ಮೂವರು ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಹಾಗೂ ಹೆಚ್ಚುವರಿ ಹೊಣೆಗಾರಿಕೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಹೆಚ್ ಅವರಿಗೆ ಕೆಪಿಎಸ್ಸಿ ಪರೀಕ್ಷಾ ನಿಯಂತ್ರಕರ ಹೆಚ್ಚುವರಿ ಪ್ರಭಾರ, ಯಾದಗಿರಿ ಜಿ.ಪಂ. ಸಿಇಒ ಲವಿಶ್ ಓರ್ಡಿಯಾ ಅವರಿಗೆ ಕೆಪಿಎಸ್ಸಿ ಜಂಟಿ ಪರೀಕ್ಷಾ ನಿಯಂತ್ರಕರ ಹುದ್ದೆ ಹಾಗೂ ಪಂಚಾಯತ್ ರಾಜ್ ಆಯುಕ್ತೆ ಡಾ. ಅರುಂಧತಿ ಚಂದ್ರಶೇಖರ್ ಅವರಿಗೆ ಆರ್ಡಿಪಿಆರ್ ಇ-ಆಡಳಿತ ನಿರ್ದೇಶಕರ ಹೆಚ್ಚುವರಿ ಹೊಣೆ ವಹಿಸಲಾಗಿದೆ.
ಕೆಪಿಎಸ್ಸಿ ಪರೀಕ್ಷೆಗಳ ಜವಾಬ್ದಾರಿಯನ್ನು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಅವರಿಗೆ ವಹಿಸಿ ಮತ್ತೊಬ್ಬ ಅಧಿಕಾರಿಯ ನೆರವು ನೀಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ಎಚ್ ಪ್ರಸನ್ನ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಪರೀಕ್ಷಾ ನಿಯಂತ್ರಕರ ಹುದ್ದೆಯ ಹೆಚ್ಚುವರಿ ಪ್ರಭಾರ ನೀಡಲಾಗಿದೆ.
ಯಾದಗಿರಿ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವಿಶ್ ಓರ್ಡಿಯಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೆಪಿಎಸ್ಸಿಯ ಜಂಟಿ ಪರೀಕ್ಷಾ ನಿಯಂತ್ರಕರಾಗಿ ವರ್ಗಾಯಿಸಲಾಗಿದೆ. ಪಂಚಾಯತ್ ರಾಜ್ ಆಯುಕ್ತರಾಗಿರುವ ಡಾ. ಅರುಂಧತಿ ಚಂದ್ರಶೇಖರ್ ಅವರಿಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಹೊಣೆ ವಹಿಸಲಾಗಿದೆ.


