Menu

ತಾಯಿಯ ನೋಡಿಕೊಳ್ಳಲಾಗದ ಮಗಳು ಆಸ್ತಿ ವಾಪಸ್‌ ನೀಡಬೇಕು: ಹೈಕೋರ್ಟ್‌ ಚಾಟಿ

ತಾಯಿಯನ್ನು ನೋಡಿಕೊಳ್ಳಲಾಗದ ಮಗಳು ತಾಯಿಯ ಆಸ್ತಿಯನ್ನು ಅವರಿಗೆ ವಾಪಸ್‌ ನೀಡುವಂತೆ ಹಿರಿಯ ನಾಗರಿಕರ ನಿರ್ವಹಣಾ ನ್ಯಾಯಮಂಡಳಿ ಮತ್ತು ಉಪವಿಭಾಗಾಧಿಕಾರಿಗಳು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಪುರಸ್ಕರಿಸಿದೆ.

ತಾಯಿಯಯನ್ನು ನೋಡಿಕೊಳ್ಳುವ ಕಾನೂನು, ನೈತಿಕ ಮತ್ತು ಸಾಮಾಜಿಕ ಜವಾಬ್ದಾರಿಯಿಂದ ಮಗಳು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಪ್ರಕರಣವೊಂದರಲ್ಲಿ ಮಗಳ ಹೆಸರಿಗೆ ನೋಂದಣಿಯಾದ ಆಸ್ತಿಯನ್ನು ಮತ್ತೆ ತಾಯಿಗೆ ಹಿಂದಿರುಗಿಸಲು ಮಗಳಿಗೆ ಸೂಚಿದೆ.

ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆಯಡಿ ತಾಯಿ ಉಡುಗೊರೆಯಾಗಿ ನೀಡಿದ್ದ ಆಸ್ತಿ ನೋಂದಣಿ ರದ್ದುಪಡಿಸಿದ ನ್ಯಾಯಮಂಡಳಿಯ ಕ್ರಮ ಎತ್ತಿಹಿಡಿದ ಉಪವಿಭಾಗಾಧಿಕಾರಿಗಳ ಆದೇಶ ರದ್ದು ಕೋರಿ ಪವಿತ್ರಾ ಎಂಬಾಕೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರ ಪೀಠ ಈ ಆದೇಶ ಮಾಡಿದೆ.

ದಾನಪತ್ರದಲ್ಲಿ ತಾಯಿಯನ್ನು ನೋಡಿಕೊಳ್ಳಬೇಕು ಎಂದು ಸ್ಪಷ್ಟವಾಗಿ ಬರೆಯದಿದ್ದರೂ ಆಸ್ತಿ ನೀಡುವ ಹಿಂದೆ ಅಂಥದ್ದೊಂದು ನಂಬಿಕೆ ಇರುತ್ತದೆ ಎಂಬುದು ಕಾನೂನಿನ ಆಶಯ. ಮಗಳು ಪವಿತ್ರಾಗೆ ಸ್ವಂತ ಮನೆಯಿದ್ದರೂ ವೃದ್ಧ ತಾಯಿ ಬಾಡಿಗೆ ಮನೆಯಲ್ಲಿರುವಂತೆ ಮಾಡಿರುವುದು ಬೇಜವಾಬ್ದಾರಿತನ. ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆ-2007 ಉದ್ದೇಶವೇ ಅಸಹಾಯಕ ಪೋಷಕರನ್ನು ರಕ್ಷಿಸುವುದು. ಇದನ್ನು ಕಡೆಗಣಿಸಲು ಸಾಧ್ಯವಿಲ್ಲ ಎಂದು ಪೀಠ ಹೇಳಿದೆ.

62 ವರ್ಷದ ನಿವೃತ್ತ ಶಿಕ್ಷಕಿ ಜಿ.ಹೇಮಾ ತಮ್ಮ ಹೆಸರಿನಲ್ಲಿದ್ದ ಸ್ವಯಾರ್ಜಿತ ಆಸ್ತಿಯನ್ನು ವೃದ್ಧಾಪ್ಯದ ಕಾಲದಲ್ಲಿ ಮಕ್ಕಳು ಆಸರೆಯಾಗುತ್ತಾರೆ ಮತ್ತು ಆಸ್ತಿಯ ಬಾಡಿಗೆಯಿಂದ ಜೀವನ ಸಾಗುತ್ತದೆ ಎಂಬ ನಂಬಿಕೆ ಮೇಲೆ ಮಗಳು ಆರ್.ಪವಿತ್ರಾ ಮತ್ತು ಮಗ ಆರ್.ವೇಣುಗೋಪಾಲ್ ಹೆಸರಿಗೆ ದಾನಪತ್ರ ಮೂಲಕ ವರ್ಗಾಯಿಸಿದ್ದರು. ಬಳಿಕ ಮಕ್ಕಳಿಬ್ಬರು, ಮನೆ ಬಾಡಿಗೆ ವಸೂಲಿ ಮಾಡಲು ಮುಂದಾಗಿದ್ದರು. ತಾಯಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಮುಂದಾಗಿರಲಿಲ್ಲ. ತಾಯಿಗೆ ಮಾನಸಿಕ ಹಿಂಸೆ ನೀಡಲಾಗಿತ್ತು. ಬೇಸತ್ತ ಹೇಮಾ ಅವರು, ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆಯ, ಆಸ್ತಿಯನ್ನು ಮಕ್ಕಳಿಗೆ ವರ್ಗಾಯಿಸಿದ್ದ ದಾನಪತ್ರ ರದ್ದುಮಾಡಬೇಕು ಎಂದು ಕೋರಿ ಹಿರಿಯ ನಾಗರಿಕರ ನಿರ್ವಹಣಾ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿದ್ದರು.

ನ್ಯಾಯಮಂಡಳಿ, ಆಸ್ತಿ ವರ್ಗಾವಣೆ ರದ್ದುಗೊಳಿಸಿ ಮತ್ತೆ ಅವರ ಹೆಸರಿಗೆ ನೋಂದಣಿ ಮಾಡಿಸಿಕೊಟ್ಟಿತ್ತು. ಅದನ್ನು ಪ್ರಶ್ನಿಸಿ ಮಗಳು ಮೇಲ್ಮನವಿ ಸಲ್ಲಿಸಿದ್ದರು. ಈ ಮೇಲ್ಮನವಿ ವಿಚಾರಣೆ ನಡೆಸಿದ್ದ ಉಪವಿಭಾಗಾಧಿಕಾರಿಗಳು ನ್ಯಾಯಮಂಡಳಿ ಆದೇಶ ಎತ್ತಿಹಿಡಿದಿದ್ದರು. ಈ ಆದೇಶ ಪ್ರಶ್ನಿಸಿ ಮಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಹೇಮಾ ಸ್ವಂತ ಗಳಿಕೆಯಿಂದ ಸಂಪಾದಿಸಿದ ಆಸ್ತಿಗಳನ್ನು ತಮ್ಮ ಮಗ ಮತ್ತು ಮಗಳ ಪರವಾಗಿ ವರ್ಗಾಯಿಸಿದ್ದಾರೆ. ಮಕ್ಕಳ ಕೈಯಲ್ಲಿ ಆರೈಕೆ, ರಕ್ಷಣೆ ಮತ್ತು ಆರ್ಥಿಕ ಭದ್ರತೆಯ ನಂಬಿಕೆ ಮತ್ತು ಕಾನೂನುಬದ್ಧ ನಿರೀಕ್ಷೆಯನ್ನಿಟ್ಟುಕೊಂಡಿದ್ದಾರೆ. ಸ್ವಂತ ಆಸ್ತಿಯಲ್ಲಿ ಆಶ್ರಯ ಮತ್ತು ಅದರಿಂದ ಉಂಟಾಗುವ ಆದಾಯದ ಲಾಭ ಎರಡನ್ನೂ ಕಳೆದುಕೊಂಡು ಈಗ ಬಾಡಿಗೆ ಮನೆಯಲ್ಲಿ ವಾಸಿಸುವಂತಾಗಿದೆ. ಆದ್ದರಿಂದ ಉಪವಿಭಾಗಾಧಿಕಾರಿಗಳ ಆದೇಶ ರದ್ದುಗೊಳಿಸುವುದಿಲ್ಲ. ದಾನಪತ್ರಗಳನ್ನು ರದ್ದುಗೊಳಿಸಿ ಆಸ್ತಿಯನ್ನು ತಾಯಿಯ ಸ್ವಾಧೀನಕ್ಕೆ ಮತ್ತೆ ನೀಡುವುದು ಸೂಕ್ತ ಕ್ರಮ ಎಂದು ಹೈಕೋರ್ಟ್‌ ಹೇಳಿದೆ.

Related Posts

Leave a Reply

Your email address will not be published. Required fields are marked *