ಬಿಜೆಪಿ ಜೊತೆಗಿನ ಮೈತ್ರಿ ವಿಧಾನಸಭೆ, ಲೋಕಸಭೆಗಷ್ಟೇ ಸೀಮಿತವಾಗಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಗೆ ಅಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಪ್ರತ್ಯೇಕವಾಗಿ ಹೋರಾಟಮಾಡಲಿದ್ದು, ಬಿಜೆಪಿ ಜೊತೆ ಹೊಂದಾಣಿಕೆ ಇಲ್ಲ ಎಂದರು.
ಜಿಬಿಎ, ನಗರಸಭೆ, ಪಾಲಿಕೆ ಸೇರಿದಂತೆ ಸ್ಥಳೀಯ ಚುನಾವಣೆಯ ಸೀಟು ಹಂಚಿಕೆ ಬಗ್ಗೆ ಮೋದಿ, ಶಾ ಜೊತೆಗೆ ಚರ್ಚೆ ಮಾಡಲು ಆಗಲ್ಲ. ಮೋದಿ, ಶಾ ಜೊತೆಗೆ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆ ಸೀಟು ಹಂಚಿಕೆ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಪುನರುಚ್ಚರಿಸಿದರು.
ಹಾಸನದಲ್ಲಿ ಜನವರಿ 23 ರಂದು, ಬೆಂಗಳೂರಿನಲ್ಲಿ ಜನವರಿ 18 ರಂದು ಸಭೆ ಮಾಡುತ್ತಿದ್ದೇವೆ. ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಜೊತೆ ಇರುತ್ತೇವೆ. ಅಲ್ಲದೇ ಮುಂಬರುವ ವಿಧಾನ ಪರಿಷತ್ 4 ಸ್ಥಾನಗಳ ಚುನಾವಣೆಯಲ್ಲಿ ಒಂದು ಸ್ಥಾನ ಜೆಡಿಎಸ್ಗೆ 3 ಸ್ಥಾನ ಬಿಜೆಪಿಗೆ ನೀಡುವ ಬಗ್ಗೆ ಪ್ರಾಥಮಿಕ ಚರ್ಚೆ ಆಗಿದೆ ಎಂದು ವಿವರಿಸಿದರು.
ಕಾಂಗ್ರೆಸ್ ಒಳಜಗಳ ನೋಡಿದರೆ 2028ಕ್ಕೂ ಮುನ್ನವೇ ವಿಧಾನಸಭಾ ಚುನಾವಣೆ ಬರಬಹುದು. ಬಿಜೆಪಿ 130-140 ಸ್ಥಾನ ಗೆದ್ದು ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರಲಿದೆ ಈ ನಿಟ್ಟಿನಲ್ಲಿ ಕಾರ್ಯಕರ್ತರು ಸಂಕಲ್ಪ ಮಾಡಬೇಕಾಗಿದೆ. ರಾಜ್ಯಾಧ್ಯಕ್ಷನಾಗಿ ರಾಜ್ಯ ಪ್ರವಾಸ ಮಾಡಿ ನಾಡಿಮಿಡಿತ ಅರ್ಥ ಮಾಡಿಕೊಂಡಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆಯನ್ನು ದೇವೇಗೌಡರು ಪರೋಕ್ಷವಾಗಿ ತಿರುಗೇಟು ನೀಡಿದರು.
ವಿಜಯೇಂದ್ರಗೆ ಪರೋಕ್ಷ ಟಾಂಗ್ ಕೊಟ್ಟಿದ್ದಾರೆ. ವಿಜಯೇಂದ್ರ ಬಹಳ ಉತ್ಸಾಹದಿಂದ ಓಡಾಡುತ್ತಿದ್ದಾರೆ. ಯಂಗ್ ಸ್ಟಾರ್ ರೀತಿ ಕೆಲಸ ಮಾಡುತ್ತಿದ್ದಾರೆ. ವಾಸ್ತವದ ಅರಿವು ಇಲ್ಲ ಎಂದು ದೇವೇಗೌಡರು ಪ್ರತಿಕ್ರಿಯಿಸಿದರು.


