ದೆಹಲಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ 200 ವಿಮಾನಗಳ ಸಂಚಾರ ವ್ಯತ್ಯಯಗೊಂಡಿದೆ. ದೆಹಲಿಯಲ್ಲಿ ಇಡೀ ರಾತ್ರಿ ಗುಡುಗು ಸಹಿತ ಮಳೆಯಾಗಿ ಮರಗಳು, ವಿದ್ಯುತ್ ಕಂಬಗಳು ಧರೆಗುಳಿದಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ತುಂಬಿವೆ.
ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿರುಗಾಳಿ ಮತ್ತು ಭಾರೀ ಮಳೆಯಿಂದಾಗಿ 200ಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದ್ದರೆ, 49 ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿದೆ. ಕೇರಳದಲ್ಲೂ ಧಾರಾಕಾರ ಮಳೆಯಾಗಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಇಡುಕ್ಕಿ ಮಲಂಕರ ಅಣೆಕಟ್ಟಿನ 5 ಗೇಟ್ಗಳನ್ನು ತೆರೆದು ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲಾಗಿದೆ. ತೋಡುಪುಳ ಮತ್ತು ಮೂವಾಟ್ಟುಪುಳ ನದಿ ದಡದ ನಿವಾಸಿಗಳಿಗೆ ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ. ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದಲ್ಲೂ ವ್ಯಾಪಕ ಮಳೆಯಾಗುತ್ತಿದ್ದು, ಕರಾವಳಿ, ಮಲೆನಾಡುಗಳಲ್ಲಿ ಸಂಚಾರ ದುಸ್ತರವಾಗಿ ಪರಿಣಮಿಸಿದ್ದು, ನದಿಗಳು ತೊರೆಗಳು ತುಂಬಿ ಹರಿಯುತ್ತಿವೆ. ಮಹಾರಾಷ್ಟ್ರದಲ್ಲೂ ಮುಂಗಾರು ಆರಂಭಗೊಂಡಿದೆ.