ಪತ್ನಿಯಿಂದ ಕಿರುಕುಳವೆಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಬೆಂಗೇರಿ ಹರಿಜನ ಕಾಲೋನಿಯಲ್ಲಿ ನಡೆದಿದೆ.
ಸಂತೋಷ್ ಅಳ್ಳೂರು (39) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೌಟುಂಬಿಕ ಕಲಹದ ಹಿನ್ನೆಲೆ ಸಂತೋಷ್ ಪತ್ನಿ ಪೊಲೀಸ್ ಠಾಣೆಗೆ ಹೋಗಿದ್ದರು, ಆಕೆಯ ದೂರಿನ ಹಿನ್ನೆಲೆ ಪೊಲೀಸ್ ಠಾಣೆಗೆ ಕರೆಸಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ನೊಂದ ಸಂತೋಷ್ ಡೆತ್ ನೋಟ್ ಬರೆದಿಟ್ಟು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
18 ವರ್ಷಗಳ ಹಿಂದೆ ಸಂತೋಷ್ ಪ್ರೀತಿಸಿ ಮದುವೆಯಾಗಿದ್ದು, ದಂಪತಿಗೆ ಮೂವರು ಮಕ್ಕಳಿದ್ದಾರೆ. ಪತ್ನಿಗೆ ಸಂತೋಷ್ ಅಂಗನವಾಡಿಯಲ್ಲಿ ನೌಕರಿ ಕೊಡಿಸಿದ್ದ. ಅಂಗನವಾಡಿ ಹುದ್ದೆ ಕಾಯಂ ಆದ ನಂತರ ಪತ್ನಿ ಊರೂರು ಸುತ್ತುತ್ತಿದ್ದಳು ಎಂದು ಆರೋಪಿಸಲಾಗಿದೆ. ಈ ವಿಚಾರಕ್ಕೆ ಗಂಡ – ಹೆಂಡತಿ ನಡುವೆ ಜಗಳ ನಡೆದಿತ್ತು. ಪೊಲೀಸರಿಗೆ ದೂರು ನೀಡಿದ ಪತ್ನಿ ವಿಚ್ಛೇದನಕ್ಕೂ ಅರ್ಜಿ ಸಲ್ಲಿಸಿ ಪತಿ ಜೊತೆ ಸಂಸಾರ ಮಾಡುವುದಿಲ್ಲ ಎಂದಿದ್ದರು.
ಈ ಕಾರಣಕ್ಕೆ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಪತ್ನಿ ಮತ್ತು ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ. ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


