ಎಲ್ಪಿಜಿ ಸಿಲಿಂಡರ್ಗಳ ಸಂಗ್ರಹ ಮತ್ತು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ.
ಯಾರಾದರೂ ಅನಿಲ ಸಿಲಿಂಡರ್ಗಳನ್ನು ಸಂಗ್ರಹಿಸಲು ಅಥವಾ ಕಾಳಸಂತೆಯಲ್ಲಿ ಮಾರಾಟ ಮಾಡಲು ಪ್ರಯತ್ನಿಸಿದ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ರಾಜ್ಯಾದ್ಯಂತ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಮನೆಗಳಿಗೆ ಅಡಿಗೆ ಅನಿಲ ಸಿಲಿಂಡರ್ಗಳ ಪೂರೈಕೆಯಲ್ಲಿ ಪ್ರಸ್ತುತ ಯಾವುದೇ ಸಮಸ್ಯೆಗಳಿಲ್ಲ, ವಾಣಿಜ್ಯ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಸಮಸ್ಯೆಗಳಿವೆ. ಹೋಟೆಲ್ಗಳು ಒಂದೆರಡು ದಿನಗಳವರೆಗೆ ಸಮಸ್ಯೆಗಳನ್ನು ಎದುರಿಸಬಹುದು, ಸಮಸ್ಯೆಯನ್ನು ಪರಿಹರಿಸುವ ಪ್ರಯತ್ನಗಳು ನಡೆಯುತ್ತಿವೆ. ಅನಿಲ ಮತ್ತು ತೈಲ ಪೂರೈಕೆ ಶೀಘ್ರದಲ್ಲೇ ಸುಧಾರಿಸುತ್ತದೆ ಎಂದು ಸಚಿವರು ಭರವಸೆ ವ್ಯಕ್ತಪಡಿಸಿದರು.
ಇದೇ ವೇಳೆ ಒಳ ಮೀಸಲಾತಿ ಕುರಿತ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ನೇಮಕಾತಿಯಲ್ಲಿ ಒಳ ಮೀಸಲಾತಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 27 ರಂದು ವಿಶೇಷ ಸಂಪುಟ ಸಭೆ ಕರೆದಿದ್ದಾರೆ. ಆ ದಿನ ಸಮಸ್ಯೆ ಬಗೆಹರಿಯುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದರು.
ಸಂಪುಟ ನಿರ್ಧಾರದ ನಂತರ, ಸರ್ಕಾರ ಆದೇಶ ಹೊರಡಿಸುತ್ತದೆ. ಅದರ ನಂತರ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗುತ್ತದೆ. 56,000 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ನಡೆಸುವುದಾಗಿ ಸರ್ಕಾರ ಹೇಳಿದೆ. ಗೃಹ ಇಲಾಖೆಯಲ್ಲಿ 8,000 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಒಳ ಮೀಸಲಾತಿ ಅಳವಡಿಸಿಕೊಂಡು ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತೇವೆ ಎಂದು ಹೇಳಿದರು.
ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯದಲ್ಲಿ ಉಂಟಾಗಿರುವ ಅಡುಗೆ ಅನಿಲ ಸಮಸ್ಯೆ ಮುಂದಿನ 08-10 ದಿನಗಳಲ್ಲಿ ಇತ್ಯರ್ಥವಾಗಲಿದೆ. ಹೋಟೆಲ್ ಉದ್ಯಮದವರು ತಾಳ್ಮೆ ಕಾಯ್ದುಕೊಳ್ಳಬೇಕು. ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಕ್ರಮಕ್ಕೆ ಸೂಚಿಸಲಾಗಿದೆ. ಅಡುಗೆ ಅನಿಲ ಮೇಲೆ ರಾಜ್ಯ ಸರ್ಕಾರದ ಶೇ.55 ತೆರಿಗೆ ಹಾಕುತ್ತಿರುವ ಬಗ್ಗೆ ಮಾಹಿತಿ ನೀಡಲಾಗುವುದೆಂದು ಸಚಿವ ಕೆ.ಎಚ್.ಮುನಿಯಪ್ಪ ಶುಕ್ರವಾರ ಹೇಳಿದ್ದಾರೆ.
ಹೋಟೆಲ್ಗಳಿಗೆ ಗ್ಯಾಸ್ ಸಿಲಿಂಡರ್ಗಳನ್ನು ಒದಗಿಸಲು ಬೇಡಿಕೆಗೆ ಅನುಗುಣವಾಗಿ ಸದ್ಯದ ಮಟ್ಟಿಗೆ ಸಾಧ್ಯವಾಗುತ್ತಿಲ್ಲ. ನಿಯಮಿತ ಆಹಾರ ತಯಾರಿಸಲು ಎಲೆಕ್ಟ್ರಿಕಲ್ ಸ್ಟವ್ ಬಳಸಿ ಎಂದು ಹೋಟೆಲ್ ಮಾಲೀಕರಿಗೆ ಸಲಹೆ ನೀಡಿದ್ದಾರೆ.


