ಮನೆ ಕೆಲಸದಾಕೆ ಮೇಲೆ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿರುವುದಾಗಿ ಹೇಳಲಾಗುತ್ತಿದೆ. ಹೆಚ್ಡಿ ರೇವಣ್ಣ ಮನೆಯಲ್ಲಿ ಕೆಲಸ ಮಾಡ್ತಿದ್ದ ಮಹಿಳೆ ನೀಡಿದ ದೂರಿನ ಆಧಾರದಡಿ ಪ್ರಕರಣ ದಾಖಲಾಗಿತ್ತು. . 2025ರ ಡಿಸೆಂಬರ್ನಲ್ಲಿ ಆರೋಪದಿಂದ ಮುಕ್ತಗೊಳಿಸಿ ಹೈಕೋರ್ಟ್ ಆದೇಶ ನೀಡಿತ್ತು.
ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪರ್ದೀವಾಲ ನೇತೃತ್ವದ ಪೀಠದಿಂದ ನೋಟಿಸ್ ಜಾರಿಯಾಗಿದೆ.
ಹೈಕೋರ್ಟ್ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ ಹೊರ ಹಾಕಿದ್ದು, ತಂದೆ ಮಗನ ಮೇಲೆ ಒಂದೇ ರೀತಿಯ ಆರೋಪಗಳಿವೆ. ಇವರನ್ನು ಮಾತ್ರ ಹೇಗೆ ಆರೋಪ ಮುಕ್ತಗೊಳಿಸಲಾಗಿದೆ ಎಂದು ವಿವರಣೆ ಕೇಳಿದೆ.
ಮುಂದಿನ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ವಿಸ್ತೃತವಾಗಿ ವಿಚಾರಣೆ ಮಾಡಲಿದೆ. ಹಲವು ತಿಂಗಳ ನಂತರ ಮೇಲ್ಮನವಿ ಸಲ್ಲಿಸಿದ ರಾಜ್ಯ ಸರ್ಕಾರದ ವಿರುದ್ಧ ಸುಪ್ರೀಂ ಕಿಡಿ ಕಾರಿದೆ. 2025ರ ಡಿಸೆಂಬರ್ ನಲ್ಲಿ ತೀರ್ಪು ನೀಡಲಾಗಿದ್ದು, ಅರ್ಜಿ ಸಲ್ಲಿಸಲು ಇಷ್ಟು ಸಮಯ ಯಾಕೆ ಎಂದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರವನ್ನು ಕೂಡ ತರಾಟೆಗೆ ತೆಗೆದುಕೊಂಡಿದೆ. ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ವಿಚಾರಣೆ ಮುಂದೂಡಿ ಹೆಚ್ ಡಿ ರೇವಣ್ಣಗೆ ನೋಟಿಸ್ ನೀಡಿದೆ.
2024ರಲ್ಲಿ ಮಾಜಿ ಸಚಿವ ಹೆಚ್ ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣವಿದು. ಮನೆ ಕೆಲಸದಾಕೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಮಾಡಿದ್ದರು. 2020ರಲ್ಲಿ ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದಾಗ ರೇವಣ್ಣ ಕಿರುಕುಳ ನೀಡಿರುವುದಾಗಿ ಆರೋಪ ಮಾಡಲಾಗಿದೆ. 2024ರಲ್ಲಿ ಸಂತ್ರಸ್ತೆ ಹೊಳೆನರಸೀಪುರ ಟೌನ್ ಠಾಣೆಗೆ ದೂರು ನೀಡಿದ್ದರು. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ವಿರುದ್ಧ ಸೆಕ್ಷನ್ 354 ಮತ್ತು 354ಎ ಅಡಿ ಪ್ರಕರಣ ದಾಖಲಾಗಿತ್ತು. ಸರ್ಕಾರ ಎಸ್ಐಟಿ ರಚಿಸಿ ತನಿಖೆಗೆ ಆದೇಶ ನೀಡಿತ್ತು.
ರೇವಣ್ಣ ಅವರನ್ನು ಬಂಧಿಸಿ ತನಿಖೆ ನಡೆಸಿದ್ದ ಎಸ್ಐಟಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 2,144 ಪುಟಗಳ ಆರೋಪ ಪಟ್ಟಿ ಸಲ್ಲಿಸಿತ್ತು.


