Thursday, January 15, 2026
Menu

ಬೆಳಗಾವಿಯಲ್ಲಿ ವಾಲ್ಮೀಕಿ ಭವನ ವಿವಾದ: ಎರಡು ಗುಂಪುಗಳ ನಡುವೆ ಕಲ್ಲು ತೂರಾಟ

valmiki bhavan

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರು ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯ ಈಗ ವಿಕೋಪಕ್ಕೆ ತಿರುಗಿದೆ.

ಎರಡು ಸಮುದಾಯಗಳ ನಡುವೆ ತೀವ್ರ ಘರ್ಷಣೆ ಸಂಭವಿಸಿದ್ದು, ಪರಸ್ಪರ ಕಲ್ಲು ತೂರಾಟ ನಡೆದಿದೆ. ಈ ಘಟನೆಯಿಂದಾಗಿ ಇಡೀ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.

ಘಟನೆಯ ಹಿನ್ನೆಲೆ

ಗ್ರಾಮದಲ್ಲಿ ಉದ್ದೇಶಿತ ವಾಲ್ಮೀಕಿ ಭವನ ನಿರ್ಮಾಣಕ್ಕಾಗಿ ಅಧಿಕಾರಿಗಳು ಸರ್ವೆ ಕಾರ್ಯ ಕೈಗೊಂಡಿದ್ದರು. ಈ ಸರ್ವೆಗೆ ಸ್ಥಳೀಯ ನಿವಾಸಿ ಸದಾಶಿವ ಭಜಂತ್ರಿ ಅವರ ಕುಟುಂಬ ತೀವ್ರ ವಿರೋಧ ವ್ಯಕ್ತಪಡಿಸಿತ್ತು ಎನ್ನಲಾಗಿದೆ. ಈ ವಿರೋಧದಿಂದ ಕೆರಳಿದ ಮತ್ತೊಂದು ಗುಂಪು, ಸದಾಶಿವ ಅವರ ಮನೆಯ ಮೇಲೆ ನೂರಾರು ಜನರೊಂದಿಗೆ ಮುಗಿಬಿದ್ದು ಕಲ್ಲು ತೂರಾಟ ನಡೆಸಿದೆ ಎಂಬ ಆರೋಪ ಕೇಳಿಬಂದಿದೆ.

ಜೀವಾಪಾಯದಿಂದ ಪಾರಾದ ಕುಟುಂಬ:

ದಾಳಿಯ ವೇಳೆ ರೊಚ್ಚಿಗೆದ್ದ ಗುಂಪು ಮನೆಯ ಮೇಲೆ ಕಲ್ಲು ಎಸೆಯಲಾರಂಭಿಸಿದಾಗ, ಮನೆಯಲ್ಲಿದ್ದ ಕುಟುಂಬದ ಸದಸ್ಯರು ತಕ್ಷಣ ಬಾಗಿಲು ಹಾಕಿಕೊಂಡು ಒಳಗೆ ಅವಿತುಕೊಳ್ಳುವ ಮೂಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಿಡಿಗೇಡಿಗಳ ಈ ಕೃತ್ಯದಿಂದಾಗಿ ಮನೆ ಹಾಗೂ ಶೌಚಾಲಯದ ಗೋಡೆಗಳಿಗೆ ಭಾರಿ ಹಾನಿಯಾಗಿದೆ. ಕಲ್ಲು ತೂರಾಟದ ಸಂದರ್ಭದಲ್ಲಿ ಮನೆಯಲ್ಲಿದ್ದ ವೃದ್ಧೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಎಸ್‌ಪಿ ಭೇಟಿ, ಬಿಗಿ ಭದ್ರತೆ:

ವಿಷಯ ತಿಳಿಯುತ್ತಿದ್ದಂತೆಯೇ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಗ್ರಾಮದಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.

ಈ ಕುರಿತು ನೇಸರಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಗ್ರಾಮದ ಪ್ರಮುಖ ವೃತ್ತಗಳಲ್ಲಿ ಪೊಲೀಸ್ ಪಹರೆ ಮುಂದುವರಿದಿದ್ದು, ಶಾಂತಿ ಸಭೆ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ.

Related Posts

Leave a Reply

Your email address will not be published. Required fields are marked *