ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ಕಾರ್ಯದಲ್ಲಿ ಮನೆಗಳನ್ನು ಗುರುತಿಸಿ ಪಟ್ಟಿ ಮಾಡಲು ಬೆಸ್ಕಾಂ ಮೀಟರ್ ರೀಡರ್ಗಳನ್ನು ನಿಯೋಜಿಸಲಾಗಿದೆ. ಇದರ ಪರಿಣಾಮವಾಗಿ ಕೆಲವು ಗೃಹ ಜ್ಯೋತಿ ಯೋಜನೆ ಫಲಾನುಭವಿಗಳ ವಿದ್ಯುತ್ ಬಿಲ್ನಲ್ಲಿ ಅಸಮಂಜಸ ವ್ಯತ್ಯಯ ಕಂಡುಬಂದಿದೆ. ಈ ಬಗ್ಗೆ ಬೆಸ್ಕಾಂ ಸ್ಪಷ್ಟನೆ ನೀಡಿದ್ದು, ಗ್ರಾಹಕರಿಗೆ ಉಂಟಾದ ವ್ಯತ್ಯಯವನ್ನು ಸರಿಪಡಿಸಿ ಶೀಘ್ರದಲ್ಲೇ ಪರಿಷ್ಕೃತ ಬಿಲ್ ವಿತರಿಸಲಾಗುವುದು ಎಂದು ತಿಳಿಸಲಾಗಿದೆ.
ಸೆಪ್ಟೆಂಬರ್ ತಿಂಗಳಲ್ಲಿ ಮೀಟರ್ ರೀಡರ್ಗಳು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಭಾಗವಾಗಿ ಮನೆಗಳನ್ನು ಪಟ್ಟಿ ಮಾಡುವ ಕಾರ್ಯ ಹಾಗೂ ಮೀಟರ್ ರೀಡಿಂಗ್ಅನ್ನು ಪ್ರೋಬ್ಗಳ ಮೂಲಕ ಮೊದಲ ಬಾರಿಗೆ ನಡೆಸುತ್ತಿರುವುದರಿಂದ ವಿದ್ಯುತ್ ಬಿಲ್ ವಿತರಣೆಯ ದಿನಾಂಕವನ್ನು ಸೆ.15ನೇ ತಾರಿಕಿನಿಂದ 25ನೇ ತಾರೀಕಿನವರೆಗೆ ವಿಸ್ತರಿಸಲಾಗಿತ್ತು.
ವಿದ್ಯುತ್ ಬಿಲ್ ಸಬ್ಸಿಡಿ ಮೇಲೆ ಪ್ರಭಾವವಿಲ್ಲ: ಬೆಸ್ಕಾಂ ಸ್ಪಷ್ಟನೆ
ಈ ಪ್ರಕ್ರಿಯೆಯಿಂದ ಕೆಲ ಪ್ರಕರಣಗಳಲ್ಲಿ ಗೃಹಜ್ಯೋತಿ ಗ್ರಾಹಕರಿಗೆ ಭಾಗಶಃ ಬಿಲ್ ಬಂದಿರುವುದು ಬೆಸ್ಕಾಂ ಗಮನಕ್ಕೆ ಬಂದಿದೆ. ಅವುಗಳನ್ನು ಕಳೆದ ತಿಂಗಳುಗಳ ಸರಾಸರಿಯಂತೆ ಲೆಕ್ಕ ಹಾಕಿ, ಪರಿಷ್ಕೃತ ಬಿಲ್ ನೀಡಲಾಗುತ್ತದೆ. ಈ ಮೂಲಕ ಗೃಹಜ್ಯೋತಿ ಫಲಾನುಭವಿಗಳಿಗೆ ಯೋಜನೆಯ ಲಾಭ ಪಡೆಯುವಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮವಹಿಸಲಾಗುವುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.