ವಿಜಯಪುರ ನಗರದ ಹೊರಭಾಗದಲ್ಲಿರುವ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ ಆರು ಜನರ ಶವ ಪತ್ತೆಯಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ತಾಯಿ ಶೋಭಾ ಜಾಲಗೇರಿ (45), ವಿದ್ಯಾ (16), ಸುವರ್ಣ (14), ಗೌಡೇಶ್ (ಮೂಗ) (10), ವಿಕಾಸ (5) ಸಾನಿಕಾ (7) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಶೋಭಾ ಮತ್ತು ಗಂಡ ಮಲಕಾರಿಗೆ ಆಗಸ್ಟ್ ೨೩ರಂದು ಜಗಳ ನಡೆದಿತ್ತು. ಆಗ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಆಕೆ ಮನೆಯಿಂದ ಹೊರಟಿದ್ದರು ಎನ್ನಲಾಗಿದೆ. ಆಗಸ್ಟ್ ೨೪ರಂದು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಇಂದು ಬುಧವಾರ ಭೂತನಾಳ ಕೆರೆಯಲ್ಲಿ 6 ಜನರ ಶವ ಪತ್ತೆಯಾಗಿವೆ. ವಾಯುವಿಹಾರಕ್ಕಾಗಿ ಬಂದಿದ್ದ ಸಂತೋಷ ಎಂಬವರು ಶವಗಳನ್ನು ನೋಡಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ವರದಿ ಪ್ರಕಾರ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


