ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಎಸೆದರು.
ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ದಸರಾ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಳ ಮಟ್ಟದ ರಾಜಕಾರಣ ಮಾಡುವುದು ಕ್ಷುಲ್ಲಕ ಎಂದು ಹೇಳಿದರು.
ನಾಡಿನ ಬಹುಸಂಖ್ಯಾತ ಸಮುದಾಯ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಿರುವುದನ್ನು ಸ್ವಾಗತಿಸಿದೆ. ಇದು ಹೆಮ್ಮೆಯ ಸಂಗತಿ. ಅಂತಾರಾಷ್ಡ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿರುವುದು ಸೂಕ್ತವಾಗಿದೆ. ಬಾನು ಮುಷ್ತಾಕ್ ಮುಸ್ಲಿಂ ಮಹಿಳೆ ಎನ್ನುವುದಕ್ಕಿಂತ ಮಾನವೀಯ ಮೌಲ್ಯ ಪಾಲಿಸುವ ಮನುಷ್ಯರು. ನಾವು ಮನುಷ್ಯರು ಪರಸ್ಪರ ಪ್ರೀತಿಯಿಂದ ಬಾಳಬೇಕು. ದ್ವೇಷ ಮನುಷ್ಯತ್ವದ ವಿರೋಧಿ. ಆದ್ದರಿಂದ ದ್ವೇಷವನ್ನು ಆಚರಿಸುವವರು ಮನುಷ್ಯತ್ವದ ವಿರೋಧಿಗಳು ಎಂದರು.
ಸಂವಿಧಾನದ ಮೌಲ್ಯಗಳಾದ ಸಹಿಷ್ಣತೆ-ಸಹಬಾಳ್ವೆ ಪಾಲಿಸುವವರು ಮಾತ್ರ ಅಪ್ಪಟ ಭಾರತೀಯರು. ನಮ್ಮ ಸಂವಿಧಾನ ಜಾತ್ಯತೀತ ಮತ್ತು ಧರ್ಮಾತೀತ. ಇದನ್ನೇ ಹೈಕೋರ್ಟ್- ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಯಾರಿಗೆ ಭಾರತೀಯರು ಎನ್ನುವ ಹೆಮ್ಮೆ ಇರುತ್ತದೋ ಅವರಿಗೆ ಮಾತ್ರ ಸಂವಿಧಾನದ ಬಗ್ಗೆ ಹೆಮ್ಮೆ ಇರುತ್ತದೆ. ನಮಗೆ ನಮ್ಮ ಹಕ್ಕು ಮತ್ತು ಜವಾಬ್ದಾರಿಗಳು ಗೊತ್ತಾಗಬೇಕಾದರೆಸಂವಿಧಾನ ಗೊತ್ತಿರಬೇಕು ಎಂದು ಹೇಳಿದರು.
ಗುಡಿ-ಚರ್ಚು-ಮಸೀದಿಗಳ ಬಿಟ್ಟು ಹೊರ ಬನ್ನಿ: ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ: ಕುವೆಂಪು ಮಾತನ್ನು ಉಲ್ಲೇಖಿಸಿದ ಸಿಎಂ, ರಾಷ್ಟ್ರಕವಿ ಕುವೆಂಪು ಅವರ ಮಾತನ್ನು ನಾವು ಮರೆಯಬಾರದು. ಗುಡಿ-ಚರ್ಚು-ಮಸೀದಿಗಳ ಬಿಟ್ಟು ಹೊರ ಬನ್ನಿ ಎಂದು ಕರೆ ನೀಡಿದರು. ಕುವೆಂಪು ಅವರ ಆಶಯದ ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ರಾಜ್ಯವನ್ನು ಗಟ್ಟಿಗೊಳಿಸಬೇಕು ಎಂದು ಕುವೆಂಪು ಅವರ ಮಾತನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳುಜಾತ್ಯತೀತತೆಯ ವಿರೋಧಿಗಳಿಗೆ ಚಾಟಿ ಬೀಸಿದರು.
ಸಂವಿಧಾನದ ಆಶಯದಂತೆ ಎಲ್ಲಾ ಜಾತಿ, ಎಲ್ಲಾ ಧರ್ಮದ ಮತ್ತು ಎಲ್ಲಾ ಪಕ್ಷದ ಬಡವರಿಗೆ ನಾವು ಗ್ಯಾರಂಟಿ ಗಳನ್ನು ಜಾರಿ ಮಾಡಿದ್ದೇವೆ. ಬಿಜೆಪಿಯವರು ಗ್ಯಾರಂಟಿಗಳ ಫಲಾನುಭವಿಗಳಲ್ಲವೇ ಎಂದು ಸಿಎಂ ಪ್ರಶ್ನಿಸಿದರು. ಈ ಗ್ಯಾರಂಟಿಗಳು ನಿಲ್ಲುವುದಿಲ್ಲ. ನಮ್ಮ ಗ್ಯಾರಂಟಿಗಳಿಂದಾಗಿ ನಮ್ಮ ರಾಜ್ಯದ ನಮ್ಮ ಜನಗಳ ತಲಾ ಆದಾಯ ದೇಶದಲ್ಲೇ ನಂಬರ್ ಒನ್ ಆಗಿದೆ. ಈಗ GDP ಯಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಒಂದು ಕಡೆ ನಮ್ಮ ಗ್ಯಾರಂಟಿಗಳನ್ನು ವಿರೋಧಿಸುವ ಬಿಜೆಪಿಯವರೇ ಮತ್ತೊಂದು ಕಡೆ ನಮ್ಮ ಗ್ಯಾರಂಟಿಗಳನ್ನು ಕದ್ದಿದ್ದಾರೆ ಎಂದರು.