ಬಾಗಲಕೋಟೆ ಉಪಚುನಾವಣೆಗೆ ಮತದಾನ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ನವರು ನಿನ್ನೆ ರಾತ್ರಿ ಲಕ್ಷಾಂತರ, ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ ಎಂಬ ಮಾಹಿತಿ ಇದೆ. ಗೋಕಾಕ್, ಅರಬಾವಿ ಮತ್ತು ಬೆಳಗಾವಿ ಜಿಲ್ಲೆಗಳಿಂದ ಹೊರಗಿನವರು ಬಂದು ಬೀಡುಬಿಟ್ಟಿದ್ದಾರೆ. ಈ ವಿಚಾರಗಳನ್ನು ಚುನಾವಣಾಧಿಕಾರಿಗಳ ಗಮನಕ್ಕೆ ತಂದಿರುವುದಾಗಿ ಹೇಳಿದ್ದಾರೆ.
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಕುಟುಂಬ ಸಮೇತರಾಗಿ ಮತದಾನ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ತಮ್ಮ ಗೆಲುವಿನ ಕುರಿತು ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದರು. ಎಲ್ಲ ಯುವಕ, ಯುವತಿಯರು, ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾರತೀಯ ಜನತಾ ಪಕ್ಷದ ಕಮಲದ ಗುರುತಿಗೆ ಮತ ಹಾಕುವಂತೆ ಮನವಿ ಮಾಡಿದರು.
ದಾವಣಗೆರೆಯಲ್ಲೂ ಮತದಾನದ ವೇಳೆ ಹಣ ಹಂಚಿಕೆ ಆರೋಪ ಕೇಳಿಬಂದಿದೆ. ಬಾಷಾ ನಗರ ಮುಖ್ಯರಸ್ತೆಯಲ್ಲಿ ನಡೆದ ಘಟನೆಯ ಬಗ್ಗೆ ಎಸ್ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಪ್ರತಿಕ್ರಿಯೆ ನೀಡಿದ್ದು, ನಮ್ಮ ಪಕ್ಷದಿಂದ ಹಣ ಅಥವಾ ಸೀರೆ ಹಂಚಿಕೆ ನಡೆಯುವುದಿಲ್ಲ. ನಮ್ಮನ್ನು ಪ್ರೀತಿಸುವ ಮತದಾರರು ಸ್ವಯಂ ಪ್ರೇರಿತವಾಗಿ ಸಹಾಯ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಕೆಲವೆಡೆ ಬಹಿರಂಗವಾಗಿ ಹಣ ಹಂಚಿಕೆ ನಡೆಯುತ್ತಿರುವುದನ್ನು ಗಮನಿಸಿ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದೇನೆ ಎಂದು ತಿಳಿಸಿದ್ದಾರೆ. ಮತದಾನದ ವೇಳೆ ಹಣ ಹಂಚಿಕೆ ಮಾಡುವವರ ವಿರುದ್ಧ ಕಾನೂನು ಹೋರಾಟ ನಡೆಸುತ್ತೇನೆ. ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೆ ವಿಷಯವನ್ನು ತಂದು, ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.


