Menu

ಬಾಲಕ ಕಳವು ಮಾಡಿದ್ದ 4.20 ಲಕ್ಷ ರೂ. ಮೌಲ್ಯದ ವಸ್ತು ಜಪ್ತಿ

ಮೊಬೈಲ್ ಹಾಗೂ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಬಾಲಕನನ್ನು ಹೆಣ್ಣೂರು ಪೊಲೀಸರು ಕಸ್ಟಡಿಗೆ ತೆಗೆದುಕೊಂಡು 4.20 ಲಕ್ಷ ರೂ. ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಿದ್ದಾರೆ.  4 ದ್ವಿಚಕ್ರ ವಾಹನಗಳು, 7 ಮೊಬೈಲ್ ,9 ಗ್ರಾಂ ಚಿನ್ನಾಭರಣ ಸೇರಿ 4.20 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹೆಣ್ಣೂರಿನ ಹೆಚ್‌ ಬಿಆರ್ ಲೇಔಟ್‌ನ ಪಿಜಿಯೊಂದರಲ್ಲಿ ವಾಸವಾಗಿದ್ದ ವ್ಯಕ್ತಿಯೊಬ್ಬರು ‌ ಕಳೆದ ಮೇ.19 ರಂದು ಸಂಜೆ ಹೆಚ್ ಬಿಆರ್ ಲೇಔಟ್‌ನ 18ನೇ ಕ್ರಾಸ್ ರಸ್ತೆಯಲ್ಲಿ ಪಿಜಿ ಗೆ ನಡೆದುಕೊಂಡು ಹೋಗುತ್ತಿರುವಾಗ ದ್ವಿಚಕ್ರ ವಾಹನದಲ್ಲಿ ಬಂದ ಬಾಲಕನು ಮೊಬೈಲ್‌ ಕಸಿದು ಪರಾರಿಯಾಗಿದ್ದನು.

ಈ ಸಂಬಂಧ ದಾಖಲಾಗಿದ್ದ  ಪ್ರಕರಣದ ತನಿಖೆಯನ್ನು ಕೈಗೊಂಡು ಖಚಿತ ಮಾಹಿತಿ ಪಡೆದ ಪೊಲೀಸರು  ನಾಗವಾರದ ಕೆಇಬಿ ಜಂಕ್ಷನ್ ಬಳಿ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ಹಾಗೂ ಒಂದು ಮೊಬೈಲ್ ಪೋನ್ ಸಮೇತ ಬಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪೊಲೀಸ್‌ ವಿಚಾರಣೆ ವೇಳೆ ಆತ ನಗರದ ಇತರ ಪೊಲೀಸ್ ಠಾಣಾ ಸರಹದ್ದುಗಳಲ್ಲಿ ದ್ವಿಚಕ್ರ ವಾಹನ ಮತ್ತು ಮೊಬೈಲ್ ಪೋನ್‌ಗಳನ್ನು ಕಳವು ಮಾಡಿರುವುದನ್ನು ಬಾಯ್ಬಿಟ್ಟಿದ್ದಾನೆ. ಕಳವು ಮಾಡಿದ ದ್ವಿಚಕ್ರ ವಾಹನಗಳನ್ನು ಚಳಕರೆಯ ಆಟದ ಮೈದಾನದ ಪಕ್ಕದ ಖಾಲಿ ಜಾಗದಲ್ಲಿ ನಿಲ್ಲಿಸಿರುವುದಾಗಿ ತಿಳಿಸಿದ್ದು, 3 ದ್ವಿಚಕ್ರ ವಾಹನಗಳು, ದ್ವಿಚಕ್ರ ವಾಹನದ ಡಿಕ್ಕಿಯಲ್ಲಿದ್ದ 6 ಮೊಬೈಲ್ ಗಳು ಹಾಗೂ ಒಂದು ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದೆ.
ಬಾಲಕನ ವಶದಿಂದ ಹೆಣ್ಣೂರು, ಬಾಣಸವಾಡಿ,ಕೆ.ಜಿ.ಹಳ್ಳಿ ಹಾಗೂ ಶಿವಾಜಿನಗರ ಪೊಲೀಸ್ ಠಾಣೆಯ ತಲಾ ಒಂದೊಂದು ದ್ವಿಚಕ್ರ ವಾಹನ ಕಳವು ಪ್ರಕರಣಗಳು, ಹೆಣ್ಣೂರು, ಬಾಣಸವಾಡಿ, ಸಂಪಿಗೆಹಳ್ಳಿ ಮತ್ತು ಬೆಂಗಳೂರಿನ ವಿವಿಧ ಕಡೆಗಳಲ್ಲಿ ಕಳ್ಳತನ ಮಾಡಿದ್ದ 7 ಮೊಬೈಲ್ ಫೋನ್ ಕಳವು ಪ್ರಕರಣಗಳು ಪತ್ತೆಯಾಗಿವೆ.‌ ಬಾಲಕನನ್ನು ಬಾಲ ಮಂದಿರಕ್ಕೆ ಬಿಡಲಾಗಿದೆ ಎಂದು ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತ ವಿಕ್ರಮ ಆಮಟೆ ತಿಳಿಸಿದ್ದಾರೆ.

ವೇಶ್ಯಾವಾಟಿಕೆ ದಂಧೆಯಲ್ಲಿದ್ದ  ನಾಲ್ವರು ಸೆರೆ

ಬೆಂಗಳೂರು ನಗರದ ಕೆಲವು ಭಾಗಗಳಲ್ಲಿ ಬಾಡಿಗೆ ಮನೆಗಳಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಮೂವರು ಮಹಿಳೆಯರು ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.  ಕೇಂದ್ರ ಅಪರಾಧ ವಿಭಾಗದ ಮಹಿಳಾ ರಕ್ಷಣಾ ದಳದ ಅಧಿಕಾರಿಗಳು ಪ್ರತ್ಯೇಕ ದಿನಗಳಂದು ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ನಗರದ ಟಿ ದಾಸರಹಳ್ಳಿ, ಜರ್ಗನಹಳ್ಳಿ ಮತ್ತು ಮೂಡಲಪಾಳ್ಯ ಪ್ರದೇಶಗಳಲ್ಲಿ ಬಾಡಿಗೆ ಮನೆಗಳಲ್ಲಿ ಮಹಿಳೆಯರನ್ನು ಇರಿಸಿಕೊಂಡು ವೇಶ್ಯಾವಾಟಿಕೆ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಕಾರ್ಯಾಚರಣೆ ವೇಳೆ ಮಹಿಳೆಯರನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಲಾಗುತ್ತಿತ್ತು. ವೇಶ್ಯಾವಾಟಿಕೆಗೆ ಅನುಕೂಲ ಮಾಡಿಕೊಡುವಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾದ ಮೂವರು ಮಹಿಳೆಯರು ಮತ್ತು  ಪುರುಷನನ್ನು ಬಂಧಿಸಲಾಗಿದೆ.

ಬಲವಂತವಾಗಿ ವೇಶ್ಯಾವಾಟಿಕೆಗೆ ಒಳಪಡಿಸಲಾಗಿದ್ದ ಇತರ ರಾಜ್ಯಗಳ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಮಹಿಳೆಯರನ್ನು ರಕ್ಷಣೆ  ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬಂಧಿತ ವ್ಯಕ್ತಿಗಳ ವಿಚಾರಣೆಯ ಸಮಯದಲ್ಲಿ, ಅಧಿಕ ಹಣ ಗಳಿಸುವ ಉದ್ದೇಶದಿಂದ, ವೇಶ್ಯಾವಾಟಿಕೆಯ ಸೇವೆಗಳನ್ನು ಬಯಸುವ ಪುರುಷರನ್ನು ದೂರವಾಣಿ ಮೂಲಕ ಸಂಪರ್ಕಿಸಲಾಗುತ್ತಿತ್ತು. ಬಾಡಿಗೆ ಮನೆಗಳಿಗೆ ಆಹ್ವಾನಿಸಿ, ಅಲ್ಲಿ ವೇಶ್ಯಾವಾಟಿಕೆ ಚಟುವಟಿಕೆಗಳನ್ನು ನಡೆಸಲಾಗುತ್ತಿತ್ತು ಎಂದು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.

ಆರೋಪಿಗಳ ವಿರುದ್ಧ ಬಾಗಲಗುಂಟೆ ಪೊಲೀಸ್ ಠಾಣೆ, ಪುಟ್ಟೇನಹಳ್ಳಿ ಪೊಲೀಸ್ ಠಾಣೆ ಮತ್ತು ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *