಸ್ ವಿಧಿಸಲು ಸರ್ಕಾರ ನಿರ್ಧರಿಸಿದೆ.
ಸಂಪುಟ ಸಭೆಯಲ್ಲಿ ಇತರ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರಿನ ಸ್ಪೇಸ್ ಟೆಕ್ ನಲ್ಲಿ ಉತ್ಕೃಷ್ಟತಾ ಕೇಂದ್ರ ಸ್ಥಾಪನೆಗೆ ಸಂಪುಟ ಅನುಮೋದನೆ ನೀಡಿದೆ. ರಾಯಚೂರಿನ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ ಕಿದ್ವಾಯಿ ಪೆರಿಫೆರಲ್ ಕ್ಯಾನ್ಸರ್ ಚಿಕಿತ್ಸಾ ಘಟಕವನ್ನು 50 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ಕೊಟ್ಟಿದೆ.
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿರುದ್ಧ ಇಲಾಖಾ ತನಿಖೆ ನಡೆಸುವ ಜೊತೆಗೆ ಆರ್ಸಿಬಿ, ಕೆಎಸ್ಸಿಎ ವಿರುದ್ಧ ಕ್ರಿಮಿನಲ್ ಕೇಸ್ಗೆ ಅಧಿಕೃತ ಒಪ್ಪಿಗೆ ನೀಡಲಾಗಿದೆ. ನ್ಯಾಯಮೂರ್ತಿ ಕುನ್ಹಾ ವರದಿ ಶಿಫಾರಸು ಜಾರಿಗೆ ಸಂಪುಟ ಒಪ್ಪಿಗೆ ನೀಡಿದ್ದು, ಡಿಎನ್ಎ ಈವೆಂಟ್ ಮ್ಯಾನೆಜ್ಮೆಂಟ್ ಸಂಸ್ಥೆ ವಿರುದ್ಧವೂ ಕ್ರಿಮಿನಲ್ ಕೇಸ್ ದಾಖಲಿಸಲು ನಿರ್ಧರಿಸಿದೆ.
ಜೀವಾವಧಿ ಶಿಕ್ಷೆಯಾಗಿರುವ ಕೈದಿಗಳಿಗೆ ಸನ್ನಡತೆ ಆಧಾರದಲ್ಲಿ ಬಿಡುಗಡೆ ಕಲ್ಪಿಸಲು ಒಪ್ಪಿಗೆ ನೀಡಲಾಗಿದೆ. ರಾಜ್ಯದ ನಾನಾ ಕೇಂದ್ರ ಕಾರಾಗೃಹಗಳಲ್ಲಿರುವ 46 ಜೀವಾವಧಿ ಕೈದಿಗಳ ಬಿಡುಗಡೆಗೆ ಸಂಪುಟ ಒಪ್ಪಿಗೆ ಸೂಚಿಸಿದೆ.