ಕೊಪ್ಪಳದ ಕುಷ್ಟಗಿ ತಾಲೂಕಿನ ಜಮಲಾಪೂರ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಡಿ ಗ್ರೂಪ್ ನೌಕರ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಮೇಶ್ ದಂಡಿನ (35) ಆತ್ಮಹತ್ಯೆ ಮಾಡಿಕೊಂಡವರು. ತಾವರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಸ್ತಿ ವಿಚಾರಕ್ಕೆ ಕಳೆದ ಕೆಲವು ದಿನಗಳಿಂದ ಸಹೋದರಿಯರು ಗಲಾಟೆ ಮಾಡುತ್ತಿದ್ದರು, ಆಸ್ತಿಗಾಗಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಇದೇ ವಿಚಾರಕ್ಕೆ ಗಲಾಟೆಯಾಗಿದ್ದು, ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ರಮೇಶ್ ಆತ್ಮಹತ್ಯೆ ಹಿನ್ನೆಲೆ ಅವರ ಸಹೋದರಿ ಸೇರಿ ಐದಕ್ಕೂ ಹೆಚ್ಚು ಜನರ ವಿರುದ್ಧ ದೂರು ದಾಖಲಾಗಿದೆ.
ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆ ನೌಕರರು
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ನಾಲ್ವರು ಗುತ್ತಿಗೆ ನೌಕರರು ಆತ್ಮಹತ್ಯೆಗೆ ಯತ್ನಿಸಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಡಿಹೆಚ್ಒ ಮಂಜುನಾಥ ಗಾಯಾಳುಗಳ ಆರೋಗ್ಯ ವಿಚಾರಿಸಿ, ಹಳೆ ನೌಕರರನ್ನೇ ಮುಂದುವರಿಸುವುದಾಗಿ ಡಿಹೆಚ್ಒ ಭರವಸೆ ನೀಡಿದ್ದಾರೆ. ಈ ಸಂದರ್ಭ ದಲಿತ ಸಂಘಟನೆಗಳು, ಬಿಜೆಪಿ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದಿದ್ದು, ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.
ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸರ ಮಾಡುತ್ತಿದ್ದ ಗುತ್ತಿಗೆ ನೌಕರರ ಕೆಲಸ ತೆಗೆಯಲು ಮುಂದಾಗಿದ್ದ ವೇಳೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ನಾಲ್ವರ ಬಾಯಿಯೊಳಗೆ ಪೆಟ್ರೋಲ್ ಹೋಗಿದ್ದರಿಂದ ಅಸ್ವಸ್ಥಗೊಂಡಿದ್ದರು.


