ಮಗಳನ್ನು ತನಗೆ ಮದುವೆ ಮಾಡಿಕೊಡಲು ನಿರಾಕರಿಸಿದ ಸಿಟ್ಟಿಗೆ ಯುವಕನೊಬ್ಬ ಆಕೆಯ ತಾಯಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನ ಬಸವೇಶ್ವರನಗರದ ಭೋವಿ ಕಾಲೋನಿಯಲ್ಲಿ ನಡೆದಿದೆ.
ಬೆಂಕಿಯಿಂದ ಗಾಯಗೊಂಡಿರುವ ಮಹಿಳೆಯನ್ನು ಗೀತಾ ಎಂದು ಗುರುತಿಸಲಾಗಿದ್ದು, ಮುತ್ತು ಎಂಬಾತ ಈ ಕೃತ್ಯವೆಸಗಿದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಗೀತಾ ಪ್ರಾವಿಷನ್ ಸ್ಟೋರ್ ನಡೆಸುತ್ತಿದ್ದು, ಅದೇ ಏರಿಯಾದಲ್ಲಿ ಮುತ್ತು ಟೀ ಅಂಗಡಿ ಇಟ್ಟುಕೊಂಡಿದ್ದ.
ಗೀತಾ, ಆಕೆಯ 19 ವರ್ಷದ ಮಗಳು ಹಾಗೂ ಮುತ್ತು ಒಂದೇ ಮನೆಯಲ್ಲಿ ವಾಸವಿದ್ದರು ಎನ್ನಲಾಗಿದೆ. ಮಗಳನ್ನು ತನಗೆ ಮದುವೆ ಮಾಡಿಕೊಡುವಂತೆ ಮುತ್ತು ಗೀತಾಳ ಮೇಲೆ ಒತ್ತಡ ಹೇರುತ್ತಿದ್ದ ಎಂದು ಆರೋಪಿಸಲಾಗಿದೆ. ಗೀತಾ ನಿರಾಕರಿಸಿದ್ದಕ್ಕೆ ಕೋಪಗೊಂಡ ಯುವಕ ಈ ಕೃತ್ಯ ಎಸಗಿದ್ದಾನೆ.
ಬೆಂಕ ಹಚ್ಚಿದ ಬಳಿಕ ಆರೋಪಿ ಪರಾರಿಯಾಗಿದ್ದು, ತೀವ್ರವಾಗಿ ಗಾಯಗೊಂಡ ಗೀತಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ಮುಂದುವರಿಸಿದ್ದಾರೆ.


