ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡು ನೀರು ಹರಿಸಲೇಬೇಕು ಎಂದು ಪಟ್ಟು ಹಿಡಿದಿದ್ದು, ಬರಗಾಲ ಮತ್ತು ಕುಡಿಯುವ ನೀರಿನ ತೀವ್ರ ಅಭಾವದ ಹಿನ್ನೆಲೆಯಲ್ಲಿ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ಕರ್ನಾಟಕ ಖಡಾಖಂಡಿತವಾಗಿ ಹೇಳಿದೆ.
ತಮಿಳುನಾಡಲ್ಲಿ ಮಳೆಯಾಗಲಿದೆ, ಆದರೂ ಕೃಷಿಗೆ ನೀರು ಕೇಳ್ತಿದ್ದಾರೆ. ನಮಗೆ ಇಲ್ಲಿ ಕುಡಿಯಲೂ ನೀರಿಲ್ಲ ಎಂದು ಕರ್ನಾಟಕ ತಿಳಿಸಿದೆ. ನೈರುತ್ಯ ಮುಂಗಾರು ಮಳೆಯ ಕೊರತೆಯಿಂದಾಗಿ ಕರ್ನಾಟಕ ನೀರಿಲ್ಲದೆ ಅಕ್ಷರಶಃ ತತ್ತರಿಸತೊಡಗಿದೆ. ಬರ ಅಧ್ಯಯನ ತಂಡವನ್ನು ರಾಜ್ಯಕ್ಕೆ ಕಳುಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಡಿಕೆಶಿ ಪತ್ರ ಬರೆದಿದ್ದಾರೆ. ಇಂದು (ಜುಲೈ 15) ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆ ನಡೆದಿದ್ದು, ಕಾವೇರಿ ಜಲಾನಯನ ಪ್ರದೇಶದ ವಾಸ್ತವ ಸ್ಥಿತಿಯನ್ನು ಅಧಿಕಾರಿಗಳು ವಿವರಿಸಿದ್ದಾರೆ.
ಕೆಆರ್ಎಸ್ನಿಂದ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲವೆಂದು ಸಭೆಯಲ್ಲಿ ಕರ್ನಾಟಕ ವಾದಿಸಿದೆ. ಕಾವೇರಿ ಕೊಳ್ಳದಲ್ಲಿ ಮಳೆ ಅಭಾವವಿದೆ. ಜೂನ್ ತಿಂಗಳಲ್ಲಿ ಜಲಾಶಯಗಳಿಗೆ ಶೂನ್ಯ ಒಳಹರಿವಿದ್ದು, ಜುಲೈ ತಿಂಗಳಲ್ಲಿ ಹಲವೆಡೆ ಸ್ವಲ್ಪ ಪ್ರಮಾಣದಲ್ಲಿ ಮಳೆಯಾಗಿದೆ. ಇದರಿಂದ ಬರಿದಾದ ಡ್ಯಾಂಗಳಿಗೆ ಸ್ವಲ್ಪ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ. ಮುಂಗಾರು ಮತ್ತೆ ಚುರುಕು ಪಡೆಯುವ ಮುನ್ಸೂಚನೆ ಇಲ್ಲ. ಸಂಗ್ರಹವಿರುವ ನೀರನ್ನು ಮುಂದಿನ ಮಾನ್ಸೂನ್ವರೆಗೂ ಕುಡಿಯಲು ಬಳಸಿಕೊಳ್ಳಬೇಕು. ಕರ್ನಾಟಕದಲ್ಲಿ ರೈತರು ಕೃಷಿಗೆ ನೀರು ಕೇಳುತ್ತಿದ್ದಾರೆ, ಆದರೆ ನಾವು ಬಿಡುತ್ತಿಲ್ಲ. ರಾಜ್ಯದಲ್ಲಿ ಸಂಪೂರ್ಣ ಬರ ಆವರಿಸಿದೆ. ಹೀಗಾಗಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ಕರ್ನಾಟಕ ತಿಳಿಸಿದೆ.
ನೀರಿಗಾಗಿ ತಮಿಳುನಾಡು ವಾದ ಮಂಡಿಸಿದ್ದರೂ ನೀರು ಬಿಡುವಂತೆ ಕರ್ನಾಟಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಸ್ಪಷ್ಟ ಸೂಚನೆ ನೀಡಿಲ್ಲ ಎನ್ನಲಾಗಿದೆ. ಸಚಿವ ರಾಮಲಿಂಗಾರೆಡ್ಡಿ ಅಧಿಕಾರಿಗಳ ಜೊತೆ ಸಭೆ ನಡಿಸಿದ್ದು, ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆ ಬಗ್ಗೆ ಮಾಹಿತಿ ಪಡೆದಿದ್ದಾರೆ.


