ರಾಜ್ಯದಲ್ಲಿ ಮುಂದಿನ ಮೂರು ದಿನಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗುಂಬೆ ಘಾಟಿಯಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ಜೂ.15ರಿಂದ ಸೆ.30ರವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ವಾಹನಗಳ ನಿಯಮಾವಳಿಗಳು 1989 ಕಲಂ 221 (ಎ) 2 ಮತ್ತು 5 ರ ಅನ್ವಯ ನಿಷೇಧವನ್ನು ಹೇರಲಾಗಿದ್ದು, ಈ ಆದೇಶದ ಅನ್ವಯ ಜೂ.15ರಿಂದ ಸೆ.30ರವರೆಗೆ ಈ ಮಾರ್ಗದಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರುಗಳಲ್ಲಿ ಭಾರೀ ಮಳೆಯಾಗಲಿದ್ದು, ಈ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಗತ್ಯ ಕೆಲಸಗಳಿದ್ದರೆ ಮಾತ್ರ ಮನೆಯಿಂದ ಹೊರಗೆ ಬರುವಂತೆ ಮನವಿ ಮಾಡಿಕೊಳ್ಳಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ ಮೈಸೂರು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.