ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಒಂದು ಲಕ್ಷ ರೂ. ಲಂಚ ಪಡೆಯುತ್ತಿದ್ದಂತೆಯೇ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿ, ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣ ಪಂಚಾಯತಿಯಲ್ಲಿ ನಡೆದಿದೆ.
ಮುಖ್ಯಾಧಿಕಾರಿ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇ-ಖಾತೆ ಮಾಡಲು ಅಧಿಕಾರಿ ಸುರೇಶ್ ಶೆಟ್ಟಿ 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಅದರಂತೆ 1 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತಕ್ಕೆ ಸಿಕ್ಕಿ ಹಾಕಿಕೊಂಡಿದ್ದಾರೆ.
ರಾಘವೇಂದ್ರ ರೆಡ್ಡಿ ಎಂಬವರಿಗೆ ಎರಡು ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಮುಖ್ಯಾಧಿಕಾರಿ ಅಡ್ವಾನ್ಸ್ ಆಗಿ ಒಂದು ಲಕ್ಷ ರೂ. ತೆಗೆದುಕೊಳ್ಳುವಾಗ ಸಿಕ್ಕಿಬಿದ್ದಿದ್ದಾನೆ. ಹಣ ತೆಗೆದುಕೊಳ್ಳುವಾಗ ಲೋಕಾಯುಕ್ತರು ಬರುತ್ತಿದ್ದಂತೆ ಅಧಿಕಾರಿ ಸಿರವಾರದಿಂದ ಕವಿತಾಳ ಪಟ್ಟಣದ ಕಡೆಗೆ ಪರಾರಿಯಾಗಲು ಪ್ರಯತ್ನಿಸಿದ್ದಾರೆ. ಕಾರಿನಲ್ಲಿ ಬೆನ್ನಟ್ಟಿದ ಲೋಕಾಯುಕ್ತ ಪೊಲೀಸರು ಅಧಿಕಾರಿಯನ್ನು ಹಿಡಿದಿದ್ದಾರೆ.
ಲೋಕಾಯುಕ್ತ ತಂಡ ಕವಿತಾಳ ಪ್ರವಾಸಿ ಮಂದಿರದಲ್ಲಿ ಅಧಿಕಾರಿಯ ವಿಚಾರಣೆ ನಡೆಸುತ್ತಿದೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ರವಿ ಪುರುಷೋತ್ತಮ್, ಸಿಬ್ಬಂದಿ ವಿಜಯಕುಮಾರ್, ಅಮರೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.


