ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯನ್ನು ಇಷ್ಟು ತಡವಾಗಿ ಏಕೆ ಪ್ರಾರಂಭಿಸಿಸಲಾಗಿದೆ ಎಂದು ಚುನಾವಣಾ ಆಯೋಗವನ್ನು ಪ್ರಶ್ನಿಸಿರುವ ಸುಪ್ರೀಂ ಕೋರ್ಟ್, ಇಸಿ ಸಂವಿಧಾನದ ಅಡಿಯಲ್ಲಿ ಏನು ಮಾಡಬೇಕೋ ಅದನ್ನೇ ಮಾಡಿದ್ದಾರೆ, ಮಾಡಬಾರದ್ದನ್ನೇನು ಮಾಡಿಲ್ಲ ಎಂದು ಹೇಳಿದೆ.
ಜೂನ್ 24 ರಂದು ಚುನಾವಣಾ ಆಯೋಗ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಸಲು ಸೂಚನೆಗಳನ್ನು ನೀಡಿತು, ಅನರ್ಹ ಹೆಸರುಗಳನ್ನು ತೆಗೆದುಹಾಕುವ ಮತ್ತು ಅರ್ಹರನ್ನು ಸೇರಿಸುವುದನ್ನು ಖಚಿತಪಡಿಸಿಕೊಳ್ಳುವ ಗುರಿ ಹೊಂದಿದೆ.
ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ 10 ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಅದರಲ್ಲಿ ‘ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್’ ಎಂಬ ಸರ್ಕಾರೇತರ ಸಂಸ್ಥೆ ಕೂಡ ಅರ್ಜಿ ಸಲ್ಲಿಸಿದೆ. ಸಂವಿಧಾನದ 326 ನೇ ವಿಧಿ ಮತ್ತು 1950 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 16 ರಲ್ಲಿ ವಿವರಿಸಿರುವಂತೆ ಈ ಪ್ರಕ್ರಿಯೆಯು ಸಾಂವಿಧಾನಿಕ ಮತ್ತು ಕಾನೂನು ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತದೆ ಎಂದು ಚುನಾವಣಾ ಆಯೋಗವು ಭರವಸೆ ನೀಡಿದೆ. ಈ ಪಟ್ಟಿ ಪರಿಷ್ಕರಣೆ ಮಾಡದಿದ್ದರೆ ಹೊಸ ಮತದಾರರು, ಅಥವಾ ಸಾವನ್ನಪ್ಪಿರುವವರ ಕುರಿತು ದಾಖಲೆ ಲಭ್ಯವಾಗುವುದಿಲ್ಲ ಎಂದು ಹೇಳಿದೆ. .
ಆರ್ಜೆಡಿ ಸಂಸದ ಮನೋಜ್ ಝಾ ಮತ್ತು ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ, ಕಾಂಗ್ರೆಸ್ನ ಕೆ.ಸಿ. ವೇಣುಗೋಪಾಲ್, ಎನ್ಸಿಪಿ ನಾಯಕಿ ಸುಪ್ರಿಯಾ ಸುಳೆ, ಸಿಪಿಐ ನಾಯಕ ಡಿ. ರಾಜಾ, ಸಮಾಜವಾದಿ ಪಕ್ಷದ ಹರಿಂದರ್ ಸಿಂಗ್ ಮಲಿಕ್, ಶಿವಸೇನೆ ನಾಯಕ ಅರವಿಂದ್ ಸಾವಂತ್, ಜೆಎಂಎಂನ ಸರ್ಫರಾಜ್ ಅಹ್ಮದ್ ಮತ್ತು ಸಿಪಿಐ ನ ದೀಪಂಕರ್ ಭಟ್ಟಾಚಾರ್ಯ ಚುನಾವಣಾ ಆಯೋಗದ ಆದೇಶವನ್ನು ರದ್ದುಗೊಳಿಸಲು ನಿರ್ದೇಶನ ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.