ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಬಿಜೆಪಿ ಶಾಸಕ ಬೈರತಿ ಬಸವರಾಜ್ಗೆ ಏಳು ದಿನಗಳ ಪೊಲೀಸ್ ಕಸ್ಟಡಿ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ.
ಫೆಬ್ರವರಿ 21ರವರೆಗೆ ಬಸವರಾಜ್ ಪೊಲೀಸ್ ಕಸ್ಟಡಿಯಲ್ಲಿರಲಿದ್ದು, ಸಿಐಡಿ ಕಚೇರಿಯಲ್ಲಿ ತೀವ್ರ ವಿಚಾರಣೆ ನಡೆಯಲಿದೆ. ಬೈರತಿ ಬಸವರಾಜ್ಗೆ ಹೃದಯ ಸಮಸ್ಯೆ ಇದೆ ಎಂದು ಹಿಂದೆ ಹೇಳಲಾ ಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ನಡೆಸಿದ ಪರೀಕ್ಷೆಯಲ್ಲಿ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ ಎಂದು ವರದಿ ಬಂದ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.
ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಕೇಳಿದ್ದರು, ಅದರಂತೆ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಸವರಾಜ್ ಪ್ರಮುಖ ಆರೋಪಿ. ಪೊಲೀಸ್ ಕಸ್ಟಡಿ ಅವಧಿಯಲ್ಲಿ ಹೆಚ್ಚಿನ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ. ನ್ಯಾಯಾಲಯದ ಆದೇಶದ ನಂತರ ಬೈರತಿ ಬಸವರಾಜ್ ಅವರನ್ನು ಸಿಐಡಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ.
ಜುಲೈ 15ರ ರಾತ್ರಿ ಬಿಕ್ಲು ಶಿವನನ್ನು ಹತ್ಯೆ ಮಾಡಲಾಗಿತ್ತು. ಈತನ ನಿಜವಾದ ಹೆಸರು ಶಿವಪ್ರಕಾಶ್ 40-44 ವರ್ಷ. ಬೆಂಗಳೂರಿನ ರೌಡಿಶೀಟರ್ ಮತ್ತು ರಿಯಲ್ ಎಸ್ಟೇಟ್ ಉದ್ಯಮಿ. ಆತನ ವಿರುದ್ಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ 11ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು.
2025 ಜುಲೈ 15ರ ರಾತ್ರಿ ಬೆಂಗಳೂರಿನ ಹಲಸೂರು (ಭಾರತಿನಗರ) ಪ್ರದೇಶದ ಮಿನಿ ಅವೆನ್ಯೂ ರಸ್ತೆಯಲ್ಲಿ ಆತನ ಮನೆ ಬಳಿ 8-12 ಜನರ ಗುಂಪು ಮಾರಕ ಆಯುಧಗಳಿಂದ ಕೊಚ್ಚಿ, ಬರ್ಬರವಾಗಿ ಹತ್ಯೆ ಮಾಡಿತ್ತು. ಹತ್ಯೆ ಆತನ ತಾಯಿ ಎದುರು ನಡೆದಿದ್ದು, ದಾಳಿಯ ವಿಡಿಯೋಗಳು ಬಯಲಾಗಿವೆ. ಬಿಕ್ಷು ಶಿವನ ತಾಯಿ ವಿಜಯಲಕ್ಷ್ಮಿ ದೂರು ಆಧರಿಸಿ ಭಾರತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


