MNREGA ಕಾಯ್ದೆ ಪುನರ್ ಸ್ಥಾಪನೆ ಆಗಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಕೆಪಿಸಿಸಿ ವತಿಯಿಂದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಸಂಗ್ರಾಮ ಪೂರ್ವ ಸಿದ್ಧತಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಇದು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಆಗುವ ಆಂದೋಲನ. ಉತ್ತರ ಭಾರತದಲ್ಲಿ ಕಾಯ್ದೆಗಳ ಬದಲಾವಣೆಗೆ ರೈತರು ಹೋರಾಡಿದಂತೆ ಹೋರಾಟ ಮಾಡಬೇಕು. NREGA ರದ್ದು ಮಾಡಿರುವುದನ್ನು ಪಕ್ಷ ಬಹಳ ಗಂಭೀರವಾಗಿ ಪರಿಗಣಿಸಿದೆ. ಕೇಂದ್ರ ಸರ್ಕಾರ MNREGA ರದ್ದು ಮಾಡಿ ವಿಬಿ ಜಿ ರಾಮ್ ಜಿ ಎಂಬ ಹೊಸ ಕಾಯ್ದೆಯನ್ನು ರೂಪಿಸಿದೆ. ಮಹಾತ್ಮ ಗಾಂಧಿ ಹೆಸರು ಎಂದರೆ ಅವರಿಗೆ ಅಲರ್ಜಿ ಎಂದರು.
ಮನಮೋಹನ ಸಿಂಗ್ ಅವರು ಪ್ರಧಾನಿಯಾಗಿದ್ದಾಗ MNREGA ಕಾಯ್ದೆಯನ್ನು ಗ್ರಾಮೀಣ ಪ್ರದೇಶದ ಬಡವರಿಗೆ ಕೆಲಸದ ಹಕ್ಕು ನೀಡಲೆಂದು ಮೂಲಭೂತ ಹಕ್ಕನ್ನಾಗಿದ್ದರು. ನಿರುದ್ಯೋಗ, ಆಹಾರ, ಮಾಹಿತಿ, ಕಾಡಿನಲ್ಲಿ ವಾಸಿಸುವ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ಪ್ರಯತ್ನ ಮಾಡಿದರು. ಆಹಾರ ಭದ್ರತಾ ಕಾಯ್ದೆ, ಉದ್ಯೋಗ ಖಾತ್ರಿ, ಮಾಹಿತಿ ಹಕ್ಕು, ಶಿಕ್ಷಣದ ಹಕ್ಕು, ಅರಣ್ಯ ವಾಸಿಗಳ ಹಕ್ಕು ಒದಗಿಸುವ ಕಾಯ್ದೆಗಳನ್ನು ರೂಪಿಸಿದರು ಎಂದರು. 20 ವರ್ಷಗಳಿಂದ ಜಾರಿಯಲ್ಲಿದ್ದ ಕಾಯ್ದೆಯಡಿ 12.16 ಕೋಟಿ ಕಾರ್ಮಿಕರು ದೇಶದಲ್ಲಿ ಕೆಲಸ ಮಾಡುತ್ತಿದ್ದು, 6.21ಕೋಟಿ ಮಹಿಳೆಯರು ಕೆಲಸಮಾಡುತ್ತಿದ್ದಾರೆ ಎಂದು ಹೇಳಿದರು.
ಗ್ರಾಮೀಣ ಪ್ರದೇಶದಲ್ಲಿ 365 ದಿನ ಕೆಲಸ ಕೇಳಬಹುದಾಗಿತ್ತು. ಕಾರ್ಮಿಕರು ಅವರ ಊರಿನಲ್ಲಿ, ಅವರ ಜಮೀನಿನಲ್ಲಿಯೇ ಕೆಲಸ ಮಾಡಬಹುದಾಗಿತ್ತು. ಇದನ್ನು ಬದಲಾಯಿಸಿ ಮೋದಿ ಸರ್ಕಾರ ವಿಬಿಜಿ ರಾಮ್ ಜಿ ಕಾಯ್ದೆ ಜಾರಿಗೆ ತಂದಿದೆ. ದಶರಥ ರಾಮ, ಸೀತಾ ರಾಮ ಅಥವಾ ಕೌಶಲ್ಯ ರಾಮನಲ್ಲ. ಮಹಾತ್ಮಾ ಗಾಂಧಿ ಕೊಂದ ನಾಥೂರಾಮ ಇದು. ಗಾಂಧಿಯವರನ್ನು ಮೊತ್ತೊಮ್ಮೆ ಕೊಲ್ಲುತ್ತಿದ್ದಾರೆ.ಕಾಯ್ದೆಯಡಿ ಕೆಲಸ ಕೊಡಲಿಲ್ಲ ಎಂದು ನ್ಯಾಯಾಲಯಕ್ಕೆ ಕೂಡ ಹೋಗಬಹುದಿತ್ತು ಎಂದರು.
ಈಗ ಕೇಂದ್ರ ಸರ್ಕಾರ ಅಧಿಸೂಚನೆ ಮೂಲಕ ಇಂಥ ಕಡೆ ಕೆಲಸ ಎಂದು ನಿಗದಿ ಮಾಡುತ್ತದೆ. ಅಲ್ಲಿ ಕೆಲಸ ಮಾಡಬೇಕು. ಈಗ ರಾಜ್ಯಗಳು 40% ವೆಚ್ಚವನ್ನು ಭರಿಸಬೇಕಿದೆ. 2500 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ಕೊಡಬೇಕಾಗುತ್ತದೆ. ಅದಕ್ಕಾಗಿಯೇ ನರೇಗಾ ಬಚಾವ್ ಆಂದೋಲನವನ್ನು ರೂಪಿಸಿದೆ. ಇದು ಜನಾಂದೋಲನವಾಗಿ ಪರಿವರ್ತನೆ ಆಗಬೇಕು ಎಂದು ತಿಳಿಸಿದರು.


