ಸೋಮವಾರದಿಂದ ಜಾರಿಗೆ ಬರಬೇಕಿದ್ದ ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆಯನ್ನು ಸದ್ಯಕ್ಕೆ ತಡೆಹಿಡಿಯಲು ಸಚಿವ ಮನೋಹರ್ ಲಾಲ್ ಖಟ್ಟರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ತಿಳಿಸಿದ್ದಾರೆ.
ಬೆಂಗಳೂರು ಮೆಟ್ರೋ ದರವನ್ನು ಅಸಮರ್ಥನೀಯವಾಗಿ ಏರಿಕೆ ಮಾಡಲು ಹೊರಟಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಸಂಬಂಧಪಟ್ಟಂತೆ ಇಂದು ನಾನು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವರಾದ ಶ್ರೀ ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ದೂರವಾಣಿ ಮೂಲಕ ಸುದೀರ್ಘವಾಗಿ ಚರ್ಚೆ ನಡೆಸಿದೆ ಎಂದಿದ್ದಾರೆ.
ಈಗಾಗಲೇ ಭಾರತದಲ್ಲೇ ಅತ್ಯಂತ ದುಬಾರಿ ಮೆಟ್ರೋ ದರವನ್ನು ಹೊಂದಿರುವ ಬೆಂಗಳೂರಿನಲ್ಲಿ, ಮತ್ತೊಂದು ದರ ಏರಿಕೆಯು ಲಕ್ಷಾಂತರ ನಾಗರಿಕರಿಗೆ ಹಾಗೂ ಸಾರ್ವಜನಿಕ ಸಾರಿಗೆಯನ್ನೇ ನಂಬಿಕೊಂಡಿರುವ ಸಾಮಾನ್ಯ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ ಎಂದು ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದು ಅವರು ಹೇಳಿದ್ದಾರೆ.
ನನ್ನ ಮನವಿಗೆ ಅತ್ಯಂತ ತ್ವರಿತವಾಗಿ ಸ್ಪಂದಿಸಿದ ಕೇಂದ್ರ ಸಚಿವರು, ಸೋಮವಾರದಿಂದ ಜಾರಿಗೆ ಬರಬೇಕಿದ್ದ ಪ್ರಸ್ತಾವಿತ ದರ ಏರಿಕೆಯನ್ನು ಸದ್ಯಕ್ಕೆ ತಡೆಹಿಡಿಯಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದರ ಜೊತೆಗೆ ದರ ನಿಗದಿ ಸಮಿತಿಯಲ್ಲಿನ ಲೋಪದೋಷಗಳ ಬಗ್ಗೆ ವೈಯಕ್ತಿಕವಾಗಿ ಪರಿಶೀಲಿಸುವುದಾಗಿ ಭರವಸೆ ನೀಡಿರುವ ಅವರು, ರಾಜ್ಯ ಸರ್ಕಾರ ವಿನಂತಿಸಿದರೆ ದರಗಳ ವೈಜ್ಞಾನಿಕ ಪರಿಷ್ಕರಣೆಗಾಗಿ ಹೊಸ ಸಮಿತಿಯನ್ನು ರಚಿಸುವ ಬಗ್ಗೆಯೂ ಸಕಾರಾತ್ಮಕವಾಗಿ ಮಾತನಾಡಿದರು ಎಂದು ಅಶೋಕ ತಿಳಿಸಿದ್ದಾರೆ.
ಪ್ರಯಾಣಿಕರ ಹಿತದೃಷ್ಟಿಯಿಂದ ಕೂಡಲೇ ಕಾರ್ಯಪ್ರವೃತ್ತರಾದ ಕೇಂದ್ರ ಸಚಿವರಿಗೆ ನಾನು ರಾಜ್ಯದ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಈಗ ಪ್ರಶ್ನೆ ಇರುವುದು ರಾಜ್ಯ ಸರ್ಕಾರದ ಮುಂದೆ. ಜನರ ಹಿತಾಸಕ್ತಿಯನ್ನು ಬದಿಗಿಟ್ಟು ದರ ಏರಿಕೆಗೆ ಮುಂದಾಗಿರುವ ಮುಖ್ಯಮಂತ್ರಿ @siddaramaiah ನೇತೃತ್ವದ ರಾಜ್ಯ @INCKarnataka ಸರ್ಕಾರ, ತನ್ನ ಹಠಮಾರಿ ಧೋರಣೆ ಬಿಟ್ಟು ಹೊಸ ಎಫ್ಎಫ್ಸಿ (Fare Fixation Committee) ರಚಿಸುವ ಪ್ರಕ್ರಿಯೆಯನ್ನು ಕೂಡಲೇ ಆರಂಭಿಸ ಬೇಕು ಎಂದು ಆಗರಹಿಸಿದ್ದಾರೆ.
ಮೆಟ್ರೋ ಪ್ರಯಾಣವು ಪ್ರತಿಯೊಬ್ಬ ಸಾಮಾನ್ಯ ನಾಗರಿಕನಿಗೂ ಕೈಗೆಟುಕುವ ದರದಲ್ಲಿ ಸಿಗುವವರೆಗೂ ಮತ್ತು ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವವರೆಗೂ ನಮ್ಮ ಈ ಹೋರಾಟ ಮುಂದುವರಿಯಲಿದೆ ಎಂದು ಹೇಳಿದ್ದಾರೆ.


