ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಿರ್ಮಾಣವಾಗಿರುವ ಇಎಸ್ಐ ಆಸ್ಪತ್ರೆ ಕಾರ್ಯಾರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸದ್ಯದಕ್ಕೇ ಇದು ಸೇವೆ ಆರಂಭಿಸಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಹೇಳಿದ್ದಾರೆ.
ವಿಧಾನಸಭೆಯ ಕಲಾಪದಲ್ಲಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜ್ ಅವರ ಪ್ರಶ್ನೆಗೆ ಲಾಡ್ ಉತ್ತರಿಸಿದರು. 2016 ರಲ್ಲಿ ಶಂಕುಸ್ಥಾಪನೆಯಾಗಿರುವ ಈ ಆಸ್ಪತ್ರೆ ಇನ್ನಾದರೂ ಕಾರ್ಯಾರಂಭ ಮಾಡಿಲ್ಲ. ಈ ಬಗ್ಗೆ ಕ್ರಮವಹಿಸಬೇಕು ಎಂದು ಶಾಸಕರು ಆಗ್ರಹಿಸಿದಾಗ ಸಚಿವರು ಈ ಉತ್ತರ ನೀಡಿದರು.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನೂರು ಹಾಸಿಗೆಗಳ ಇಎಸ್ಐ ಆಸ್ಪತ್ರೆಗೆ ಕಾಮಗಾರಿ 2024 ರಲ್ಲಿ ಮುಕ್ತಾಯವಾಗಿದೆ. ಆದರೆ ಆಸ್ಪತ್ರೆಯ ಗುತ್ತಿಗೆದಾರರು ಕೇಂದ್ರ ಇಎಸ್ಐ ನಿಗಮಕ್ಕೆ ಅಥವಾ ರಾಜ್ಯ ಸರ್ಕಾರಕ್ಕೆ ಆಸ್ಪತ್ರೆಯನ್ನು ಹಸ್ತಾಂತರ ಮಾಡಿಲ್ಲ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಇದಾದ ನಂತರ ವೈದ್ಯರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಕೇಂದ್ರ ಉದ್ಯೋಗ ಹಾಗೂ ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಸಹ ಮಾತನಾಡಿದ್ದೇನೆ ಎಂದು ವಿವರಿಸಿದರು.
ಗುತ್ತಿಗೆದಾರರು ಆಕ್ಯುಪೆನ್ಸಿ ಸರ್ಟಿಫಿಕೇಟ್ (ಒಸಿ) ನೀಡಬೇಕು. ಶೋಭಾ ಅವರು ಗುತ್ತಿಗೆದಾರರಿಗೆ ಮಾತನಾಡಿದ್ದಾರೆ. ಒಮ್ಮೆ ಒಸಿಯನ್ನು ಕೇಂದ್ರ ಅಥವಾ ರಾಜ್ಯ ಸರ್ಕಾರಕ್ಕೆ ನೀಡಿದರೆ ಆರಂಭ ಮಾಡುತ್ತೇವೆ. ಫಲಾನುಭವಿಗಳಿಗೆ ಯಾವುದೇ ತೊಂದರೆಯಾಗದಂತೆ ನಾವು ನೋಡಿಕೊಂಡಿದ್ದೇವೆ. ಇಲ್ಲಿ ಯಾವುದೇ ರಾಜಕೀಯ ಇಲ್ಲ. ನಾನೇ ಖುದ್ದಾಗಿ ಸಚಿವರನ್ನು ಭೇಟಿ ಮಾಡಿ ವಿವರಿಸಿದ್ದೇನೆ ಈ ನಿಟ್ಟಿನಲ್ಲಿ ಎಲ್ಲಾ ಕ್ರಮ ಕೈಗೊಂಡಿದ್ದೇವೆ. ಕೆಲವೇ ದಿನಗಳಲ್ಲಿ ಆಸ್ಪತ್ರೆ ಆರಂಭವಾಗಲಿದೆ ಎಂದು ಭರವಸೆ ನೀಡಿದರು.


