ಆರ್ಸಿಬಿ ವಿಜಯೋತ್ಸವ ವೇಳೆ ನಡೆದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್ ಸೇರಿದಂತೆ ಹಲವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರನ್ನು ಅಮಾನತುಗೊಳಿಸಿರುವ ಸರ್ಕಾರ ಆದೇಶದ ವಿರುದ್ಧ ಮಡಿವಾಳ ಠಾಣೆಯ ಹೆಡ್ ಕಾನ್ಸ್ಟೇಬಲ್ ರಾಜಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿದ್ದಾರೆ.
ಹೆಡ್ ಕಾನ್ಸ್ಟೇಬಲ್ ನರಸಿಂಹರಾಜು ಅವರು ಸರ್ಕಾರದ ಕ್ರಮ ಖಂಡಿಸಿ ಅಂಬೇಡ್ಕರ್ ಪೋಟೊ ಹಿಡಿದು ಕಪ್ಪುಪಟ್ಟಿ ಧರಿಸಿ ರಾಜಭವನದ ಎದುರು ಅವರು ಪ್ರತಿಭಟನೆ ನಡೆಸಿದ್ದಾರೆ. ದೂರಿನಲ್ಲಿ ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ರದ್ದು ಪಡಿಸಬೇಕು. ಈ ಮೂಲಕ ಪೊಲೀಸ್ ಇಲಾಖೆಗೆ ನೈತಿಕ ಸ್ಥೈರ್ಯ ತುಂಬಬೇಕು ಎಂದು ಬರೆದಿದ್ದಾರೆ. ಅವರನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರ್ಸಿಬಿ ವಿಜಯೋತ್ಸವದ ವೇಳೆ ನಡೆದ ದುರಂತದಲ್ಲಿ 11 ಅಭಿಮಾನಿಗಳು ಅಸು ನೀಗಿದ್ದರು. ಹಲವರು ಗಾಯಗೊಂಡಿದ್ದರು. ವಿಧಾನಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾಗರೋಪಾದಿಯಲ್ಲಿ ಜನ ನೆರೆದಿದ್ದರು. ಜನರ ನೂಕುನುಗ್ಗಲಿಂದ ಕಾಲ್ತುಳಿತ ಉಂಟಾಗಿ ಈ ದುರಂತ ಸಂಭವಿಸಿತ್ತು. ಪ್ರಕರಣಕ್ಕೆ ಸಂಬಂಧಿ ಸಿದಂತೆ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್, ಅಡಿಷನಲ್ ಕಮಿಷನರ್ ವಿಕಾಸ್ ಕುಮಾರ್, ಸೆಂಟ್ರಲ್ ಡಿಸಿಪಿ ಶೇಖರ್ ತೆಕ್ಕಣ್ಣನವರ್, ಎಸಿಪಿ ಬಾಲಕೃಷ್ಣ, ಇನ್ಸ್ಪೆಕ್ಟರ್ ಗಿರೀಶ್ ಅವರನ್ನು ಅಮಾನತು ಮಾಡಲಾಗಿತ್ತು.