ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರ ಅಂತ್ಯ ಸಂಸ್ಕಾರ ಇಂದು ( ಸೋಮವಾರ) ಮಧ್ಯಾಹ್ನ ಹರದನಹಳ್ಳಿಯ ಮಾವಿನಕೆರೆಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಲಿದೆ.
ಮಾವಿನಕೆರೆಯಲ್ಲಿ 4,000 ಆಸನಗಳ ವ್ಯವಸ್ಥೆ ಮಾಡಲಾಗಿದೆ. ಅಂತಿಮ ಸಂಸ್ಕಾರವು ಒಕ್ಕಲಿಗ ಸಂಪ್ರದಾಯದಂತೆ ನಡೆಯಲಿದ್ದು, ಹಲವು ಜನಪ್ರತಿನಿಧಿಗಳು ಭಾಗಿಯಾಗಲಿದ್ದಾರೆ. ಹೊಳೆನರಸೀಪುರದ ರೇವಣ್ಣ ನಿವಾಸದಿಂದ ಪಾರ್ಥಿವ ಶರೀರದ ಅಂತಿಮ ಯಾತ್ರೆಯು ಮಾವಿನಕೆರೆಗೆ ಸಾಗಲಿದೆ. ಮಧ್ಯಾಹ್ನ 12 ಗಂಟೆಯಿಂದ ಮೂರು ಗಂಟೆಯವರೆಗೆ ರಾಜಕೀಯ ಗಣ್ಯರು ಹಾಗೂ ಕುಟುಂಬದ ಅತ್ಯಾಪ್ತರು ಅಂತಿಮ ದರ್ಶನ ಪಡೆಯಲಿದ್ದಾರೆ.
ಮಧ್ಯಾಹ್ನ ಮೂರು ಗಂಟೆಯ ನಂತರ ಅಂತ್ಯಕ್ರಿಯೆ ನೆರವೇರಲಿದೆ. ಪುರೋಹಿತರಾದ ಕಣ್ಣನ್ ಶರ್ಮಾ, ಮಹೇಶ್ ಶರ್ಮಾ, ನರಸಿಂಹಸ್ವಾಮಿ ಅಂತಿಮ ವಿಧಿವಿಧಾನ ನೆರವೇರಿಸಿ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.
ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ವಿ.ಸೋಮಣ್ಣ, ಶಿವರಾಜ್ ಸಿಂಗ್ ಚೌಹಾಣ್, ಮನೋಹರ ಲಾಲ್ ಖಟ್ಟರ್, ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಂಸದ ರಾಘವೇಂದ್ರ ಭಾಗಿಯಾಗಲಿದ್ದಾರೆ.
ದೇವೇಗೌಡರ ಕುಟುಂಬ ಸದಸ್ಯರ ಕೋರಿಕೆಯಂತೆ ಬೆಂಗಳೂರಿನ ವಾಸ್ತು ತಜ್ಞ ಹರಿಪ್ರಸಾದ್ ಹರದನಹಳ್ಳಿಗೆ ಭೇಟಿ ನೀಡಿ ಅಂತ್ಯಕ್ರಿಯೆಗೆ ಸ್ಥಳ ಪರಿಶೀಲಿಸಿದ್ದಾರೆ. ಹಾಸನ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ಹೊಳೆನರಸೀಪುರ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಚೆನ್ನಮ್ಮ ನಿಧನ ಹಿನ್ನೆಲೆ ಇಂದು ಹೊಳೆನರಸೀಪುರ ಪಟ್ಟಣದ ಅಂಗಡಿ ಮುಗ್ಗಟ್ಟು ಬಂದ್ ಆಗಲಿವೆ. ವರ್ತಕರು ಅಂಗಡಿಗಳನ್ನು ಬಂದ್ ಮಾಡಿ ಚನ್ನಮ್ಮರಿಗೆ ಸಂತಾಪ ಸೂಚಿಸಲು ನಿರ್ಧರಿಸಿದ್ದಾರೆ. ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.


