ಬೆಂಗಳೂರಿನ ಬಿಎಂಎಸ್ ಎಜುಕೇಶನ್ ಟ್ರಸ್ಟ್ಗೆ ಸಂಬಂಧಿಸಿದ ಎಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಹಗರಣ ಪ್ರಕರಣದಲ್ಲಿ ಇಡಿ 19.46 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದರೆ, ರಾಜ್ಯದಲ್ಲಿ 2021–22ರಲ್ಲಿ ನಡೆದ 545 ಪಿಎಸ್ಐ ನೇಮಕದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 1.53 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದೆ. 18 ಸ್ಥಳಗಳಲ್ಲಿ ಇಡಿ ದಾಳಿ ನಡೆಸಿದೆ.
ಎಂಜಿನಿಯರಿಂಗ್ ಪ್ರವೇಶ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದೂರು ನೀಡಿದ್ದು, ಮಲ್ಲೇಶ್ವರಂ ಹಾಗೂ ಹನುಮಂತನಗರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಪ್ರತ್ಯೇಕವಾಗಿ ಕೇಸ್ ದಾಖಲಿಸಿಕೊಂಡ ಇಡಿ ತನಿಖೆ ಆರಂಭಿಸಿತ್ತು. 2025ರಲ್ಲಿ ಬಿಎಂಎಸ್ ಟ್ರಸ್ಟ್ ಸದಸ್ಯರು, ಎಂಜಿನಿಯರಿಂಗ್ ಕಾಲೇಜುಗಳು, ಮಧ್ಯವರ್ತಿಗಳು ಹಾಗೂ ಏಜೆಂಟರ ಮನೆಗಳು ಸೇರಿ 18 ಸ್ಥಳಗಳಲ್ಲಿ ಇಡಿ ದಾಳಿ ನಡೆಸಲಾಗಿತ್ತು ನಿ.ಗದಿತ ಶುಲ್ಕಕ್ಕಿಂತ 10 ಪಟ್ಟು ಹೆಚ್ಚು ದರಕ್ಕೆ ಸೀಟ್ಗಳ ಮಾರಾಟ ಪತ್ತೆಯಾಗಿದೆ. ಕಾಲೇಜು ಆಡಳಿತ ಮಂಡಳಿ ಮಧ್ಯವರ್ತಿಗಳು ಹಾಗೂ ಏಜೆಂಟರ ಮೂಲಕ ವಿದ್ಯಾರ್ಥಿಗಳಿಂದ ನೇರವಾಗಿ ಮತ್ತು ಶೈಕ್ಷಣಿಕ ಸಲಹೆಗಾರರ ಮೂಲಕ ಹಣ ಸಂಗ್ರಹಿಸುತ್ತಿದ್ದು, ಬಹಿರಂಗ ಗೊಂಡಿದೆ.
ಈ ಹಣವನ್ನು ಟ್ರಸ್ಟ್ನ ಲೆಕ್ಕಪತ್ರಗಳಲ್ಲಿ ದಾಖಲಿಸದೆ ಸೀಟ್ಗಳನ್ನು ನಿಗದಿತ ಶುಲ್ಕಕ್ಕಿಂತ 10 ಪಟ್ಟು ಹೆಚ್ಚು ದರಕ್ಕೆ ಮಾರಾಟ ಮಾಡಿರುವುದು ತಿಳಿದುಬಂದಿದೆ. ಈ ಅಕ್ರಮದಿಂದ 20 ಕೋಟಿ ರೂ. ಸಂಗ್ರಹದ ಸಾಕ್ಷ್ಯ ದೊರೆತಿದ್ದು, ದಾಳಿ ವೇಳೆ 1.86 ಕೋಟಿ ನಗದು ಪತ್ತೆಯಾಗಿತ್ತು. ಅಕ್ರಮ ಹಣವನ್ನು ಟ್ರಸ್ಟಿಗಳು ವೈಯಕ್ತಿಕ ಲಾಭಕ್ಕಾಗಿ ಬಳಸಿ ಆಸ್ತಿ ಖರೀದಿಸಿದ್ದರಿಂದ 19.46 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.
2021–22ರಲ್ಲಿ ನಡೆದ 545 ಪಿಎಸ್ಐಗಳ ನೇಮಕ ಹಗರಣ ನಡೆದ ಸಂದರ್ಭ ಪೊಲೀಸ್ ನೇಮಕ ವಿಭಾಗದ ಎಡಿಜಿಪಿ ಅಧಿಕಾರಿ ಅಮೃತ್ ಪೌಲ್ ಹಾಗೂ ಹೆಡ್ ಕಾನ್ಸ್ಟೇಬಲ್ ಎಚ್. ಶ್ರೀಧರ್ ಅವರಿಗೆ ಸೇರಿದ ಆಸ್ತಿ ಜಪ್ತಿ ಮಾಡಲಾಗಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆ ಮತ್ತು ಸಿಐಡಿಯಲ್ಲಿ ಈಗಾಗಲೇ ಪ್ರಕರಣಗಳು ದಾಖಲಾಗಿದ್ದು, ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆ ಇಡಿಯು ಪ್ರತ್ಯೇಕವಾಗಿ ಕೇಸ್ ದಾಖಲಿಸಿ ತನಿಖೆ ನಡೆಸುತ್ತಿದೆ.
ಪ್ರತಿ ಅಭ್ಯರ್ಥಿಯಿಂದ 30 ಲಕ್ಷದಿಂದ 70 ಲಕ್ಷ ರೂ.ವರೆಗೆ ಲಂಚ ಪಡೆಯಲಾಗಿದ್ದು, ಆ ಹಣವನ್ನು ಆರೋಪಿಗಳು ಡೈರಿ ಮತ್ತು ಲೆಕ್ಕಪತ್ರಗಳಲ್ಲಿ ಕೈಸಾಲ ಎಂದು ದಾಖಲಿಸಿಕೊಂಡಿದ್ದರುಈ ಅಕ್ರಮ ಹಣವನ್ನು ಮನೆಗಳ ನಿರ್ಮಾಣ ಸೇರಿದಂತೆ ವೈಯಕ್ತಿಕ ಉದ್ದೇಶಗಳಿಗೆ ಬಳಸಿಕೊಂಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.


