Thursday, January 15, 2026
Menu

ಶಿಡ್ಲಘಟ್ಟ ಪೌರಾಯುಕ್ತರ ವಿರುದ್ಧ ಅವಾಚ್ಯ ಶಬ್ಧ: ತಪ್ಪು ಮಾಡಿದವರ ವಿರುದ್ಧ ಕ್ರಮವೆಂದ ಡಿಸಿಎಂ

ಇದು ಪವಿತ್ರವಾದ ಜಾಗ, ಇಲ್ಲಿ ಅಂತಹ ವಿಚಾರ ಚರ್ಚೆ ಬೇಡ. ಯಾರೂ ಕಾನೂನಿಗಿಂತ ದೊಡ್ಡವರಲ್ಲ. ತಪ್ಪು ಮಾಡಿದವರು ಕ್ಷಮೆ ಕೇಳಬೇಕು ಎಂದು ಸೂಚಿಸುತ್ತೇನೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಶಿಡ್ಲಘಟ್ಟದಲ್ಲಿ  ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ನಗರಸಭೆ ಪೌರಾಯುಕ್ತೆಗೆ ಅಶ್ಲೀಲ ಪದಗಳಿಂದ ನಿಂದಿಸಿದ ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ.

ರಾಜೀವ್ ಗೌಡ ವಿರುದ್ಧ ಪೌರಾಯುಕ್ತ ಅಮೃತ ಗೌಡ ಪೊಲೀಸರಿಗೆ ದೂರು ನೀಡಿದ್ದಾರೆ. ಜೆಡಿಎಸ್ ಮುಖಂಡರು ದೂರು ಸಲ್ಲಿಸಿದ್ದು, ಎರಡು ಎಫ್‌ಐಆರ್‌ ದಾಖಲಾಗಿವೆ, ಆರೋಪಿ ರಾಜೀವ್ ಗೌಡ ಬಂಧನ ಭೀತಿಯಿಂದ ತಲೆಮರೆಸಿಕೊಂಡು ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನವನ್ನು ಶಿವಕುಮಾರ್  ಉದ್ಘಾಟಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರು ಉತ್ತರ ಭಾಗದಲ್ಲಿ ಅರಣ್ಯ ಇಲಾಖೆ ಜಾಗದಲ್ಲಿ ಬಸವಣ್ಣನವರ ಹೆಸರಿನಲ್ಲಿ ಲಾಲ್ ಬಾಗ್ ಮಾದರಿ ಉದ್ಯಾನ ನಿರ್ಮಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇನ್ನು ಬೆಂಗಳೂರಿನ ದಕ್ಷಿಣ ಭಾಗದಲ್ಲೂ ಇದೇ ಮಾದರಿ ಉದ್ಯಾನ ನಿರ್ಮಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

ಬೆಂಗಳೂರು ಉದ್ಯಾನ ನಗರಿ ಎಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಪಡೆದಿದೆ. ಹೀಗಾಗಿ ಈ ಉದ್ಯಾನಗಳ ನಿರ್ಮಾಣಕ್ಕೆ ಜಿಬಿಎ, ಪಾಲಿಕೆ ವತಿಯಿಂದ ಆರ್ಥಿಕ ನೆರವು ನೀಡುವುದಾಗಿ ತಿಳಿಸಿದ್ದೇನೆ. ನಾನು ನಗರದ ಪಾರ್ಕ್ ಗಳಿಗೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿ ನೋಡಿ, ಜನರ ಅಭಿಪ್ರಾಯ ಪಡೆದು ಅನೇಕ ಅಭಿವೃದ್ಧಿ ಕೆಲಸ ಕೈಗೊಳ್ಳಲು ಸೂಚಿಸಿದ್ದೇನೆ. ನಮ್ಮ ರಾಜ್ಯದಿಂದ ಹೊರ ದೇಶಗಳಿಗೆ ಪ್ರತಿ ವಾರ 17 ವಿಮಾನದಷ್ಟು ಹೂ, ತರಕಾರಿ ರಫ್ತಾಗುತ್ತಿದೆ. ಅಂತಾರಾಷ್ಟ್ರೀಯ ಮಟ್ಟದ ಹೂ, ತರಕಾರಿ ಮಾರುಕಟ್ಟೆ ನಿರ್ಮಿಸಲು ಮುಂದಾಗಿದ್ದೇವೆ ಎಂದರು.

ಇಂದು ಬೆಂಗಳೂರಿನ ಲಾಲ್ ಬಾಗ್ ನಲ್ಲಿ 219ನೇ ಫಲಪುಷ್ಟ ಪ್ರದರ್ಶನವನ್ನು ಉದ್ಘಾಟಿಸಲಾಗಿದೆ. ಇದು ಬಹಳ ಐತಿಹಾಸಿಕ ಉದ್ಯಾನವಾಗಿದ್ದು, ಕರ್ನಾಟಕ ರಾಜ್ಯದ ಆಸ್ತಿಯಾಗಿದೆ. ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ ತೋಟಗಾರಿಕೆ ಇಲಾಖೆಯಿಂದ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಈ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗುತ್ತಿದೆ. ಈ ಬಾರಿ ಪೂರ್ಣಚಂದ್ರ ತೇಜಸ್ವಿ ಅವರ ಸಿದ್ಧಾಂತ ಮೌಲ್ಯಗಳ ಪ್ರತಿಬಿಂಬವನ್ನು ಪುಷ್ಪಪ್ರದರ್ಶನದಲ್ಲಿ ರೂಪಿಸಲಾಗಿದೆ ಎಂದು ತಿಳಿಸಿದರು.

ಇನ್ನು ಈ ಭಾಗದಲ್ಲಿ ಮೆಟ್ರೋ ಹಾಗೂ ಸುರಂಗದಿಂದ ಲಾಲ್ ಬಾಗ್ ಗೆ ತೊಂದರೆಯಾಗುತ್ತದೆ ಎಂದು ಕೆಲವರು ರಾಜಕಾರಣ ಮಾಡಿದ್ದಾರೆ. ಈ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಈ ಐತಿಹಾಸಿಕ ಉದ್ಯಾನ ಕಾಪಾಡಲು ಬೇರೆಯವರಿಗಿಂತ ಹೆಚ್ಚಿನ ಆಸಕ್ತಿ ನನಗಿದೆ. ನಾಗರೀಕರ ಸೌಲಭ್ಯಕ್ಕೆ ನಾವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ. ಬೆಂಗಳೂರು ನಗರದ ಜನಸಂಖ್ಯೆ 70 ಲಕ್ಷದಿಂದ 1.50 ಕೋಟಿಗೆ ಏರಿಕೆಯಾಗಿದೆ. ಹೀಗಾಗಿ ಇಲ್ಲಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಿಸಬೇಕಾಗಿದೆ. ಎಲ್ಲಾ ಪಾರ್ಕ್ ಹಾಗೂ ಕೆರೆ ಉಳಿಸುವುದು ನಮ್ಮ ಕರ್ತವ್ಯ. ಅದಕ್ಕೆ ಅಗತ್ಯ ಕ್ರಮವನ್ನು ನಮ್ಮ ಸರ್ಕಾರ ಕೈಗೊಳ್ಳುತ್ತಿದೆ ಎಂದು ಭರವಸೆ ನೀಡಿದರು.

ಬೆಂಗಳೂರಿನ ನಾಗರೀಕರು, ಶಾಲಾ ಮಕ್ಕಳು, ವಿದ್ಯಾರ್ಥಿಗಳು 10 ದಿನಗಳ ಫಲಪುಷ್ಪ ಪ್ರದರ್ಶನದಲ್ಲಿ ಭಾಗವಹಿಸಿ ಇದಕ್ಕೆ ಹೆಚ್ಚಿನ ಉತ್ತೇಜನ ನೀಡಬೇಕು ಎಂದು ಮನವಿ ಮಾಡುತ್ತೇನೆ. ಈ ಉತ್ತಮ ಕೆಲಸ ಮಾಡಿಕೊಂಡು ಬಂದಿರುವ ಸ್ಥಳೀಯ ಶಾಸಕರು, ಸಚಿವರಾದ ರಾಮಲಿಂಗಾರೆಡ್ಡಿ, ಯುವರಾಜ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

Related Posts

Leave a Reply

Your email address will not be published. Required fields are marked *