ಇದೇ ತಿಂಗಳು 27ರಂದು ಕೆಂಪೇಗೌಡ ಜಯಂತಿ ದಿನದಂದು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಶಾಲಾ ಪಠ್ಯಕ್ರಮದಲ್ಲಿ ಕೆಂಪೇಗೌಡರ ಕುರಿತ ಪಾಠವನ್ನು ಸೇರಿಸುವ ಬಗ್ಗೆ ಪ್ರಾಥಮಿಕ ಶಿಕ್ಷಣ ಸಚಿವರ ಜತೆ ಚರ್ಚೆ ಮಾಡಲಾಗುವುದು. ವಿಮಾನ ನಿಲ್ದಾಣ ಬಳಿಯ ಕೆಂಪೇಗೌಡ ಪ್ರತಿಮೆ ಸುತ್ತಮುತ್ತಲ ಪ್ರದೇಶ ಅಭಿವೃದ್ಧಿ ಮಾಡಲು ಸಚಿವ ಕೃಷ್ಣ ಭೈರೇಗೌಡ ಅವರಿಗೆ ಜವಾಬ್ದಾರಿ ನೀಡಲಾಗಿದೆ ಎಂದೂ ತಿಳಿಸಿದರು.
ವಿಧಾನಸೌಧದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಸಂಬಂಧ ಡಿ.ಕೆ. ಶಿವಕುಮಾರ್ ಪೂರ್ವಭಾವಿ ಸಭೆ ನಡೆಸಿ, ನಂತರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಪ್ರತಿಮೆ ಬಳಿ ಥೀಮ್ ಪಾರ್ಕ್ ಮಾಡಲಾಗುವುದೇ ಎಂದು ಕೇಳಿದಾಗ, ಬಿಜೆಪಿ ಕಾಲದಲ್ಲಿ ಒಂದು ಪ್ರತಿಮೆ ನಿಲ್ಲಿಸಿ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಿ ಕಾರ್ಯಕ್ರಮ ಮಾಡಿದರು. ಈ ಗುತ್ತಿಗೆದಾರರಿಗೆ ಬಿಲ್ ನೀಡಲಿಲ್ಲ. ಆ ವಿಚಾರದ ಬಗ್ಗೆ ಈಗ ಚರ್ಚೆ ಮಾಡಿ ನಾನು ವಿಷಯಾಂತರ ಮಾಡಲು ಬಯಸುವುದಿಲ್ಲ. ನಾವು ಆ ಪ್ರದೇಶ ಅಭಿವೃದ್ಧಿ ಮಾಡುತ್ತೇವೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕೃಷ್ಣ ಭೈರೇಗೌಡ ಅವರು ನೀಡುತ್ತಾರೆ ಎಂದರು.
ದೆಹಲಿಯಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣದ ಬಗ್ಗೆ ಕೇಳಿದಾಗ, “ಇದಕ್ಕೆ ದೆಹಲಿ ಸಿಎಂ ಹಾಗೂ ಪ್ರಧಾನಮಂತ್ರಿಗಳಿಗೆ ಪತ್ರ ಬರೆಯಬೇಕು. ಈ ಬಗ್ಗೆ ಸಂಸದರಿಗೆ ಮನವಿ ಮಾಡುತ್ತೇನೆ” ಎಂದು ತಿಳಿಸಿದರು.
ನಾಡಪ್ರಭು ಕೆಂಪೇಗೌಡರ ಜನ್ಮದಿನ ಆಚರಣೆ ವಿಚಾರವಾಗಿ ಇಂದು ಪೂರ್ವಭಾವಿ ಸಭೆ ಮಾಡಿದ್ದೇವೆ. ಈ ಸಭೆಯಲ್ಲಿ ಸುಮಾರು 150 ಪ್ರಮುಖ ನಾಯಕರು ಭಾಗವಹಿಸಿದ್ದರು. 60-70 ಜನ ಅನೇಕ ಸಲಹೆಗಳನ್ನು ನೀಡಿದ್ದಾರೆ. ಸಿದ್ದರಾಮಯ್ಯ ಅವರ ಕಳೆದ ಸರ್ಕಾರದಲ್ಲಿ ಪ್ರತಿ ಕೆಂಪೇಗೌಡ ಜಯಂತಿ ಆಚರಣೆಗೆ ತೀರ್ಮಾನ ಮಾಡಲಾಯಿತು. ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸುಮ್ಮನಹಳ್ಳಿ ಬಳಿ 5 ಎಕರೆ ಜಾಗವನ್ನು ನಿಗದಿ ಮಾಡಿದ್ದು, ಜೂನ್ 27ರಂದು ಕೆಂಪೇಗೌಡ ಜಯಂತಿ ಅಂಗವಾಗಿ ಅಂದೇ ಭೂಮಿ ಪೂಜೆ ಮಾಡಲು ತೀರ್ಮಾನಿಸಿದ್ದೇವೆ. ಈ ಕಟ್ಟಡದ ವಾಸ್ತುಶಿಲ್ಪಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.
ಪ್ರತಿ ವರ್ಷದಂತೆ ಈ ವರ್ಷ ಕೆಂಪೇಗೌಡರ ಗೋಪುರಗಳಿಂದ ಜ್ಯೋತಿ ಬರಲಿದ್ದು, ಪ್ರತಿ ಗೋಪುರಕ್ಕೂ ಒಬ್ಬರು ಶಾಸಕರಿಗೆ ಜವಾಬ್ದಾರಿ ನೀಡಲಾಗಿದೆ. 27ರಂದು ಬೆಳಗ್ಗೆ ಬಾಬು ಜಗಜೀವನ್ ರಾಮ್ ಅವರ ಭವನದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಆಚರಿಸಲಾಗುವುದು ಎಂದು ಹೇಳಿದರು.
ಎಲ್ಲಾ ವರ್ಗದ ಸಾಧಕರಿಗೆ ಪ್ರಶಸ್ತಿ
27ರಂದು ಸಂಜೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮಾಡಬೇಕಿದ್ದು, ಇದನ್ನು ವಾರ್ಡ್ ಮಟ್ಟಕ್ಕೆ ಸೀಮಿತಗೊಳಿಸುವುದು ಬೇಡ. ರಾಜ್ಯೋತ್ಸವ ಪ್ರಶಸ್ತಿಯಂತೆ ಎಲ್ಲಾ ವರ್ಗಕ್ಕೆ ಕ್ರೀಡೆ, ಸಾಹಿತ್ಯ, ಕಲೆ, ಪತ್ರಿಕೋದ್ಯಮ, ಕೈಗಾರಿಗೆ, ಪರಿಸರ ಸಂರಕ್ಷಣೆ ಸೇರಿ ಎಲ್ಲಾ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ನೀಡಲು ಚಿಂತನೆ ಮಾಡುತ್ತಿದ್ದೇವೆ. ಇದಕ್ಕೆ ಮಾರ್ಗಸೂಚಿ ನಿಗದಿ ಮಾಡಿ ಇದಕ್ಕೆ ಸಮಿತಿಯನ್ನು ರಚಿಸಲಾಗುವುದು ಎಂದು ತಿಳಿಸಿದರು.
ಪ್ರಾಧಿಕಾರದಿಂದ ದಸರಾಗೆ ಸ್ತಬ್ಧಚಿತ್ರ
ಈ ವರ್ಷದಿಂದ ಕೆಂಪೇಗೌಡ ಪ್ರಾಧಿಕಾರ ವತಿಯಿಂದ ಮೈಸೂರು ದಸರಕ್ಕೆ ಪ್ರತಿ ವರ್ಷ ಒಂದು ಸ್ಥಬ್ಧಚಿತ್ರ ಕಳಿಸುವ ಕೆಲಸವನ್ನು ಮಾಡಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಕೆಂಪೇಗೌಡ ಜಯಂತಿ ಆಚರಿಸಲು ಆರ್ಥಿಕ ನೆರವು ನೀಡಲಾಗುವುದು. ಶಾಲೆಗಳಲ್ಲಿ ಮಕ್ಕಳ ಚರ್ಚಾಸ್ಪರ್ಧೆ ಏರ್ಪಡಿಸಲಾಗುವುದು. ಆ ಮೂಲಕ ಬೆಂಗಳೂರು ಹಾಗೂ ಕೆಂಪೇಗೌಡರ ಇತಿಹಾಸದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಲಾಗುವುದು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.