ರಾಜ್ಯ ಸರ್ಕಾರಿ ನೌಕರರ ಸರಣಿ ಗೈರುಹಾಜರಿ ಹಾಗೂ ತಡವಾಗಿ ಕಚೇರಿಗೆ ಬರುವ ಪ್ರವೃತ್ತಿಯನ್ನು ತೊಡೆದು ಹಾಕಲು ಪ್ರತಿಯೊಬ್ಬ ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ‘ಕರ್ತವ್ಯ’ ಆ್ಯಪ್ಮೂಲಕ ಹಾಜರಾತಿ ದಾಖಲಿಸುವುದು ಕಡ್ಡಾಯ ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
ನಿಯಮ ಉಲ್ಲಂಘಿಸುವವರ ವಿರುದ್ಧ AI ತಂತ್ರಜ್ಞಾನದ ಮೂಲಕ ಸ್ವಯಂಚಾಲಿತವಾಗಿ ಇಲಾಖಾ ಮುಖ್ಯಸ್ಥರಿಗೆ ವರದಿ ತಲುಪಲಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ (ಜೂನ್ 4) ನಡೆಸಿದ ಸಭೆಯಲ್ಲಿ ಈ ಸಂಬಂಧ ಸೂಚನೆ ನೀಡಿದ್ದರು. ಬಳಿಕ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧಿಕೃತ ಆದೇಶ ಪರಕಟಿಸಿದ್ದಾರೆ.
ಸರ್ಕಾರಿ ನೌಕರರ ಹಾಜರಾತಿಯನ್ನು ಡಿಜಿಟಲೀಕರಣಗೊಳಿಸಲು ಇ-ಆಡಳಿತ ಇಲಾಖೆಯು ಕರ್ತವ್ಯ ಆ್ಯಪ್ ಸಿದ್ಧಪಡಿಸಿದೆ. ಈಗಾಗಲೇ HRMS ತಂತ್ರಾಂಶದಲ್ಲಿ ಲಭ್ಯವಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಮಾಹಿತಿಯನ್ನು ನೋಂದಣಿಯಾಗಿದೆ. ಬಹಳಷ್ಟು ಸಿಬ್ಬಂದಿ ಈ ಆ್ಯಪ್ ಅನ್ನು ನಿರಂತರ ಬಳಸುತ್ತಿಲ್ಲ ಎಂಬುದು ಗೊತ್ತಾಗಿದೆ. ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಮತ್ತು ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಸೇರಿದಂತೆ ಪ್ರತಿಯೊಬ್ಬರೂ ಬೆಳಗ್ಗೆ 10 ಗಂಟೆಗೆ ಕರ್ತವ್ಯ ಆ್ಯಪ್ನಲ್ಲಿ ಚೆಕ್ ಇನ್ ಹಾಗೂ ಚೆಕ್ಔಟ್ ದಾಖಲಿಸುವುದು ಕಡ್ಡಾಯವಾಗಿದೆ.
ಈ ನಿಯಮ ಉಲ್ಲಂಘಿಸಿದರೆ AI ಜನರೇಟೆಡ್ ವರದಿ ಆಯಾ ಇಲಾಖೆಯ ಮುಖ್ಯಸ್ಥರ ವೈಯಕ್ತಿಕ ಲಾಗಿನ್ ಡ್ಯಾಶ್ ಬೋರ್ಡ್ಗೆ ನೇರವಾಗಿ ತಲುಪುತ್ತದೆ. ಇಲಾಖಾ ಮುಖ್ಯಸ್ಥರು ಪ್ರತಿದಿನ ಈ ಡ್ಯಾಶ್ ಬೋರ್ಡ್ ಪರಿಶೀಲಿ, ಹಾಜರಾತಿ ದಾಖಲಿಸದವರಿಗೆ ಸೂಕ್ತ ಸೂಚನೆ ಅಥವಾ ನೋಟಿಸ್ ನೀಡಬೇಕಾಗುತ್ತದೆ.
ಅಧಿಕಾರಿಗಳು ಅಥವಾ ಸಿಬ್ಬಂದಿ ಕಚೇರಿ ಕೆಲಸದ ನಿಮಿತ್ತ ಹೊರಗಡೆ ಪ್ರವಾಸದಲ್ಲಿದ್ದರೆ ಅದೂ ಆ್ಯಪ್ನಲ್ಲಿ ದಾಖಲಿಸಬಹುದಾಗಿದೆ. ನೌಕರರು ಆ್ಯಪ್ನಲ್ಲಿರುವ OOD Option ಆಯ್ಕೆ ಮಾಡಿ, ವಾಸದ ಉದ್ದೇಶವನ್ನು ನಮೂದಿಸಿ ಹಾಜರಾತಿ ದಾಖಲಿಸಬೇಕು. ಸಂಬಂಧಪಟ್ಟ ಮೇಲಾಧಿಕಾರಿಗಳು ಪರಿಶೀಲಿಸಿ ಧೃಢೀಕರಿಸಬೇಕಾಗುತ್ತದೆ.


