ದಾವಣಗೆರೆ: ಜಿಲ್ಲಾ ಪಂಚಾಯತ್ ದಾವಣಗೆರೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 8ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಸೋಮವಾರ ತಮ್ಮ ಗೃಹಕಚೇರಿಯಲ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಾಲುಬಾಯಿ ರೋಗವು ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ರೋಗವಾಗಿದೆ.ರೈತರಿಗೆ ಆರ್ಥಿಕ ಸಂಕಷ್ಟಗಳನ್ನು ತಂದೊಡ್ಡುವ, ಕಾಲುಬಾಯಿ ರೋಗವನ್ನು ನಿಯಂತ್ರಿಸಿ ನಿರ್ಮೂಲನೆ ಮಾಡಲು ಪ್ರತಿ 6 ತಿಂಗಳಿಗೊಮ್ಮೆ ರೋಗದ ವಿರುದ್ಧ ಲಸಿಕೆ ಹಾಕಿಸಬೇಕು ಎಂದು ಸಲಹೆ ನೀಡಿದರು.
ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ರೈತರ ಎಲ್ಲಾ ದನ, ಎಮ್ಮೆ ಮತ್ತು ಕರುಗಳಿಗೆ ಉಚಿತವಾಗಿ ನೀಡುವ ಲಸಿಕಾ ಕಾರ್ಯಕ್ರಮವನ್ನು ಇಂದಿನಿಂದ ಡಿಸೆಂಬರ್ 02ರ ವರೆಗೆ ಹಮ್ಮಿಕೊಳ್ಳಲಾಗಿದೆ. ಲಸಿಕೆ ವೇಳೆ ಪ್ರತಿ ಜಾನುವಾರುವಿಗೆ ಪ್ರತ್ಯೇಕ ಸಿರಿಂಜ್ ಮತ್ತು ನೀಡಲ್ಗಳನ್ನು ಬಳಸಲಾಗುವುದು.
ಲಸಿಕೆದಾರರು ನಿಮ್ಮ ಗ್ರಾಮಕ್ಕೆ, ನಿಮ್ಮ ಮನೆ ಬಾಗಿಲಿಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ. ಆದ್ದರಿಂದ ತಪ್ಪದೇ ನಿಮ್ಮ ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆಯನ್ನು ಹಾಕಿಸಿ ರೋಗ ಬರದಂತೆ ಜಾನುವಾರುಗಳನ್ನು ರಕ್ಷಿಸಿ, ಆರ್ಥಿಕ ನಷ್ಟ ತಡೆಯಿರಿ. ರಾಜ್ಯವನ್ನು ಕಾಲುಬಾಯಿ ರೋಗ ಮುಕ್ತ ವಲಯವನ್ನಾಗಿಸಬೇಕು.
ನಿಮ್ಮ ಗ್ರಾಮಕ್ಕೆ ಭೇಟಿ ನೀಡುವ ಲಸಿಕಾ ಸಿಬ್ಬಂದಿಗೆ ಸಹಕರಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.


