ಬೆಂಗಳೂರು ನಗರದ ಹಸಿ- ಒಣ ಮಿಶ್ರ ಕಸವನ್ನು ಅಕ್ಟೋಬರ್ 27 ರಿಂದ ಡಂಪಿಂಗ್ ಯಾರ್ಡ್ಗಳಿಗೆ ಸಾಗಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಮಹತ್ವದ ಆದೇಶ ನೀಡಿದೆ.
ನಗರದಲ್ಲಿ ಉತ್ಪತ್ತಿಯಾಗುವ ಹಸಿ, ಒಣ ಹಾಗೂ ಮಿಶ್ರ ತ್ಯಾಜ್ಯವನ್ನು ಮೂಲದಲ್ಲೇ ವಿಂಗಡಿಸಿ ಬೆಂಗಳೂರಿನಲ್ಲೇ ಸಂಸ್ಕರಣೆ ಮಾಡಬೇಕು. ಯಾವುದೇ ಮಿಶ್ರ ತ್ಯಾಜ್ಯವನ್ನು ನೇರವಾಗಿ ಭೂಭರ್ತಿ ಪ್ರದೇಶಗಳಿಗೆ ಕಳುಹಿಸಬಾರದು ಎಂದು ನ್ಯಾಯಾಲಯವು ಆದೇಶದಲ್ಲಿ ಸ್ಪಷ್ಟಪಡಿಸಿದೆ.
ಬೆಂಗಳೂರಿನಲ್ಲಿ ಪ್ರತಿದಿನ 5 ಸಾವಿರ ಟನ್ ಘನ ತ್ಯಾಜ್ಯ ಉತ್ಪತ್ತಿಯಾಗುತ್ತಿದ್ದು, 4 ಸಾವಿರ ಟನ್ ಮಿಶ್ರ ತ್ಯಾಜ್ಯವಾಗಿದೆ. ಇನ್ನು ಮುಂದೆ ಮಿಶ್ರ ತ್ಯಾಜ್ಯವನ್ನು ಮೂಲದಲ್ಲೇ ಹಸಿ ಮತ್ತು ಒಣ ತ್ಯಾಜ್ಯವಾಗಿ ಪ್ರತ್ಯೇಕಿಸಿ ಸಂಸ್ಕರಿಸುವುದ ಕಡ್ಡಾಯವಾಗಲಿದೆ.
ನಗರದ ತ್ಯಾಜ್ಯವನ್ನು ಹೊರವಲಯದ ಲ್ಯಾಂಡ್ಫಿಲ್ ಪ್ರದೇಶಗಳಿಗೆ ಸಾಗಿಸಲಾಗುತ್ತಿತ್ತು. ಅಕ್ಟೋಬರ್ 27ರಿಂದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೇ ತ್ಯಾಜ್ಯ ಸಂಸ್ಕರಣಾ ವ್ಯವಸ್ಥೆ ರೂಪಿಸುವ ಜವಾಬ್ದಾರಿ ಸ್ಥಳೀಯ ಆಡಳಿತದ್ದಾಗಿರುತ್ತದೆ.
ಹೆಚ್ಚಿನ ಪ್ರಮಾಣದಲ್ಲಿ ತ್ಯಾಜ್ಯ ಉತ್ಪಾದಿಸುವ ಬೃಹತ್ ತ್ಯಾಜ್ಯ ಉತ್ಪಾದಕರಿಗೆ ಹೊಸ ನಿಯಮಗಳ ಕುರಿತು ಮಾಹಿತಿ ನೀಡಬೇಕು. ಪ್ರತಿ ಕ್ಷೇತ್ರದಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.


