Tuesday, September 16, 2025
Menu

ಸಚಿವ ಜಮೀರ್ ಅಕ್ರಮ ಆಸ್ತಿ ಕೇಸ್‌: ಸಚಿವ ದಿನೇಶ್‌ ಗುಂಡೂರಾವ್‌ಗೆ ಲೋಕಾಯುಕ್ತ ನೋಟಿಸ್‌

ವಸತಿ ಸಚಿವ ಸಚಿವ ಜಮೀರ್ ಅಹ್ಮದ್ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ.  ಸಚಿವ ಜಮೀರ್ ಜೊತೆಗೆ 3-4 ವರ್ಷಗಳಿಂದ ಆರ್ಥಿಕ ವ್ಯವಹಾರ ಹೊಂದಿರುವ ಹಿನ್ನೆಲೆ ಲೋಕಾಯುಕ್ತ ಪೊಲೀಸರು, ದಿನೇಶ್ ಗುಂಡೂರಾವ್‌ಗೆ ನೋಟಿಸ್ ನೀಡಿ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ.

ದಿನೇಶ್ ಗುಂಡೂರಾವ್ ದಾಖಲೆ ಕ್ರೋಢೀಕರಿಸಲು ಕಾಲಾವಕಾಶ ಕೋರಿದ್ದಾರೆ. ಸಚಿವ ಜಮೀರ್ ಅಹ್ಮದ್‌ಗೆ 2.5 ಕೋಟಿ ರೂ. ನೀಡಿದ್ದ ವಿಚಾರವಾಗಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿ ವಿಚಾರಣೆ ನಡೆಸಿದ್ದಾರೆ.

2019ರಲ್ಲಿ ಐ ಮಾನಿಟರಿ ಅಡ್ವೈಸರಿ ಕಂಪನಿಯ ಬಹುಕೋಟಿ ವಂಚನೆ ಹಗರಣ ಬೆಳಕಿಗೆ ಬಂದಿತ್ತು. ಈ ವಂಚಕ ಕಂಪನಿ ಜೊತೆ ನಂಟು ಹೊಂದಿದ್ದ ಆರೋಪದಡಿ ಜಮೀರ್ ಅಹಮದ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು.

ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಜಮೀರ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಅಂದು ಅಸ್ತಿತ್ವದಲ್ಲಿದ್ದ ಭ್ರಷ್ಟಾಚಾರ ನಿಗ್ರಹ ದಳ ಪ್ರಕರಣ ದಾಖಲಿಸಿತ್ತು. ಎಸಿಬಿ ರದ್ದಾದ ಬಳಿಕ ತನಿಖೆ ಲೋಕಾಯುಕ್ತ ಪೊಲೀಸರಿಗೆ ವರ್ಗವಾಗಿತ್ತು. ಈಗ ಸಚಿವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದು, ಹಲವರ ವಿಚಾರಣೆ ನಡೆಸುತ್ತಿದ್ದಾರೆ.

ರಾಧಿಕಾ ಕುಮಾರಸ್ವಾಮಿ ಬಳಿಯಿಂದ ಜಮೀರ್‌ 2.5 ಕೋಟಿ ರೂ. ಸಾಲ ಪಡೆದಿದ್ದರು. ನಾನು 2012ರಲ್ಲಿ ಶಮಿಕಾ ಎಂಟರ್‌ಪ್ರೈಸಸ್ ಹೆಸರಿನಲ್ಲಿ ಯಶ್ ಹಾಗೂ ರಮ್ಯಾ ಅಭಿನಯದ ಲಕ್ಕಿ ಸಿನಿಮಾ ನಿರ್ಮಾಣ ಮಾಡಿದ್ದೆ. ಮನರಂಜನಾ ಚಾನೆಲ್‌ಗಳಿಗೆ ಈ ಸಿನಿಮಾದ ಸ್ಯಾಟಲೈಟ್ ಹಕ್ಕು ಹಾಗೂ ಚಲನಚಿತ್ರದ ಯಶಸ್ವಿನಿಂದ ಸಂಪಾದಿಸಿದ ಹಣದಲ್ಲಿ ಜಮೀರ್ ಅಹ್ಮದ್ ಅವರಿಗೆ 2.5 ಕೋಟಿ ರೂ. ಸಾಲ ನೀಡಿದ್ದೆ ಎಂದು ರಾಧಿಕಾ ವಿಚಾರಣೆ ವೇಳೆ ಮಾಹಿತಿ ನೀಡಿದ್ದರು.

ಪ್ರಕರಣದ ತನಿಖೆ ವೇಳೆ ಗುಜರಿ ಉದ್ಯಮಿ ಕೆಜಿಎಫ್ ಬಾಬು ಮತ್ತು ಜಮೀರ್‌ ಅಹ್ಮದ್‌ ನಡುವೆ ಹಣದ ವ್ಯವಹಾರ ನಡೆದಿರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸ್‌ ನೋಟಿಸ್‌ ನೀಡಿ ವಿಚಾರಣೆ ನಡೆಸಿತ್ತು. 2013ರಲ್ಲಿ ಮನೆ ಖರೀದಿಗಾಗಿ ಜಮೀರ್‌ಗೆ 3.70 ಕೋಟಿ ರೂ. ಸಾಲ ನೀಡಿರುವುದಾಗಿ ಕೆಜಿಎಫ್‌ ಬಾಬು ಒಪ್ಪಿಕೊಂಡಿದ್ದರು.

 

Related Posts

Leave a Reply

Your email address will not be published. Required fields are marked *