“ಬೆಂಗಳೂರಿನ ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ ಪರಿವರ್ತನೆ ಮಾಡುತ್ತಿರುವ ಬಗ್ಗೆ ಇಲ್ಲಸಲ್ಲದ ಟೀಕೆ ಮಾಡುತ್ತಿರುವ ಕುಮಾರಸ್ವಾಮಿ ಖಾಲಿ ಟ್ರಂಕ್ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ಕಬ್ಬನ್ ಪಾರ್ಕ್ ನಲ್ಲಿ ಭಾನುವಾರ ನಡೆದ ಬೆಂಗಳೂರು ನಡಿಗೆ ಕಾರ್ಯಕ್ರಮದ ವೇಳೆ ಶಿವಕುಮಾರ್ ಅವರು ಸಾರ್ವಜನಿಕರ ಜೊತೆ ಮಾತನಾಡಿದರು.
ಈ ವೇಳೆ ನಾಗರಿಕರೊಬ್ಬರು, ಸರ್ಕಾರ ಎಲ್ಲಾ ಆಸ್ತಿಗಳನ್ನು ಎ ಖಾತಾ ಆಗಿ ಪರಿವರ್ತನೆ ಮಾಡುತ್ತಿರುವುದು ಒಳ್ಳೆಯ ಕೆಲಸ. ಈ ಪರಿವರ್ತನೆಗಾಗಿ ಅನೇಕರು, ಹಲವು ವರ್ಷಗಳಿಂದ ಕಾಯುತ್ತಿದ್ದರು ಎಂದು ಸರ್ಕಾರದ ತೀರ್ಮಾನವನ್ನು ಸ್ವಾಗತಿಸಿ, ಮುಕ್ತವಾಗಿ ಪ್ರಶಂಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ, “ಎ ಖಾತಾ ನಿಮ್ಮ ಆಸ್ತಿ ದಾಖಲೆ. ಸಾರ್ವಜನಿಕರ ಆಸ್ತಿ ದಾಖಲೆಗಳನ್ನು ಸರಿಪಡಿಸಿ, ಅವುಗಳನ್ನು ಜನರಿಗೆ ನೀಡುವುದು ನಮ್ಮ ಸರ್ಕಾರದ ಆರನೇ ಗ್ಯಾರಂಟಿ. ಇದಕ್ಕಾಗಿ ನಾವು ಕೇವಲ 5% ಮಾತ್ರ ಅಭಿವೃದ್ಧಿ ಶುಲ್ಕ ಪಾವತಿ ಮಾಡುವಂತೆ ಕೇಳಿದ್ದೇವೆ. ನಿಮ್ಮಂತಹ ಪ್ರಜ್ಞಾವಂತ ನಾಗರೀಕರು ಇದನ್ನು ಸ್ವಾಗತಿಸಿರುವುದಕ್ಕೆ ಧನ್ಯವಾದ” ಎಂದು ನಮಿಸಿದರು.
ಮೈಸೂರು ಸಂಸ್ಥಾನದ ಒಡೆಯರಾಗಿದ್ದ ಚಾಮರಾಜ ಒಡೆಯರ್, ದಿವಾನರಾಗಿದ್ದ ಶೇಷಾದ್ರಿ ಅಯ್ಯರ್ ಅವರ ಪ್ರತಿಮೆಗೆ ಶಿವಕುಮಾರ್ ನಮನ ಸಲ್ಲಿಸಿದರು. ಹಿರಿಯರು, ಕಿರಿಯರ ಜತೆ ಸಂವಾದ ಮಾಡಿದರು. ಸಮಸ್ಯೆಗಳನ್ನು ಆಲಿಸಿದರು. ಸಲಹೆ ಪಡೆದರು. ಹಿರಿಯರು, ಮಕ್ಕಳ ಜತೆ ಸೆಲ್ಫಿ ತೆಗೆಸಿಕೊಂಡರು. ವಾಯುವಿಹಾರಿ ಜತೆ ಬಂದಿದ್ದ ಸೈಬೆರಿಯನ್ ಹಸ್ಕಿ ಶ್ವಾನದ ಮೈ ದಡವಿದರು. ಮುಂಜಾನೆ ಸಂಗೀತ ಕಚೇರಿ ನಿರತ ವಾದ್ಯಗಾರ್ತಿಗೆ ಶುಭ ಕೋರಿದರು.


