ಗೇಮಿಂಗ್ ಆ್ಯಪ್ಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ, ಅಕ್ರಮ ಆಸ್ತಿ ಮತ್ತು ತೆರಿಗೆ ವಂಚನೆ ಆರೋಪದಡಿ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಸಿಕ್ಕಿಂನಲ್ಲಿ ಶಾಸಕರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದೆ.
ವೀರೇಂದ್ರ ಪಪ್ಪಿ ಒಡೆತನದ ಕಂಪನಿಗಳಿಂದ ಗೇಮಿಂಗ್ ಆ್ಯಪ್ಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ ಸಂಬಂಧ ಇಡಿ ಶಾಸಕರು, ಸಹೋದರಾದ ಕೆ.ಸಿ ನಾಗರಾಜ ಮತ್ತು ಕೆಸಿ ತಿಪ್ಪೇಸ್ವಾಮಿಯವರ ಮನೆಗಳ ಮೇಲೆ ದಾಳಿ ನಡೆಸಿದೆ. ಬೆಂಗಳೂರು, ಚಿತ್ರದುರ್ಗ, ಚಳ್ಳಕೆರೆ, ಗೋವಾ ಸೇರಿದಂತೆ 17 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿ ದಾಖಲೆಗಳ ಪರಿಶೀಲಿಸುತ್ತಿದೆ. ಶಾಸಕರು ಸಿಕ್ಕಿಂನಲ್ಲಿ ಸ್ನೇಹಿತರೊಂದಿಗೆ ಇದ್ದಾಗ ವಶಕ್ಕೆ ಪಡೆಯಲಾಗಿದೆ.
ಗೇಮಿಂಗ್ ಆ್ಯಪ್ಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ, ಅಕ್ರಮ ಆಸ್ತಿ ಮತ್ತು ತೆರಿಗೆ ವಂಚನೆ ಆರೋಪದಡಿ ಶಾಸಕರ ವಿರುದ್ಧ ಗೋವಾದಲ್ಲಿ 2 ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಇಡಿ ದಾಳಿ ನಡೆಸಿದೆ. ಪಪ್ಪಿ ಟೆಕ್ನಾಲಜಿ, ರತ್ನ ಗೇಮಿಂಗ್ ಸೊಲ್ಯೂಷನ್ಸ್, ರತ್ನ ಗೋಲ್ಡ್, ರತ್ನ ಮಲ್ಟಿ ಸೋರ್ಸ್ ಕಂಪನಿಗಳು ಅಕ್ರಮ ಎಸಗಿವೆ ಎಂಬ ಆರೋಪವಿದೆ. ಚಳ್ಳಕೆರೆ ಪಟ್ಟಣದಲ್ಲಿರುವ 4 ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ಶೋಧ ಕಾರ್ಯ ನಡೆಸುತ್ತಿದ್ದಾರೆ. 40ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಖಾಸಗಿ ವಾಹನಗಳಲ್ಲಿ ಆಗಮಿಸಿದ್ದಾರೆ.
ಪಪ್ಪಿ ಅವರೊಂದಿಗೆ ಆರ್ಥಿಕ ವ್ಯವಹಾರ ಹೊಂದಿದ್ದ ಹಿನ್ನೆಲೆ ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತ ರಾಯಪ್ಪ ಅವರ ಮುದ್ದಿಪಾಳ್ಯ ರಸ್ತೆಯಲ್ಲಿರುವ ನಿವಾಸದ ಮೇಲೆ ಇಡಿ ದಾಳಿ ನಡೆಸಿ, ಶೋಧ ಮುಂದುವರಿಸಿದೆ.