ಕೇಂದ್ರ ಚುನಾವಣಾ ಆಯೋಗ ಜಾರಿಗೊಳಿಸಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್ ಬೆಂಬಲಿಸಿದೆ. ದೇಶದಲ್ಲಿ ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕ ಚುನಾವಣೆಗಳನ್ನು ನಡೆಸುವ ಉದ್ದೇಶದ ಈ ಪ್ರಕ್ರಿಯೆ ಸಂಪೂರ್ಣವಾಗಿ ಸಂವಿಧಾನಬದ್ಧವಾಗಿದ್ದು, ಚುನಾವಣಾ ಆಯೋಗ ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಿದೆ ಎಂದು ನ್ಯಾಯಪೀಠ ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರಿದ್ದ ದ್ವಿಸದಸ್ಯ ಪೀಠ ಈ ಮಹತ್ವದ ತೀರ್ಪು ಪ್ರಕಟಿಸಿತು. ದೇಶದ ಸಂವಿಧಾನದ ವಿಧಿ 324 ಹಾಗೂ ಜನಪ್ರತಿನಿಧಿ ಕಾಯ್ದೆ-1950ರ ಸೆಕ್ಷನ್ 21(3) ಅಡಿಯಲ್ಲಿ ಚುನಾವಣಾ ಆಯೋಗ ಯಾವುದೇ ಸಮಯದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಸುವ ಅಧಿಕಾರವಿದೆ ಎಂದು ಕೋರ್ಟ್ ತಿಳಿಸಿದೆ.
ಚುನಾವಣಾ ಆಯೋಗ ಕೈಗೊಂಡಿದ್ದ SIR ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಆಯೋಗವು ತನ್ನ ಶಾಸನಬದ್ಧ ಅಧಿಕಾರವನ್ನು ಮೀರಿ ಕಾರ್ಯನಿರ್ವಹಿಸಿದೆ ಎಂಬ ವಾದವನ್ನು ನ್ಯಾಯಾಲಯ ತಳ್ಳಿಹಾಕಿದೆ.
SIR ಪ್ರಕ್ರಿಯೆಯ ಭಾಗವಾಗಿ ಅನುಮಾನಾಸ್ಪದ ದಾಖಲೆಗಳನ್ನು ಹೊಂದಿರುವ ಅಥವಾ ಪೌರತ್ವದ ಬಗ್ಗೆ ಗಂಭೀರ ಅನುಮಾನ ಮೂಡಿದ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವ ಅಧಿಕಾರ ಚುನಾವಣಾ ಆಯೋಗಕ್ಕೆ ಇದೆ. ಈ ಪ್ರಕ್ರಿಯೆ ನ್ಯಾಯಸಮ್ಮತವಾದ ಎಲ್ಲಾ ಮಾನದಂಡಗಳನ್ನು ಅನುಸರಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ದಾಖಲೆಗಳನ್ನು ಕೇಳಿದಷ್ಟಕ್ಕೆ ವ್ಯಕ್ತಿಗಳನ್ನು ದೇಶದ ನಾಗರಿಕರಲ್ಲ ಎಂದು ಗುರುತಿಸಲಾಗುತ್ತಿದೆ ಎಂಬ ಅರ್ಜಿದಾರರ ಆರೋಪವನ್ನೂ ಕೋರ್ಟ್ ನಿರಾಕರಿಸಿದೆ. ದಾಖಲೆ ಪರಿಶೀಲನೆ ಕಾನೂನುಬಾಹಿರ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.
SIR ಅಧಿಸೂಚನೆಯ ಪ್ರಕಾರ, 2002 ಅಥವಾ 2003ರ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದವರು ಕುಟುಂಬದ ಪೂರ್ವಜರ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿತ್ತು. ದಾಖಲೆಗಳನ್ನು ನೀಡಲು ವಿಫಲವಾದ ಲಕ್ಷಾಂತರ ಅನುಮಾನಾಸ್ಪದ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಆಯೋಗ ತಿಳಿಸಿತ್ತು.


