ಕೆಆರ್ಎಸ್ ಡ್ಯಾಮ್ ಬಳಿ ಡಿಸ್ನಿಲ್ಯಾಂಡ್ ಮಾದರಿಯ ಮನರಂಜನಾ ಪಾರ್ಕ್ ನಿರ್ಮಾಣ ಮತ್ತು ಕಾವೇರಿ ಆರತಿ ಹಮ್ಮಿಕೊಳ್ಳುವ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸರ್ಕಾರ ಮತ್ತು ಕಾವೇರಿ ನೀರಾವರಿ ನಿಗಮದಿಂದ ಕೋರ್ಟ್ ವಿವರಣೆ ಕೋರಿ ಡ್ಯಾಮ್ನ ಸುರಕ್ಷತೆ ಮತ್ತು ಪರಿಸರದ ಮೇಲಿನ ಪರಿಣಾಮಗಳ ಕುರಿತು ಪ್ರಶ್ನಿಸಿದೆ.
ಕೆಆರ್ಎಸ್ ಡ್ಯಾಂ ಬಳಿ ಮನರಂಜನಾ ಪಾರ್ಕ್ ಮತ್ತು ಕಾವೇರಿ ಆರತಿಗಾಗಿ ನಿರ್ಮಾಣ ಕಾಮಗಾರಿ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿ.ಕಾಮೇಶ್ವರ ರಾವ್, ಸಿಎಂ.ಜೋಷಿ ಅವರಿದ್ದ ಪೀಠ ಕರ್ನಾಟಕ ಸರ್ಕಾರಕ್ಕೆ ಮತ್ತು ಕಾವೇರಿ ನೀರಾವರಿ ನಿಗಮಕ್ಕೆ ನೋಟಿಸ್ ನೀಡಿ ವಿವರಣೆ ಕೋರಿದೆ.
ಅರ್ಜಿದಾರರ ಪರ ವಕೀಲ ಎಂ. ಶಿವಪ್ರಕಾಶ್ ನ್ಯಾಯಾಲಯಕ್ಕೆ ಹಾಜರಾಗಿ, ಡ್ಯಾಮ್ ಬಳಿ 120 ಅಡಿಯ ಕಾವೇರಿ ವಿಗ್ರಹ ಸ್ಥಾಪಿಸಲಾಗುತ್ತಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿ ಕಾಮಗಾರಿಗೆ ಯಂತ್ರಗಳನ್ನು ಉಪಯೋಗಿಸಿರುವ ಫೋಟೊ ಸಲ್ಲಿಸಿದ್ದಾರೆ. ಸದ್ಯಕ್ಕೆ ಕಾವೇರಿ ಪ್ರತಿಮೆ ಮಾತ್ರ ಸ್ಥಾಪಿಸಲು ಟೆಂಡರ್ ನೀಡಲಾಗಿದೆ. ಕಾವೇರಿ ಪ್ರತಿಮೆ ಸ್ಥಾಪನೆಗೆ ತಾಂತ್ರಿಕ ತಜ್ಞರ ಅನುಮತಿ ಪಡೆಯಲಾಗಿದೆ. ಮನರಂಜನಾ ಪಾರ್ಕ್ ಟೆಂಡರ್ ಪೂರ್ಣಗೊಂಡಿಲ್ಲವೆಂದು ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ಜಲಾಶಯದ ಸುರಕ್ಷತೆ ಸಮಿತಿಯ ಅನುಮತಿ ಏಕೆ ಪಡೆದಿಲ್ಲ, ಮನರಂಜನಾ ಪಾರ್ಕ್ ಕಾಮಗಾರಿಗೆ ತಾಂತ್ರಿಕ ತಜ್ಞರ ಅನುಮತಿ ಪಡೆಯಲಾಗಿದೆಯೇ, ಕಾವೇರಿ ಪ್ರತಿಮೆ ಸ್ಥಾಪಿಸುವಾಗ ತಜ್ಞರ ಸಲಹೆ ಪಾಲಿಸಲಾಗಿದೆಯೇ ಎಂದು ಸರ್ಕಾರವನ್ನು ಹಾಗೂ ಕಾವೇರಿ ನೀರಾವರಿ ನಿಗಮವನ್ನು ಹೈಕೋರ್ಟ್ ಪ್ರಶ್ನಿಸಿ ಎರಡು ವಾರ ಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ. ಯೋಜನೆಗೆ ಆರಂಭದಿಂದಲೇ ರೈತರಿಂದ ವಿರೋಧ ವ್ಯಕ್ತವಾಗಿದೆ, ಬಿಜೆಪಿ, ಜೆಡಿಎಸ್ ವಿರೋಧ ವ್ಯಕ್ತ ಪಡಿಸಿದ್ದವು.