ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಯೊಳಗೆ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆ.೪ರಂದು ಪ್ರಾಣಿ ವಧೆ, ಮಾಂಸ ಮಾರಾಟಕ್ಕೆ ನಿಷೇಧ ವಿಧಿಸಲಾಗಿದೆ. ಜಿಬಿಎ ಉಪನಿರ್ದೇಶಕರು (ಪಶುಪಾಲನೆ) ಆದೇಶ ಹೊರಡಿಸಿದ್ದು, ಕಟ್ಟುನಿಟ್ಟಾಗಿ ಪಾಲಿಸುವಂತೆ ಮಾಂಸದ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರಿಗೆ ಸೂಚಿಸಿದ್ದಾರೆ.
ಜಿಬಿಎ ವ್ಯಾಪ್ತಿಯಲ್ಲಿರುವ ಕಸಾಯಿಖಾನೆಗಳು, ಮಾಂಸದ ಮಳಿಗೆಗಳು ಸೇರಿದಂತೆ ಸಂಬಂಧಿತ ವ್ಯಾಪಾರ ಕೇಂದ್ರಗಳಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಡೆಸುವಂತಿಲ್ಲ ಎಂದು ಸೂಚಿಸಲಾಗಿದೆ.
ಜಿಬಿಎ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 4ರಂದು ಯಾವುದೇ ಪ್ರಾಣಿವಧೆ ನಡೆಸುವಂತಿಲ್ಲ. ಮಾಂಸದ ಅಂಗಡಿಗಳಲ್ಲಿ ಮಾಂಸ ಮಾರಾಟಕ್ಕೂ ಅವಕಾಶ ಇರುವುದಿಲ್ಲ. ಹಬ್ಬದ ಹಿನ್ನೆಲೆ ಈ ನಿರ್ಬಂಧ ಜಾರಿಗೊಳಿಸಲಾಗುತ್ತಿದ್ದು, ಆದೇಶ ಉಲ್ಲಂಘಿಸುವವರ ವಿರುದ್ಧ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
ಮಾಂಸ ವ್ಯಾಪಾರ ನಡೆಸುವವರು ಸೆಪ್ಟೆಂಬರ್ 4ರಂದು ಅಂಗಡಿಗಳನ್ನು ಮುಚ್ಚಬೇಕು. ಜಿಬಿಎ ಅಧಿಕಾರಿಗಳು ಆದೇಶ ಪಾಲನೆಯ ಬಗ್ಗೆ ಪರಿಶೀಲನೆ ನಡೆಸುವ ಸಾಧ್ಯತೆಯಿದೆ. ಕರ್ನಾಟಕದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೆಲವು ಪ್ರಮುಖ ಧಾರ್ಮಿಕ ಹಾಗೂ ರಾಷ್ಟ್ರೀಯ ಹಬ್ಬಗಳ ಸಂದರ್ಭದಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟಕ್ಕೆ ನಿರ್ಬಂಧ ವಿಧಿಸುವುದು ನಡೆದುಕೊಂಡು ಬಂದಿದೆ. ಧಾರ್ಮಿಕ ಆಚರಣೆಗಳು ಹಾಗೂ ಅಹಿಂಸೆಯ ಸಂದೇಶವನ್ನು ಗೌರವಿಸುವ ಉದ್ದೇಶದಿಂದ ಈ ರೀತಿಯ ಆದೇಶ ಜಾರಿಗೊಳಿಸಲಾಗುತ್ತದೆ.
ಶ್ರೀಕೃಷ್ಣ ಜನ್ಮಾಷ್ಟಮಿಯೂ ಪ್ರಮುಖ ಧಾರ್ಮಿಕ ಹಬ್ಬವಾಗಿರುವ ಹಿನ್ನೆಲೆ ಜಿಬಿಎ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಹಾಗೂ ಪ್ರಾಣಿವಧೆ ನಿಷೇಧಿಸಲಾಗಿದೆ. ಹಬ್ಬದ ದಿನದಂದು ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಂಗಳೂರಿನ ದೇವಾಲಯಗಳು ಮತ್ತು ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪೂಜೆ, ಭಜನೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಾರ್ವಜನಿಕರು ಹಾಗೂ ಮಾಂಸ ಮಾರಾಟಗಾರರು ಆಡಳಿತದ ನಿರ್ದೇಶನಗಳನ್ನು ಪಾಲಿಸುವುದು ಕಡ್ಡಾಯವಾಗಿದೆ.


