ನಾಡಹಬ್ಬ ಮೈಸೂರು ದಸರಾ ಉದ್ಘಾಟಕರಾಗಿ ಸರ್ಕಾರ ಸಾಹಿತಿ, ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ ಹೈಕೋರ್ಟ್ಗೆ ಸಲ್ಲಿಕೆಯಾಗಿರುವ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.
ಅರ್ಜಿಗಳ ವಿಚಾರಣೆ ನಡೆಸಿದ ಸಿಜೆ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿಎಂ ಜೋಶಿ ಅವರಿದ್ದ ಪೀಠ, ದಸರಾ ಉದ್ಘಾಟನೆ ವಿಚಾರದಲ್ಲಿ ಯಾವುದೇ ಹಕ್ಕು ಉಲ್ಲಂಘನೆ ಆಗಿರುವುದು ಕಂಡುಬಂದಿಲ್ಲ. ಹೀಗಾಗಿ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದಿದೆ.
ಮಾಜಿ ಸಂಸದ ಪ್ರತಾಪ್ ಸಿಂಹ , ಗಿರೀಶ್ ಕುಮಾರ್ ಮತ್ತು ಗೌರವ್ ಎಂಬವರು ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಪಿಐಎಲ್ ಸಲ್ಲಿಸಿದ್ದು, ಹೈಕೋರ್ಟ್ ಮುಖ್ಯ ನ್ಯಾ. ವಿಭು ಬಕ್ರು ನೇತೃತ್ವದ ವಿಭಾಗೀಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಿತು.
ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು, ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆ ಮಾಡುವ ಸಂಪ್ರದಾಯವಿದೆ. ರಾಜ್ಯ ಸರ್ಕಾರ ಬಾನು ಮುಷ್ತಾಕ್ ಅವರ ಆಯ್ಕೆ ಮಾಡುವ ಮೂಲಕ ಹಿಂದೂಗಳ ಭಾವನೆಗೆ ಘಾಸಿ ಮಾಡಿದೆ. ಹೀಗಾಗಿ ಬಾನು ಮುಷ್ತಾಕ್ ಅವರಿಗೆ ನೀಡಿರುವ ಆಹ್ವಾನ ಹಿಂಪಡೆಯಲು ನಿರ್ದೇಶನ ನೀಡಬೇಕು ಅನ್ನುವುದು ಅರ್ಜಿದಾರರ ಮನವಿಯಾಗಿತ್ತು.
ಹಿಂದೂ ಆಗಮಿಕ ಪದ್ಧತಿಯಂತೆ ದಸರಾ ಉದ್ಘಾಟನೆ ನಡೆಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಕೆಯಾಗಿತ್ತು. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರ ಆಯ್ಕೆ ಯೋಗ್ಯವಾದುದು ಎಂದು ಪ್ರಶಂಸೆಗಳ ಜೊತೆಗೆ ಅವರ ಆಯ್ಕೆ ಸರಿಯಲ್ಲ, ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಎಂಬ ವಾದವೂ ತೀವ್ರಗೊಂಡಿದೆ. ಈಗ ಹೈಕೋರ್ಟ್ ಕೂಡ ಬಾನು ಅವರ ಆಯ್ಕೆ ಬಗೆಗಿನ ವಿವಾದಕ್ಕೆ ಅಂತ್ಯ ಹಾಡಿದೆ.