ಸರಣಿ ಕೊಲೆಗಳಿಂದ ಪ್ರಕ್ಷುಬ್ಧಗೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳದ ಅಬ್ದುಲ್ ರಹಿಮಾನ್ ಹತ್ಯೆ ಬಳಿಕ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು, ಕೋಮು ಪ್ರಚೋದನೆ ನೀಡುತ್ತಿದ್ದವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ. 15 ಮುಸ್ಲಿಮರೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಟ್ಟು 36 ಜನರ ಗಡೀಪಾರು ಪ್ರಕ್ರಿಯೆ ಆರಂಭವಾಗಿದೆ.
ಗಡೀಪಾರು ಪಟ್ಟಿಯಲ್ಲಿ ಬಿಜೆಪಿಯ ಅರುಣ್ ಪುತ್ತಿಲ, ಭರತ್ ಕುಮ್ಡೇಲು, ಮಹೇಶ್ ಶೆಟ್ಟಿ ತಿಮರೋಡಿ ಹೆಸರಿದೆ. ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಪುತ್ತೂರು ನಗರ, ಪುತ್ತೂರು ಗ್ರಾಮಾಂತರ, ವಿಟ್ಲ, ಸುಳ್ಯ, ಬೆಳ್ಳಾರೆ ಬೆಳ್ತಂಗಡಿ, ಪುಂಜಾಲಕಟ್ಟೆ, ಕಡಬ ಹಾಗೂ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ 36 ಜನ ಗಡಿಪಾರು ಪಟ್ಟಿಯಲ್ಲಿದ್ದಾರೆ.
ಅರುಣ್ ಪುತ್ತಿಲ ನಾನು ಯಾವುದೇ ಕಾರಣಕ್ಕೂ ಗಡಿಪಾರುಆದೇಶ ಸ್ವೀಕರಿಸುವುದಿಲ್ಲ ಎಂದಿದ್ದಾರೆ. ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಬಂಟ್ವಾಳದ ಗ್ರಾಮಾಂತರ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಅವರ ವಿರುದ್ಧ ಯಾವುದೇ ಒತ್ತಡದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ ನೀಡಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಹಿಂದೂ ಸಂಘಟನೆಗಳ ಮುಖಂಡರ ಮನೆಗೆ ಭೇಟಿ ನೀಡಿದ್ದಾರೆ. ಜಿಪಿಎಸ್ ಟ್ರ್ಯಾಕರ್ ಮೂಲಕ ಹದ್ದಿನ ಕಣ್ಣಿಟ್ಟಿದ್ದಾರೆ. ಇದನ್ನು ವಿಹೆಚ್ಪಿ ಮುಖಂಡರು ವಿರೋಧಿಸಿ ಕಡಬ ಪೊಲೀಸ್ ಠಾಣೆ ಬಳಿ ಬಂದಿದ್ದಾರೆ. ಪೂರ್ವಾನುಮತಿ ಪಡೆಯದೆ ಅಕ್ರಮವಾಗಿ ಗುಂಪು ಕಟ್ಟಿಕೊಂಡು ಬಂದಿದ್ದಾರೆ ಎಂದು 15 ಹಿಂದೂ ಕಾರ್ಯಕರ್ತರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.
ದಕ್ಷಿಣ ಕನ್ನಡದಲ್ಲಿ ಕೆರಳಿಸುವ ಪ್ರಕ್ರಿಯೆಯನ್ನು ಸರ್ಕಾರವೇ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ದಕ್ಷಿಣ ಕನ್ನಡವನ್ನು ದಕ್ಷಿಣ ಕಾಶ್ಮೀರ ಮಾಡಿಕೊಳ್ಳಲು ಹೊರಟಿದ್ದಾರೆ. ಹಿಂದೂಗಳನ್ನು ಗುರಿ ಮಾಡಲಾಗುತ್ತಿದೆ ಎಂದು ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ.