Menu

ಕೆಆರ್ ಎಸ್ ನಿಂದ 29,000 ಕ್ಯೂಸೆಕ್ಸ್ ನೀರು ಬಿಡುಗಡೆ: ನದಿಪಾತ್ರದಲ್ಲಿ ಪ್ರವಾಹ ಭೀತಿ!

ಮಂಡ್ಯ: ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯವು ಭರ್ತಿಯಾಗುವ ಹಂತಕ್ಕೆ ತಲುಪಿದೆ. ಹೀಗಾಗಿ, ಡ್ಯಾಂನಿಂದ ಯಾವುದೇ ಸಮಯದಲ್ಲಿ ಹೆಚ್ಚಿನ ನೀರು ಬಿಡುಗಡೆಯಾಗುವ ಸಾಧ್ಯತೆಯಿದ್ದು, ನದಿ ಪಾತ್ರದ ಜನರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಕೆಆರ್‌ಎಸ್​ನಿಂದ ಹೆಚ್ಚಿನ ನೀರು ಬಿಡುಗಡೆ ಸಾಧ್ಯತೆ: ಕೆಆರ್‌ಎಸ್‌ ಜಲಾಶಯ ಭರ್ತಿಯಂಚು ತಲುಪಿರುವುದರಿಂದ ಹೊರ ಹರಿವಿನ ಪ್ರಮಾಣವನ್ನು ಯಾವುದೇ ಸಂದರ್ಭದಲ್ಲೂ ಹೆಚ್ಚಿಸಬಹುದು. ಹೀಗಾಗಿ, ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಯಿದೆ ಎಂದು ಜನರಿಗೆ ಕಾವೇರಿ ನೀರಾವರಿ ನಿಗಮ ಮುನ್ನೆಚ್ಚರಿಕೆ ನೀಡಿದೆ.

ಪ್ರವಾಸಿ ತಾಣಗಳಿಗೂ ನಿಷೇಧ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಕೆಆರ್‌ಎಸ್‌ ಜಲಾಶಯದ ಒಳ ಹರಿವಿನ ಪ್ರಮಾಣವೂ ಹೆಚ್ಚಾಗಿದೆ. ಹೀಗಾಗಿ, ಅಣೆಕಟ್ಟೆಯಿಂದ ಪ್ರಸ್ತುತ 17 ಸಾವಿರ ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗಿದೆ. ಈ ಪ್ರಮಾಣವು ಯಾವುದೇ ಸಂದರ್ಭದಲ್ಲೂ 30,000 ಕ್ಯೂಸೆಕ್‌ಗೆ ಹೆಚ್ಚಾಗಬಹುದು. ಇದರಿಂದ ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶಗಳು ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಜನರು ಎಚ್ಚರ ವಹಿಸಬೇಕು. ತಮ್ಮ ಆಸ್ತಿಪಾಸ್ತಿ, ಜಾನುವಾರುಗಳ ರಕ್ಷಣೆಗೆ ಕ್ರಮ ವಹಿಸಬೇಕು ಎಂದು ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಎಂಜಿನಿಯರ್‌ ಕೆ.ರಘುರಾಮ್‌ ಮುನ್ನೆಚ್ಚರಿಕೆ ನೀಡಿದ್ದಾರೆ. ಜೊತೆಗೆ ಪ್ರವಾಸಿ ತಾಣಗಳಿಗೂ ಪ್ರವಾಸಿಗರ ನಿಷೇಧ ಹೇರಲಾಗಿದೆ.

ಜಿಲ್ಲಾಧಿಕಾರಿ ಸಭೆ: ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿಂದ ನೆರೆ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ. ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಮಿತಿ ಸಭೆ ನಡೆಸಿರುವ ಜಿಲ್ಲಾಧಿಕಾರಿ, ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಆಗಬಹುದಾದ ಹಾನಿ ಹಾಗೂ ಕೈಗೊಳ್ಳಬಹುದಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿ ಸಲಹೆ, ಸೂಚನೆ ನೀಡಿದ್ದಾರೆ.

ಅಗ್ನಿಶಾಮಕ, ಸೆಸ್ಕ್‌, ಅರಣ್ಯ, ತಹಸೀಲ್ದಾರ್‌, ನಗರ ಸ್ಥಳೀಯ ಸಂಸ್ಥೆಗಳು 24×7 ಕಾರ್ಯ ನಿರ್ವಹಿಸುವ ಕಂಟ್ರೋಲ್‌ ರೂಂ ಸ್ಥಾಪಿಸಬೇಕು. ಸಾರ್ವಜನಿಕರು ಸಂಪರ್ಕಿಸಬೇಕಿರುವ ದೂರವಾಣಿ ಸಂಖ್ಯೆಯ ಮಾಹಿತಿ ನೀಡಬೇಕು. ಅಗ್ನಿಶಾಮಕ ಇಲಾಖೆಯು ಅತಿವೃಷ್ಟಿ ಸಂದರ್ಭದಲ್ಲಿ ಬೇಕಿರುವ ಬೋಟ್‌, ಲೈಫ್‌ ಜಾಕೆಟ್‌ ಸೇರಿದಂತೆ ಇನ್ನಿತರೆ ಪರಿಕರಗಳು ಸುಸ್ಥಿತಿಯಲ್ಲಿರುವ ಬಗ್ಗೆ ಪರಿಶೀಲಿಸಿಕೊಳ್ಳಿ. ಸ್ಥಳೀಯವಾಗಿ ನುರಿತ ಈಜುಗಾರರ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಜಿಲ್ಲೆಯಲ್ಲಿ 67 ಗ್ರಾಮಗಳನ್ನು ನೆರೆಗೆ ಸಿಲುಕಬಹುದಾದ ಗ್ರಾಮಗಳು ಎಂದು ಈಗಾಗಲೇ ಗುರುತಿಸಲಾಗಿದೆ. ಈ ಗ್ರಾಮಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಬೇಕು. ತಹಸೀಲ್ದಾರ್‌ಗಳು ಗ್ರಾ.ಪಂ. ಮಟ್ಟದಲ್ಲಿ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಅವಶ್ಯಕವಾದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕಿದ್ದು, ಮೂಲ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಡಿಸಿ ಸೂಚನೆ ನೀಡಿದ್ದಾರೆ.

Related Posts

Leave a Reply

Your email address will not be published. Required fields are marked *