ಉತ್ತರಾಖಂಡದ ಚಮೋಲಿ ಜಿಲ್ಲೆಯ ಜಲವಿದ್ಯುತ್ ಯೋಜನಾ ಸ್ಥಳದಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗಕ್ಕೆ ನೀರು ನುಗ್ಗಿ ಏಳು ಕಾರ್ಮಿಕರು ಅಸು ನೀಗಿದ್ದಾರೆ, ದುರಂತದಲ್ಲಿ 13 ಕಾರ್ಮಿಕರು ಗಾಯಗೊಂಡಿದ್ದಾರೆ.
ಅಲಕನಂದಾ ನದಿ ಮೇಲೆ ನಿರ್ಮಾಣ ಹಂತದಲ್ಲಿರುವ ವಿಷ್ಣುಗಾಡ್-ಪಿಪಲ್ಕೋಟಿ ಜಲವಿದ್ಯುತ್ ಯೋಜನೆಯ ಟೇಲ್ ರೇಸ್ ಟನಲ್ನಲ್ಲಿ ಈ ದುರ್ಘಟನೆ ನಡೆದಿದೆ. ಹಿಂದೂಸ್ತಾನ್ ಕನ್ಸ್ಟ್ರಕ್ಷನ್ ಕಂಪನಿ (ಎಚ್ಸಿಸಿ) ನಿರ್ಮಾಣ ಕಾರ್ಯ ನಡೆಸುತ್ತಿದ್ದಾಗ ಸಂಜೆ ನೀರು ಏಕಾಏಕಿ ಸುರಂಗದೊಳಗೆ ಪ್ರವೇಶಿಸಿದೆ, ಕನಿಷ್ಠ 22 ಜ ಸಿಕ್ಕಿ ಹಾಕಿಕೊಂಡಿದ್ದರು. ಪೊಲೀಸರು, ಎಸ್ಡಿಆರ್ಎಫ್, ಸಿಐಎಸ್ಎಫ್ ಮತ್ತು ಸ್ಥಳೀಯ ಆಡಳಿತವನ್ನು ರಕ್ಷಣಾ ಕಾರ್ಯಾಚರಣೆ ಕೈಗೊಂಡು 20 ಜನರನ್ನು ರಕ್ಷಿಸಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿವೆ. ಅವರಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ.
ಇನ್ನೂ ಇಬ್ಬರು ಕಾರ್ಮಿಕರು ಸುರಂಗದೊಳಗೆ ಸಿಲುಕಿದ್ದಾರೆ, ಅವರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಗೌರವ್ ಕುಮಾರ್ ಮತ್ತು ಎನ್ಡಿಆರ್ಎಫ್ ಮುಖ್ಯಸ್ಥ ಅಮೃತ್ ಲಾಲ್ ಮೀನಾ ಖುದ್ದಾಗಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಯುದ್ಧೋಪಾದಿಯಲ್ಲಿ ನಡೆಸುವಂತೆ ಸಂಬಂಧಿತ ಸಂಸ್ಥೆಗಳಿಗೆ ಸೂಚಿಸಿದ್ದಾರೆ. ಕಾರ್ಮಿಕರು ಸುರಂಗದೊಳಗೆ ಬಲವರ್ಧಕ ಕಬ್ಬಿಣದ ಸರಳುಗಳನ್ನು ವೆಲ್ಡಿಂಗ್ ಮಾಡುತ್ತಿದ್ದಾಗ ಭೂಕುಸಿತಗೊಂಡು ಅವಶೇಷಗಳು ಹಾಗೂ ನೀರು ಸುರಂಗದೊಳಗೆ ನುಗ್ಗಿದೆ ಎನ್ನಲಾಗಿದೆ.


