ಏಳು ವರ್ಷದ ಬಾಲಕಿ ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿರುವುದಾಗಿ ಆರೋಪ ಕೇಳಿಬಂದಿದೆ. ಮಂಡ್ಯ ನಗರದಲ್ಲಿ ಮಿಮ್ಸ್ ಆಸ್ಪತ್ರೆಯಲ್ಲಿ ಈ ಪ್ರಕರಣ ನಡೆದಿದೆ. ಮಳವಳ್ಳಿಯ ನೆಲ್ಲೂರು ಗ್ರಾಮದ ಸಾನ್ವಿ (7) ಮೃತ ಬಾಲಕಿ. ಪಾದದ ಮೂಳೆ ಮುರಿತದಿಂದ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಅಸು ನೀಗಿದ್ದು, ಮಿಮ್ಸ್ ಆಸ್ಪತ್ರೆಯ ವೈದ್ಯರ ವಿರುದ್ಧ ಬಾಲಕಿ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಟೈಲ್ಸ್ ಬಿದ್ದು ಬಾಲಕಿ ಸಾನ್ವಿಯ ಪಾದದ ಮೂಳೆ ಮುರಿದಿತ್ತು. ಮೇ 29ರಂದು ಮಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಎಲ್ಲಾ ಪರೀಕ್ಷೆಗಳ ನಂತರ ಅಂದೇ ಸಾನ್ವಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆಪರೇಷನ್ ಬಳಿಕ ರಾತ್ರಿಯೇ ವಾರ್ಡ್ಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಮರುದಿನ ಬೆಳಗ್ಗೆಯೇ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಮತ್ತೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಶನಿವಾರ (ನಿನ್ನೆ) ಬೆಳಗ್ಗೆ ಔಷಧಿ ನೀಡುತ್ತಿದ್ದಂತೆ ಪ್ರಜ್ಞಾಹೀನ ಸ್ಥಿತಿ ತಲುಪಿದ್ದ ಸಾನ್ವಿ ಮೃತಪಟ್ಟಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮೆಡಿಕಲ್ ವಿದ್ಯಾರ್ಥಿಗಳಿಂದ ಚಿಕಿತ್ಸೆ ಕೊಡಿಸಿದ್ದರಿಂದ ಸಾವಾಗಿದೆ ಎಂದು ದೂರಿದ್ದಾರೆ. ಪ್ರತಿಕ್ರಿಯಿಸಿರುವ ಮಿಮ್ಸ್ನ ಆರ್ಎಂಒ ಡಾ. ದರ್ಶನ್, ಅಂಗಾಂಗ ವೈಫಲ್ಯದಿಂದ ಬಾಲಕಿ ಮೃತಪಟ್ಟಿದ್ದು, ತನಿಖೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.