ಅಪಘಾತ ಪ್ರಕರಣವೊಂದರ ವಿಚಾರಣೆ ನಡೆಸಿರುವ ಹೈಕೋರ್ಟ್, ಅಪಘಾತ ವೇಳೆ ಬೈಕ್ ಸವಾರ ಹೆಲ್ಮೆಟ್ ಧರಿಸದಿದ್ದ ಕಾರಣ ಪರಿಗಣಿಸಿ ಪರಿಹಾರ ಮೊತ್ತದಲ್ಲಿ ಏಳೂವರೆ ಲಕ್ಷ ರೂ.. ಕಡಿತಗೊಳಿಸಿ ಆದೇಶಿಸಿದೆ. ಹೆಲ್ಮೆಟ್ ಧರಿಸದೆ ಇರುವುದು ಬೈಕ್ ಸವಾರನ ನಿರ್ಲಕ್ಷ್ಯವೆಂದು ಹೇಳಿದ ಕೋರ್ಟ್, ನಿಗದಿಪಡಿಸಿದ ಒಟ್ಟು 19,64,400 ರೂ.. ಪರಿಹಾರದಲ್ಲಿ ಶೇ.40ರಷ್ಟು ಅಂದರೆ 7,85,760 ರೂ. ಕಡಿತಗೊಳಿಸಿದೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಚಿಕ್ಕಂದವಾಡಿ ಗ್ರಾಮದ ನಿವಾಸಿ ಅವಿನಾಶ್ (23) ಅಪಘಾತದಿಂದಾಗಿ 2019ರಲ್ಲಿ ಮೃತಪಟ್ಟಿದ್ದು, ಕುಟುಂಬದವರಿಗೆ ಒಟ್ಟು 18,03,000 ರು. ಪರಿಹಾರ ನಿಗದಿಪಡಿಸಿ ಮೋಟಾರು ವಾಹನ ಅಪಘಾತ ಪರಿಹಾರ ಕ್ಲೇಮು ನ್ಯಾಯಾಧಿಕರಣ (ಎಂಎಟಿಸಿ) ಆದೇಶಿಸಿತ್ತು. ಈ ಪರಿಹಾರ ಪ್ರಮಾಣ ಹೆಚ್ಚಿದೆ ಎಂದು ಆಕ್ಷೇಪಿಸಿ ಅಪಘಾತಕ್ಕೆ ಕಾರಣವಾಗಿದ್ದ ಟ್ರ್ಯಾಕ್ಟರ್ಗೆ ವಿಮಾ ಪಾಲಿಸಿ ನೀಡಿದ್ದ ವಿಮಾ ಕಂಪನಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಡಿ.ಕೆ.ಸಿಂಗ್ ಅವರ ನೇತೃತ್ವದ ವಿಭಾಗೀಯ ಪೀಠ ಪರಿಹಾರ ಮೊತ್ತ ಕಡಿತಗೊಳಿಸಿ ಆದೇಶ ಪ್ರಕಟಿಸಿದೆ.
ಅಪಘಾತ ಸಂಭವಿಸಿದ ವೇಳೆ ದ್ವಿಚಕ್ರ ಸವಾರನಾಗಿದ್ದ ಮೃತ ಅವಿನಾಶ್ ಹೆಲ್ಮೆಟ್ ಧರಿಸಿರಲಿಲ್ಲ. ಅವಿನಾಶ್ ವೇಗದಿಂದ ಮತ್ತು ನಿರ್ಲಕ್ಷ್ಯದಿಂದ ಬಂದು ಟ್ರ್ಯಾಕ್ಟರ್ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದಲ್ಲಿ ಆತನ ನಿರ್ಲಕ್ಷ್ಯ ಪ್ರಮಾಣವು ಶೇ.40ರಷ್ಟಿದೆ. ಟ್ರಾಕ್ಟರ್ ಚಾಲಕನ ನಿರ್ಲಕ್ಷ್ಯ ಶೇ.60ರಷ್ಟಿದೆ ಎಂಬುದಾಗಿ ಪೀಠ ತೀರ್ಮಾನಿಸಿದೆ. ಉಳಿದ 11,78,640 ರೂ. ಶೇ.6ರಷ್ಟು ವಾರ್ಷಿಕ ಬಡ್ಡಿದರದೊಂದಿಗೆ ಆರು ವಾರದಲ್ಲಿ ಮೃತನ ಕುಟುಂಬದವರಿಗೆ ಪಾವತಿಸುವಂತೆ ವಿಮಾ ಕಂಪನಿಗೆ ಆದೇಶಿಸಿದೆ.
ಹೊಳಲ್ಕೆರೆಯ ಎಂಎಸಿಟಿ ಮೃತ ಅವಿನಾಶ್ ಕುಟುಂಬದವರಿಗೆ ಶೇ.6 ವಾರ್ಷಿಕ ಬಡ್ಡಿದರದಲ್ಲಿ ಒಟ್ಟು 18,03,000 ರೂ.. ಪರಿಹಾರ ಪಾವತಿಸುವಂತೆ ಟ್ರ್ಯಾಕ್ಟರ್ಗೆ ವಿಮಾ ಪಾಲಿಸಿ ಒದಗಿಸಿದ್ದ ವಿಮಾ ಕಂಪನಿಗೆ ನಿರ್ದೇಶಿಸಿ 2019ರ ಡಿ.5ರಂದು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ 2021ರಲ್ಲಿ ನ್ಯಾಷನಲ್ ವಿಮಾ ಕಂಪನಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಪರಿಹಾರ ಪ್ರಮಾಣ ಕಡಿಮೆಯಾಗಿದೆ ಎಂದು ಆಕ್ಷೇಪಿಸಿ ಅವಿನಾಶ್ ತಾಯಿ ಹೈಕೋರ್ಟ್ಗೆ ಹೈಕೋರ್ಟ್ಗೆ ಪ್ರತ್ಯೇಕ ಮೇಲ್ಮನವಿ ಸಲ್ಲಿಸಿದ್ದರು.