ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನಾಳೆ (ಮೇ 20) ಸಾರಿಗೆ ನೌಕರರ ಮುಷ್ಕರದಿಂದಾಗಿ ಬಸ್ ಸಂಚಾರ ಸ್ಥಗಿತಗೊಳ್ಳುವ ಆತಂಕ ಒಂದೆಡೆ, ಮತ್ತೊಂದೆಡೆ ರಾಜ್ಯದಲ್ಲಿ ನಾಳೆ ಮೆಡಿಕಲ್ ಶಾಪ್ಗಳು ಬಂದ್ ಇರಲಿವೆ.
ಔಷಧ ಮಳಿಗೆಗಳ ಬಂದ್ಗೆ ಕರೆ ನೀಡಲಾಗಿದ್ದು, ಇದಕ್ಕೆ ಬೆಂಬಲ ವ್ಯಕ್ತವಾಗಿದೆ.ತುರ್ತು ಸಂದರ್ಭಗಳಲ್ಲಿ ಔಷಧಗಳು ಸಿಗುವುದು ಕಷ್ಟವಾಗಲಿದೆ. ಕರ್ನಾಟಕ ಫಾರ್ಮಾ ರಿಟೇಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಆರ್ಗನೈಸೇಷನ್ ಸೇರಿ ಹಲವು ಒಕ್ಕೂಟಗಳು ಹೋರಾಟಕ್ಕೆ ನೈತಿಕ ಬೆಂಬಲ ಸೂಚಿಸಿವೆ.
ಖಾಸಗಿ ಮೆಡಿಕಲ್ ಶಾಪ್ ಮಾಲೀಕರು ಹಾಗೂ ವಿತರಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಯಾವುದೇ ಸೂಕ್ತ ಲಿಖಿತ ಪ್ರಿಸ್ಕ್ರಿಪ್ಷನ್ ಇಲ್ಲದೆ ಆನ್ಲೈನ್ ಪ್ಲಾಟ್ಫಾರ್ಮ್ಗಳಲ್ಲಿಗಿ ನಿಯಮಬಾಹಿರವಾಗಿ ಔಷಧಗಳನ್ನು ಮಾರಾಟ ಮಾಡುತ್ತಿರುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಹಾಗೂ ಸಣ್ಣ ವ್ಯಾಪಾರಿಗಳ ಬದುಕು ಬೀದಿಗೆ ಬರುತ್ತಿದೆ ಎಂದು ಸಂಘಟನೆಗಳು ಗಂಭೀರ ಆರೋಪ ಮಾಡಿವೆ.
ದೊಡ್ಡ ಕಾರ್ಪೊರೇಟ್ ಕಂಪನಿಗಳು ರಿಯಾಯಿತಿ ನೀಡಿ ಗ್ರಾಹಕರನ್ನು ಸೆಳೆಯುತ್ತಿರುವುದರಿಂದ ಸಾಂಪ್ರದಾಯಿಕ ಮೆಡಿಕಲ್ ಶಾಪ್ಗಳು ನಷ್ಟದಲ್ಲಿವೆ, ನಾಳೆ ಖಾಸಗಿ ಮೆಡಿಕಲ್ ಶಾಪ್ಗಳನ್ನು ಮುಚ್ಚಿ ಪ್ರತಿಭಟಿಸಲು ನಿರ್ಧರಿಸಲಾಗಿದೆ. ಆಸ್ಪತ್ರೆ ಆವರಣದೊಳಗಿನ ಫಾರ್ಮಸಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.


