ವಿಚಾರಣೆ ಪೂರ್ಣಗೊಂಡು ಆದೇಶ ಕಾಯ್ದಿರಿಸಿದ ಬಳಿಕ ಮೂರು ತಿಂಗಳೊಳಗೆ ತೀರ್ಪು ಪ್ರಕಟಿಸಬೇಕು ಎಂದು ಸುಪ್ರೀಂ ಕೋರ್ಟ್ ದೇಶದ ಎಲ್ಲಾ ಹೈಕೋರ್ಟ್ಗಳಿಗೆ ಸೂಚಿಸಿದೆ.
ದೇಶದ ನ್ಯಾಯಾಂಗ ಪ್ರಕ್ರಿಯೆಯಲ್ಲಿ ವಿಳಂಬಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಸುಪ್ರೀಂಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಜಾಮೀನು ಅರ್ಜಿಗಳಂತಹ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಸಾಧ್ಯವಾದಷ್ಟು ಬೇಗ ವಿಲೇವಾರಿ ಮಾಡಬೇಕು ಎಂದು ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿ, ತೀರ್ಪು ಪ್ರಕಟಿಸಲು ವಿಳಂಬವಾಗುವುದರಿಂದ ಅರ್ಜಿದಾರರಿಗೆ ತುಂಬಲಾರದ ನಷ್ಟ ಉಂಟಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ. ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ತ್ವರಿತ ನಿರ್ಧಾರ ಅತ್ಯಗತ್ಯ.ವಿಶೇಷವಾಗಿ ಜಾಮೀನು ಅರ್ಜಿಗಳನ್ನು ಸಾಧ್ಯವಾದರೆ ಅದೇ ದಿನ ವಿಲೇವಾರಿ ಮಾಡಬೇಕು ಎಂದು ತಿಳಿಸಿದೆ.
ಆದೇಶವನ್ನು ಕಾಯ್ದಿರಿಸಿದರೆ ಮುಂದಿನ ದಿನದೊಳಗೆ ತೀರ್ಪು ಪ್ರಕಟಿಸಿ ಅಪ್ಲೋಡ್ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಜಾಮೀನು ಮಂಜೂರು ಅಥವಾ ಶಿಕ್ಷೆ, ಅಮಾನತು ಆದೇಶಗಳನ್ನು ತಕ್ಷಣ ಜೈಲು ಅಧಿಕಾರಿಗಳಿಗೆ ತಲುಪಿಸಬೇಕು. ಆರೋಪಿಯನ್ನು ಅಥವಾ ಶಿಕ್ಷಿತನನ್ನು ಸಾಧ್ಯವಾದರೆ ಅದೇ ದಿನ, ಇಲ್ಲವೇ ಮುಂದಿನ ದಿನ ಬಿಡುಗಡೆ ಮಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದೆ.


