Menu

ಆಧುನಿಕ ಭಾರತದ ನಿರ್ಮಾತೃ ಜವಾಹರ್ ಲಾಲ್ ನೆಹರು: ಮುಖ್ಯಮಂತ್ರಿ ಸಿದ್ದರಾಮಯ್ಯ

ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರು ಅವರು ಆಧುನಿಕ ಭಾರತದ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಮಾಜಿ ಪ್ರಧಾನಮಂತ್ರಿಗಳಾದ ದಿವಂಗತ ಪಂಡಿತ್ ಜವಾಹಾರಲಾಲ್ ನೆಹರು ರವರ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರೂ ಅವರ ಜನ್ಮದಿನದಂದೇ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಮಕ್ಕಳನ್ನು ಕಂಡರೆ ಬಹಳ ಪ್ರೀತಿಯಿದ್ದ ಅವರು ಇಂದಿನ ಮಕ್ಕಳೇ ಭವಿಷ್ಯದ ಪ್ರಜೆಗಳು ಎಂದು ಅರ್ಥೈಸಿಕೊಂಡಿದ್ದರು. ಆದ್ದರಿಂದ ಚಾಚಾ ನೆಹರೂ ಎಂದೇ ಅವರನ್ನು ಕರೆಯಲಾಗುತ್ತಿತ್ತು ಎಂದು ಹೇಳಿದರು.

ವಿದ್ಯಾರ್ಥಿ ದೆಸೆಯಲ್ಲಿದ್ದಾಗಲೇ ದೇಶ ಪ್ರೇಮ ಹಾಗೂ ಸ್ವಾತಂತ್ರ್ಯ ಪ್ರೇಮಗಳನ್ನು ಬೆಳೆಸಿಕೊಂಡಿದ್ದರು. ಬ್ರಿಟಿಷರ ವಿರುದ್ಧ ಹೋರಾಡುವ ಮನೋಭಾವ ಬೆಳೆಸಿಕೊಂಡು ಮಹಾತ್ಮ ಗಾಂಧಿಯವರ ನೆಚ್ಚಿನ ಶಿಷ್ಯರಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳುತ್ತಾರೆ. ಸುಮಾರು 9 ವರ್ಷಗಳ ಕಾಲ ಕಾರಾಗೃಹದಲ್ಲಿದ್ದು ದೇಶಕ್ಕಾಗಿ ಬಹಳಷ್ಟು ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಲಭಿಸಿದಾಗ ದೇಶದ ಬಜೆಟ್ ಗಾತ್ರ 197 ಕೋಟಿ ರೂ. ಗಳು ಮಾತ್ರ ಇತ್ತು. ಎರಡು ಮೂರು ವರ್ಷಗಳ ನಂತರ 4 ಅಂಕಿಗಳ ಹಂತಕ್ಕೆ ತಲುಪಿತು ಎಂದರು.

ಕೃಷಿ, ನೀರಾವರಿ, ಕೈಗಾರಿಕೆಗಳಲ್ಲಿ ಆಸಕ್ತಿ ಹೊಂದಿದ್ದ ನೆಹರೂ ಅವರು ದೇಶವನ್ನು ವೈಜ್ಞಾನಿಕವಾಗಿ, ವೈಚಾರಿಕವಾಗಿ ಬೆಳೆಸುವ ಪ್ರಯತ್ನ ಮಾಡಿದರು. ಪಂಚ ವಾರ್ಷಿಕ ಯೋಜನೆಗಳ ಮೂಲಕ ದೇಶ ಕಟ್ಟುವ ಕೆಲಸವನ್ನು ಮಾಡಿದರು. ದೇಶದಲ್ಲಿ ಅನೇಕ ಕೈಗಾರಿಕೆಗಳಾಗಿದ್ದರೆ, ಅಣೆಕಟ್ಟುಗಳಾಗಿದ್ದರೆ, ಕೃಷಿಯಲ್ಲಿ ಸ್ವಾವಲಂಬಿಗಳಾಗಿದ್ದರೆ ಅದಕ್ಕೆ ನೆಹರೂ ಅವರು ಕಾರಣ ಎಂದು ಸ್ಮರಿಸಬೇಕು. ಸುದೀರ್ಘ ಹದಿನೇಳು ವರ್ಷಗಳ ಕಾಲ ಈ ದೇಶದ ಪ್ರಧಾನಿಗಳಾಗಿದ್ದವರು ಎಂದು ಮುಖ್ಯಮಂತ್ರಿ ಸ್ಮರಿಸಿದರು.

ಬಿಜೆಪಿಗೆ ಗಾಂಧಿ ಹಾಗೂ ನೆಹರೂ ಅವರನ್ನು ತೆಗಳುವುದೇ ಕೆಲಸ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯ ಪಾತ್ರವೇ ಇಲ್ಲ. ಮಹಾತ್ಮ ಗಾಂಧಿ, ನೆಹರೂ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು. ಅವರನ್ನು ತೆಗಳಿ, ಇಲ್ಲದ ಆರೋಪಗಳನ್ನು ಹೊರಿಸುವುದೇ ಅವರ ಕೆಲಸ. ನರೇಂದ್ರ ಮೋದಿ, ಬಿಜೆಪಿ, ಆರ್.ಎಸ್.ಎಸ್ ಗಾಂಧಿ ಮತ್ತು ನೆಹರೂ ಅವರನ್ನು ಹೀಯಾಳಿಸುವುದನ್ನೇ ಉದ್ಯೋಗ ಮಾಡಿಕೊಂಡಿದ್ದಾರೆ ಎಂದರು.

ಬಾಗಲಕೋಟೆ ಕಬ್ಬು ಬೆಳೆಗಾರರು ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಿರುವ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿ,  ರೈತರು ಅದಕ್ಕೆ ಕಾರಣರಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಸರ್ಕಾರ 3300 ರೂ.ಗಳ ದರ ನಿಗದಿ ಮಾಡಿದ್ದು, ಮುಧೋಳದ ರೈತರು ಅದಕ್ಕೆ ಒಪ್ಪಿಗೆ ನೀಡಿ ಚಳವಳಿಯನ್ನು ವಾಪಸ್ ಪಡೆಯಬೇಕು ಎಂದು ಮನವಿ ಮಾಡಿದರು.

ಬಿಹಾರ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆಯಾಗಿರುವ ಬಗ್ಗೆ ಮಾತನಾಡಿ ಜನರ ತೀರ್ಪನ್ನು ಒಪ್ಪಿಕೊಳ್ಳಬೇಕು ಎಂದರು.

Related Posts

Leave a Reply

Your email address will not be published. Required fields are marked *