ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದನ್ನು ಖಂಡಿಸಿ, ಈ ಪ್ರಕರಣದಲ್ಲಿ ED ಸಲ್ಲಿಸಿದ ಆರೋಪ ಪಟ್ಟಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ ವಿಚಾರಣಾ ನ್ಯಾಯಾಲಯದ (ಟ್ರಯಲ್ ಕೋರ್ಟ್) ತೀರ್ಮಾನವನ್ನು ಬೆಂಬಲಿಸಿ ಮತ್ತು ಕೇಂದ್ರ ಸರ್ಕಾರ ಇಡಿಯನ್ನು ದುರುಪಯೋಗ ಪಡಿಸುತ್ತಿರುವುದನ್ನು ಖಂಡಿಸಿ ಸುವರ್ಣಸೌಧದ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪಮುಖ್ಯಮಂತ್ರಿಡಿಕೆ ಶಿವಕುಮಾರ್ ಸೇರಿದಂತೆ ಶಾಸಕರು, ಸಚಿವರು ಪಾಲ್ಗೊಂಡರು.
ಸಚಿವರಾದ ಕೆ.ಜೆ. ಜಾರ್ಜ್,ಎಚ್ ಕೆ ಪಾಟೀಲ್, ಈಶ್ವರ್ ಖಂಡ್ರೆ, ಮುನಿಯಪ್ಪ, ಬೋಸರಾಜು, ಎಂ.ಸಿ. ಸುಧಾಕರ್, ಬೈರತಿ ಸುರೇಶ್ ಮತ್ತಿತರ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಧರಣಿಯಲ್ಲಿ ಭಾಗವಹಿಸಿದ್ದರು. ಎಲ್ಲಾ ಸಚಿವರು ಮತ್ತು ಶಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಿ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ಹಾಳುಗೆಡವುತ್ತಿರುವುದರ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟಿಸಿದರು.
ಡಿಕೆ ಶಿವಕುಮಾರ್ ಮಾತನಾಡಿ, ನ್ಯಾಷನಲ್ ಹೆರಾಲ್ಡ್ ಕಾಂಗ್ರೆಸ್ ಪಕ್ಷದ ಆಸ್ತಿ. ನೆಹರು ಅವರು 1937ರಲ್ಲಿ ನ್ಯಾಷನಲ್ ಹೆರಾಲ್ಡ್ ಸಂಸ್ಥೆ ಸ್ಥಾಪಿಸಿದರು. ಇದರ ಷೇರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಇಟ್ಟುಕೊಳ್ಳದೆ ಬೇರೆ ಯಾರು ಇಟ್ಟುಕೊಳ್ಳಲು ಸಾಧ್ಯ? ಅದನ್ನು ಮುಟ್ಟುಗೊಲು ಹಾಕಿಕೊಂಡು, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಕೊಡಬಾರದ ಕಿರುಕುಳ ನೀಡುತ್ತಿದ್ದಾರೆ. ನಾವು ಪಕ್ಷದ ಕಾರ್ಯಕರ್ತರಾಗಿ ಪಕ್ಷದ ಸಂಸ್ಥೆಗೆ ದೇಣಿಗೆ ನೀಡಿದ್ದೇವೆ” ಎಂದು ಹೇಳಿದರು.
” ನ್ಯಾಯಾಲಯ ನೀವು ದಾಖಲಿಸಿರುವ ಪ್ರಕರಣ ಸರಿ ಇಲ್ಲ ಎಂದು ವಜಾಗೊಳಿಸಿದೆ. ದೇಶದಲ್ಲಿ ನ್ಯಾಯಾಲಯ ಜೀವಂತವಾಗಿದೆ ಎಂಬುದಕ್ಕೆ ಇದೇ ಸಾಕ್ಷಿ. ಅಧಿಕಾರ ದುರುಪಯೋಗ ಮಾಡಿಕೊಂಡು ಹೇಗೆ ಕಿರುಕುಳ ನೀಡುತ್ತಿದ್ದಾರೆ ಎಂಬುದಕ್ಕೆ ಇದೇ ಸಾಕ್ಷಿ” ಎಂದರು.


