ಬೇಡಿಕೆಗೆಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಪ್ರತಿಭಟನೆ ತೀವ್ರಗೊಳಿಸಲು ನಿರ್ಧರಿಸಿದ್ದು, ಬೇಡಿಕೆ ಈಡೇರಿಸದಿದ್ದರೆ ಮೇ.20ರಂದು ಸಂಪೂರ್ಣ ಮುಷ್ಕರ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಬೆಂಗಳೂರಿನ ಟೌನ್ಹಾಲ್ನಲ್ಲಿ ನಡೆದ ಸಭೆಯಲ್ಲಿ ಸಾರಿಗೆ ನೌಕರರ ಮುಖಂಡರು ಈ ಮುಷ್ಕರ ನಿರ್ಧಾರ ಘೋಷಿಸಿದ್ದಾರೆ ಮೇ. 20 ರಂದು ಎಲ್ಲಾ ಬಸ್ ನಿಲ್ಲಿಸಿ ಪ್ರತಿಭಟನೆ ನಡೆಸುತ್ತೇವೆ. ರಾಜ್ಯ ಸರ್ಕಾರ ಪ್ರತಿ ಬಾರಿ ನಮ್ಮ ಬೇಡಿಕೆ ಈಡೇರಿಸಲು ಹಿಂದೇಟು ಹಾಕಿ ಸಂಧಾನ ನಡೆಸುತ್ತದೆ. ಈ ಬಾರಿ ಮಾತುಕತೆಗೆ ಜಗ್ಗುವುದಿಲ್ಲ. ಬೇಡಿಕೆ ಈಡೇರಿಸದಿದ್ದರೆ ಭಾರಿ ಪ್ರತಿಭಟನೆ ನಡೆಸುವುದಾಗಿ ಸಾರಿಗೆ ಮುಖಂಡ ವಿಜಯ್ ಭಾಸ್ಕರ್ ತಿಳಿಸಿದ್ದಾರೆ.
ಮೇ 20 ರಂದು ಬಸ್ ಮುಷ್ಕರ ನಡೆಸಿದರೆ, ಮೇ. 19 ರಂದು ಕಾಂಗ್ರೆಸ್ ತುಮಕೂರಿನಲ್ಲಿ ಹಮ್ಮಿಕೊಂಡಿರುವ ಸಾಧನಾ ಸಮಾವೇಶದಲ್ಲಿ ಕಪ್ಪು ಬಾವುಟ ಪ್ರದರ್ಶಿಸುವುದಾಗಿ ಎಚ್ಚರಿಸಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸುವ ರಾಹುಲ್ ಗಾಂಧಿ ನಮ್ಮ ಕಪ್ಪು ಬಾವುಟ ನೋಡಬೇಕು, ಪ್ರತಿಭಟನೆ ಬಿಸಿ ತಟ್ಟಬೇಕು ಎಂದು ವಿಜಯ್ ಭಾಸ್ಕರ್ ಹೇಳಿದ್ದಾರೆ.
ಸಾರಿಗೆ ನೌಕರ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಲ್ಲಿ ಕೆಲವನ್ನು ಇತ್ತೀಚೆಗೆ ರಾಜ್ಯ ಸರ್ಕಾರ ಪೂರೈಸಿದೆ. 15%-25% ವರೆಗೆ ವೇತನ ಪರಿಷ್ಕರಿಸಲು ಜಂಟಿಕ್ರಿಯಾ ಸಮಿತಿ ಬೇಡಿಕೆ ಇಟ್ಟಿತ್ತು. ಸರ್ಕಾರ 12.50% ವೇತನ ಪರಿಷ್ಕರಿಸಿ ಸರ್ಕಾರ ಆದೇಶ ಮಾಡಿದೆ.
ಸರ್ಕಾರ ಏಕಪಕ್ಷೀಯವಾಗಿ ನಿರ್ಧಾರ ತಗೊಂಡಿದೆಂದು ಸಾರಿಗೆ ನೌಕರರು ಆಕ್ರೋಶ ವ್ಯಕ್ತಪಡಿಸಿ, ಸರ್ಕಾರದ ಆದೇಶದ ಹೊರಬಂದ ಬೆನ್ನಲ್ಲೇ ಮೇ.20ರಂದು ಮುಷ್ಕರದ ಎಚ್ಚರಿಕೆ ನೀಡಿದ್ದರು.


