ಸರ್ಕಾರದ ಕಾಮಗಾರಿಗಳ ಗುತ್ತಿಗೆ ವಹಿಸಿಕೊಂಡಿರುವ ಕಾಂಟ್ರಾಕ್ಟರ್ ರಾಮಕೃಷ್ಣೇಗೌಡ ಮನೆ, ಎಂ ಪ್ರೋ ಪ್ಯಾಲೇಸ್, ಹೋಟೆಲ್, ಕಲ್ಯಾಣ ಮಂಟಪ ಸೇರಿದಂತೆ ಮೈಸೂರಿನ ಹಲವೆಡೆ ಬುಧವಾರ ಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಆಸ್ತಿಗಳ ಮತ್ತು ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಮೈಸೂರಿನ ದೇವೇಗೌಡ ವೃತ್ತದ ಬಳಿ ಇರುವ ಎಂ ಪ್ರೋ ಪ್ಯಾಲೇಸ್ ಬಳಿ ಬರುತ್ತಿದ್ದಂತೆಯೇ ಭದ್ರತಾ ಸಿಬ್ಬಂದಿಯ ಮೊಬೈಲ್ ಕಿತ್ತುಕೊಂಡಿರುವ ಐಟಿ ಅಧಿಕಾರಿಗಳು 3 ಗಂಟೆಗಳಿಂದ ಪರಿಶೀಲನೆ ಮಾಡುತ್ತಿದ್ದಾರೆ.
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಗುತ್ತಿಗೆದಾರ ರಾಮಕೃಷ್ಣೇಗೌಡ ನಿವಾಸದ ಮೇಲೂ ದಾಳಿ ನಡೆದಿದೆ. ರಾಮಕೃಷ್ಣೇಗೌಡ ಸರ್ಕಾರದ ಕಂಟ್ರಾಕ್ಟರ್ ಕೆಲಸ ಮಾಡಿಸುತ್ತಿದ್ದಾರೆ. ಇಟ್ಟಿಗೆ ಫ್ಯಾಕ್ಟರಿ ಹಾಗೂ ಇತರ ವ್ಯವಹಾರ ನಡೆಸುತ್ತಿದ್ದಾರೆ.
ರಾಮಕೃಷ್ಣೇಗೌಡ ನಿವಾಸದಲ್ಲಿ ಐಟಿ ಅಧಿಕಾರಿಗಳಿಂದ ಶೋಧ ಕಾರ್ಯ ಮುಂದುವರಿದಿದೆ. ರಾಮಕೃಷ್ಣೇಗೌಡರ ಕಾರನ್ನೂ ಐಟಿ ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ. ಕಾರಿನಲ್ಲಿದ್ದ ದಾಖಲೆ ಪತ್ರಗಳನ್ನು ಮನೆಯೊಳಗೆ ಕೊಂಡೊಯ್ದು ಪರಿಶೀಲನೆ ಮುಂದುವರಿಸಿದ್ದಾರೆ.